ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಮಾರ್ಗಸೂಚಿ ಪ್ರಕಟವಾಗಲಿದ್ದು, ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೊರೋನಾ ಕುರಿತ ಸಚಿವ ಸಂಪುಟ ಉಪ ಸಮಿತಿಯು ಮಂಗಳವಾರ ಮೊದಲ ಸಭೆ ನಡೆಸಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಡಾ.ಎಂ.ಸಿ. ಸುಧಾಕರ್, ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.ಸಭೆ ಬಳಿಕ ನಿರ್ಣಯಗಳನ್ನು ಪ್ರಕಟಿಸಿದ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಕೊರೋನಾ ಸೋಂಕು ದೃಢಪಟ್ಟ ಪ್ರತಿಯೊಬ್ಬರೂ ಕಡ್ಡಾಯವಾಗಿ ಏಳು ದಿನಗಳ ಕಾಲ ಹೋಂ ಐಸೊಲೇಷನ್ನಲ್ಲಿ (ಮನೆಯಲ್ಲೇ ಪ್ರತ್ಯೇಕವಾಗಿರಬೇಕು) ಇರಬೇಕು. ಈ ಬಗ್ಗೆ ಸ್ಥಳೀಯ ವೈದ್ಯರು ನಿಗಾ ಇಡಲಿದ್ದಾರೆ. ಉಳಿದಂತೆ ಸೋಂಕು ಲಕ್ಷಣ ಉಲ್ಬಣಗೊಂಡು ಚಿಕಿತ್ಸೆ ಅಗತ್ಯವಿರುವವರು ಮಾತ್ರ ಕೊರೋನಾ ಚಿಕಿತ್ಸೆಗೆ ಮೀಸಲಾದ ಆಸ್ಪತ್ರೆಗಳಿಗೆ ದಾಖಲಾಗಬೇಕು ಎಂದು ಸ್ಪಷ್ಟಪಡಿಸಿದರು.
ಸೋಂಕು ದೃಢಪಟ್ಟ ಸರ್ಕಾರಿ ಹಾಗೂ ಸರ್ಕಾರೇತರ ಉದ್ಯೋಗಿಗಳಿಗೆ ಏಳು ದಿನಗಳ ರಜೆ ನೀಡುವಂತೆ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಿಗೆ ಆದೇಶ ಹೊರಡಿಸಲಾಗುವುದು. ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗುವವರಿಗೆ ಅಗತ್ಯವಿರುವ ದಿನಗಳವರೆಗೆ ವಿಶೇಷ ರಜೆ ಮಂಜೂರು ಮಾಡಬೇಕು. ಈ ಬಗ್ಗೆ ಸದ್ಯದಲ್ಲೇ ಆದೇಶ ಹೊರಡಿಸಲಾಗುವುದು ಎಂದರು.
ಮಕ್ಕಳಲ್ಲಿ ವೇಗವಾಗಿ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜ್ವರ, ನೆಗಡಿ ಸೇರಿದಂತೆ ಯಾವುದೇ ಅನಾರೋಗ್ಯ ಸಮಸ್ಯೆ ಕಾಣಿಸಿದರೂ ಅಂತಹ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಾರದು. ಮನೆಯಲ್ಲೇ ಸೂಕ್ತ ಆರೈಕೆಗೆ ಮಾರ್ಗಸೂಚಿ ಹೊರಡಿಸಲು ನಿರ್ಧಾರ ಮಾಡಲಾಗಿದೆ. ಅಗತ್ಯ ಎನಿಸಿದರೆ ಪೋಷಕರು ಕೊರೋನಾ ಪರೀಕ್ಷೆ ಮಾಡಿಸಬಹುದು. ಆದರೆ ಕಡ್ಡಾಯವಲ್ಲ ಎಂದು ಹೇಳಿದರು.
ಇನ್ನು ಜೆಎನ್.1 ಉಪತಳಿಯ 34 ಸೋಂಕು ದೃಢಪಟ್ಟಿದ್ದರೂ ಆತಂಕಪಡುವ ಅಗತ್ಯವಿಲ್ಲ. ಗಡಿ ಭಾಗದಲ್ಲಾಗಲಿ, ವಿಮಾನ ನಿಲ್ದಾಣಗಳಲ್ಲಿ ಆಗಲಿ ಥರ್ಮಲ್ ಸ್ಕ್ರೀನಿಂಗ್ ಮಾಡಲು ನಾವು ನಿರ್ಧರಿಸಿಲ್ಲ. ಸಾರ್ವಜನಿಕರಿಗೆ ಸೋಂಕು ಲಕ್ಷಣ ಕಂಡು ಬಂದರೆ ಪರೀಕ್ಷೆ ಮಾಡಿಸಿಕೊಳ್ಳಬಹುದು. ನೆರೆ ರಾಜ್ಯ, ಬೇರೆ ದೇಶಗಳಲ್ಲೂ ಥರ್ಮಲ್ ಸ್ಕ್ರೀನಿಂಗ್ ಮಾಡುತಿಲ್ಲ. ಹೀಗಾಗಿ ನಾವೂ ಮಾಡುವುದಿಲ್ಲ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
ಹೆಚ್ಚುವರಿ ನಿರ್ಬಂಧ ಇಲ್ಲ
ಹೊಸ ವರ್ಷಾಚರಣೆಗೂ ನಿರ್ಬಂಧವಿಲ್ಲ
ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ
ಕೊರೋನಾ ಹೆಚ್ಚಳ ಆಶ್ಚರ್ಯಪಡುವ ವಿಚಾರವೂ ಅಲ್ಲ, ಆತಂಕಪಡುವ ವಿಚಾರವೂ ಅಲ್ಲ. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ. ನಾವು ಸಲಹೆ-ಸೂಚನೆ ನೀಡುತ್ತೇವೆ. ಅದನ್ನು ಪಾಲಿಸುವುದು, ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಸಾರ್ವಜನಿಕರ ಜವಾಬ್ದಾರಿ.ದಿನೇಶ್ ಗುಂಡೂರಾವ್ ಆರೋಗ್ಯ ಸಚಿವ