ಕೋಲಾರ: ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಖಾಸಗಿ ಕಂಪನಿಗಳಿಗೆ ವಹಿಸಬಾರದು ಎಂದು ಒತ್ತಾಯಿಸಿ ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಸಿಪಿಐಎಂ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸ್ಮಾರ್ಟ್ ಮೀಟರ್ಗಳನ್ನು ಅಳವಡಿಸದಂತೆ ವಿಶ್ವಸಂಸ್ಥೆ ಈಗಾಗಲೇ ಎಚ್ಚರಿಕೆ ನೀಡಿದ್ದರೂ ಅದನ್ನು ಮೀರಿ ಭಾರತದಲ್ಲಿ ಈ ವ್ಯವಸ್ಥೆಗೆ ಮುಂದಾಗುತ್ತಿರುವುದು ಅಪಾಯದ ಮುನ್ಸೂಚನೆಯಾಗಿದೆ. ಈ ಬಗ್ಗೆ ಧ್ವನಿ ಎತ್ತುವುದು ಅತೀ ಅಗತ್ಯವಾಗಿದೆ ಕೇಂದ್ರ ಸರ್ಕಾರ ಜಾರಿಗೆ ತಂದ ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧ ದೇಶಾದ್ಯಂತ ರೈತರು ಹೋರಾಟ ನಡೆಸಿದ್ದ ಹಿನ್ನೆಲೆಯಲ್ಲಿ ಅವುಗಳನ್ನು ಹಿಂಪಡೆಯಲಾಗಿತ್ತು. ಆದರೆ ರಾಜ್ಯ ಸರ್ಕಾರಗಳು ತಮ್ಮ ಇಚ್ಛೆಯಂತೆ ಇಂತಹ ನೀತಿಗಳನ್ನು ಜಾರಿಗೆ ತರಲು ಅವಕಾಶ ನೀಡಿರುವುದರಿಂದ ಕರ್ನಾಟಕದಲ್ಲೂ ಖಾಸಗೀಕರಣ ಪ್ರಕ್ರಿಯೆ ಮುಂದುವರಿಯುತ್ತಿದೆ ಎಂದು ದೂರಿದರು.
ರೈತರು, ಗ್ರಾಮೀಣ ಜನತೆ ಹಾಗೂ ಸಾಮಾನ್ಯ ಗ್ರಾಹಕರ ಹಿತದೃಷ್ಟಿಯಿಂದ ಸರ್ಕಾರ ವಿದ್ಯುತ್ ಖಾಸಗೀಕರಣದ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಗಾಂಧಿನಗರ ನಾರಾಯಣಸ್ವಾಮಿ, ವಿ.ಗೀತಾ, ತಂಗರಾಜ್, ಮುಖಂಡರಾದ ಪಿ.ಶ್ರೀನಿವಾಸ್, ವಿಜಯಕೃಷ್ಣ, ಎನ.ಎನ್ ಶ್ರೀರಾಮ್, ವಿ. ನಾರಾಯಣರೆಡ್ಡಿ, ಹೆಚ್.ಬಿ. ಕೃಷ್ಣಪ್ಪ, ಆಶಾ, ಭೀಮರಾಜ್, ಭದ್ರಿನಾಥ್, ಪಿಚ್ಚಕಣ್ಣು ಮುಂತಾದವರು ಇದ್ದರು.