ಕನ್ನಡಪ್ರಭ ವಾರ್ತೆ ಮದ್ದೂರು
ನಗರದ ತಾಪಂ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಕುಂದುಕೊರತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಮದ್ದೂರು ತಾಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ತುಮಕೂರು ಹೆದ್ದಾರಿಯಲ್ಲಿ ಕಳೆದ ತಿಂಗಳು ಅಕ್ರಮವಾಗಿ ಸಾಗಿಸುತ್ತಿದ್ದ 111 ಕೆ.ಜಿ. ಗಾಂಜಾವನ್ನು ಖಚಿತ ಮಾಹಿತಿ ಮೇರೆಗೆ ವಶಪಡಿಸಿಕೊಳ್ಳಲಾಗಿದೆ ಎಂದರು.
ರಾಮ್ ರಹೀಮ್ ನಗರದ ಆಸುಪಾಸಿನ ಹಲವು ಕಡೆಗಳಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂದು ದೂರು ಸಾರ್ವಜನಿಕರಿಂದಲೂ ಕೇಳಿ ಬಂದಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯ ಪೊಲೀಸರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.ಕಳೆದ 6 ತಿಂಗಳಿಂದೀಚೆಗೆ ಅಕ್ರಮ ಮದ್ಯ ಮಾರಾಟ ಸಂಬಂಧ 414 ಪ್ರಕರಣ ದಾಖಲು ಮಾಡಿದ್ದೇವೆ. 80ಕ್ಕೂ ಅಧಿಕ ಡ್ರಗ್ಸ್ ಪೆಡ್ಲರ್ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.
ನಗರದ ಪೊಲೀಸ್ ಠಾಣೆಯಲ್ಲಿ ಹಲವು ತಿಂಗಳಿನಿಂದ ಲ್ಯಾಂಡ್ ಲೈನ್ ದೂರವಾಣಿ ಸಂಪರ್ಕ ಇಲ್ಲದಿರುವುದರಿಂದ ದೂರು ನೀಡಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಪ್ರತ್ಯೇಕ ಮಹಿಳಾ ಕೊಠಡಿ ಇಲ್ಲ. ಮಹಿಳೆಯರ ದೂರುಗಳನ್ನು ಮಹಿಳಾ ಪೊಲೀಸರು ವಿಚಾರಣೆ ನಡೆಸಬೇಕೆಂದು ಸಭೆಯಲ್ಲಿ ಸಾರ್ವಜನಿಕರೊಬ್ಬರು ಆರೋಪಿಸಿದರು. ಇದಕ್ಕೆ ಎಸ್ಪಿಯವರು ಸಿಪಿಐ ನವೀನ್ ಕುಮಾರ್ ಅವರಿಂದ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಮಧ್ಯರಾತ್ರಿವರೆಗೂ ಪೆಟ್ಟಿ ಅಂಗಡಿಗಳಲ್ಲಿ ಮದ್ಯ ಮಾರಾಟದಿಂದ ಅಹಿತಕರ ಘಟನೆಗಳು ಆಗಿಂದಾಗ್ಗೆ ಜರುಗುತ್ತಿವೆ. ನಗರದಲ್ಲಿ ಸೂಕ್ತ ಪೊಲೀಸ್ ಚೌಕಿ ನಿರ್ಮಿಸಬೇಕು. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪೊಲೀಸರು ಹೆಚ್ಚಿನ ನಿಗಾ ಇಡಬೇಕು ಎಂದು ಮುಖಂಡ ವಿಜೇಂದ್ರ ಕುಮಾರ್ ಮನವಿ ಮಾಡಿದರು.
ಇನ್ನು ನಗರದ ಪ್ರವಾಸಿ ಮಂದಿರ, ಕೊಲ್ಲಿ ವೃತ್ತ, ಕೊಪ್ಪ ವೃತ್ತ ಹಾಗೂ ತಿಮ್ಮದಾಸ್ ಹೋಟೆಲ್ ವೃತ್ತಗಳಲ್ಲಿ ಸಿಗ್ನಲ್ ದೀಪಗಳ ಇರದೆ ಸಾಕಷ್ಟು ಅಪಘಾತಗಳು ಸಂಭವಿಸುತ್ತಿದ್ದು, ಆದಷ್ಟು ಬೇಗ ಸಿಗ್ನಲ್ ದೀಪಗಳನ್ನು ಅಳವಡಿಸುವಂತೆ ಸಭೆಯಲ್ಲಿ ಮನವಿ ಮಾಡಲಾಯಿತು. ಈಗಾಗಲೇ ಈ ಸಂಬಂಧ ಮೇಲಾಧಿಕಾರಿಗಳಿಗೆ ಮನವಿ ಮಾಡಲಾಗಿದ್ದು, ಇನ್ನು ಕೆಲವು ದಿನಗಳಲ್ಲೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.