ಕನ್ನಡಪ್ರಭ ವಾರ್ತೆ ಪಾವಗಡ:
ಇಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಆಶಾ ಕಾರ್ಯಕರ್ತರೊಂದಿಗೆ ರಾಜವಂತಿ, ನಾಗಲಮಡಿಕೆ ಹಾಗೂ ಕೊಡಮಡುಗು ಗಡಿ ಭಾಗಗಳಲ್ಲಿ ತೀವ್ರ ನಿಗಾ ವಹಿಸಿದ್ದು, ಆಂಧ್ರಪ್ರದೇಶದಿಂದ ಆಗಮಿಸುವ ಪ್ರಯಾಣಿಕರ ಆರೋಗ್ಯವನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರಿಶೀಲಿಸಿ, ಕೋವಿಡ್ ಸೋಂಕಿನ ಲಕ್ಷಣಗಳ ಬಗ್ಗೆ ತಪಾಸಣೆ ನಡೆಸಲಾಗುತ್ತಿದೆ. ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಸೋಂಕು ಹರಡದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಆತಂಕಪಡದೆ ಮುನ್ನೆಚ್ಚರಿಕೆ ಪಾಲಿಸುವಂತೆ ಆರೋಗ್ಯ ಇಲಾಖೆಯ ಹಿರಿಯ ವೈದ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.
ಈ ಕುರಿತು ತಹಸೀಲ್ದಾರ್ ವೈ.ರವಿ ಮಾತನಾಡಿ, ಕೋವಿಡ್-19 ವೈರಸ್ ಹರಡುವುದನ್ನು ನಿಯಂತ್ರಿಸುವ ಸಂಬಂಧ ಪಾವಗಡದ ಆಂಧ್ರಪ್ರದೇಶದ ಗಡಿ ಭಾಗಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ, ಪಕ್ಕದ ಆಂಧ್ರಪ್ರದೇಶದಲ್ಲಿ ಕೋವಿಡ್ -19 ವೈರಸ್ ಸೋಂಕಿನಿಂದ ಇಬ್ಬರು ಮೃತಪಟ್ಟಿರುವುದು ಕಂಡು ಬಂದಿದ್ದು ಜಿಲ್ಲಾಡಳಿತದ ಕಟ್ಟುನಿಟ್ಟಿನ ಆದೇಶದ ಮೇರೆಗೆ ತಾಲೂಕು ಆಡಳಿತ ಸಜ್ಜಾಗಿ ಸ್ಥಳೀಯ ಗ್ರಾಪಂ ಸಿಬ್ಬಂದಿ ಜತೆ ಆರೋಗ್ಯ ಇಲಾಖೆಯಿಂದ 5 ಕಡೆ ತಾಲೂಕಿನ ಗಡಿ ಪ್ರದೇಶಗಳಲ್ಲಿ ಜನಸಾಮಾನ್ಯರಿಗೆ ತಪಾಸಣೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.