ಕನ್ನಡಪ್ರಭ ವಾರ್ತೆ, ತುಮಕೂರುನಗರದ ರೈಲ್ವೆ ನಿಲ್ದಾಣಕ್ಕೆ ಕೇಂದ್ರ ಸರ್ಕಾರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳು ಹಾಗೂ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.ನಿಲ್ದಾಣದ ಶೌಚಾಲಯದ ದುರ್ವಾಸನೆ, ದುಸ್ಥಿತಿ ಪರಿಸ್ಥಿತಿ ಕಂಡ ಸಚಿವ ಸೋಮಣ್ಣ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಶೌಚಾಲಯವನ್ನು ಸ್ವಚ್ಛವಾಗಿಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೊರಗಿನಿಂದ ನಗರಕ್ಕೆ ಬರುವ ಪ್ರಯಾಣಿಕರಿಗೆ ತುಮಕೂರು ಬಗ್ಗೆ ಅಭಿಮಾನ ಮೂಡುವಂತೆ ರೈಲ್ವೆ ನಿಲ್ದಾಣದಲ್ಲಿ ಉತ್ತಮ ವಾತಾವರಣ ಕಲ್ಪಿಸಿ, ಸ್ವಚ್ಛತೆ ಕಾಪಾಡಬೇಕು ಎಂದು ಹೇಳಿದರು.ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಬಿಜಿಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪಂಚಾಯ್ತಿ ಸಿಇಓ ಪ್ರಭು, ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಮತ್ತಿತರ ಮುಖಂಡರು ಹಾಜರಿದ್ದರು.ನಗರದಿಂದ ಬೆಂಗಳೂರಿಗೆ ಹೆಚ್ಚುವರಿ ರೈಲು ಹಾಗೂ ಹೆಚ್ಚುವರಿ ಜನರಲ್ ಬೋಗಿಗಳ ವ್ಯವಸ್ಥೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ರೈಲ್ವೆ ಪ್ರಯಾಣಿಕರ ವೇದಿಕೆ ಮುಖಂಡರು ಸಚಿವರಿಗೆ ಮನವಿ ಮಾಡಿದರು.15ನೇ ವಾರ್ಡಿನ ಮಾಜಿ ನಗರ ಪಾಲಿಕೆ ಸದಸ್ಯ ಗಿರಿಜ ಧನಿಯಾಕುಮಾರ್ ನೇತೃತ್ವದಲ್ಲಿ ವಾರ್ಡಿನ ನಾಗರೀಕರು ಸಚಿವರನ್ನು ಸ್ವಾಗತಿಸಿ ವಿವಿಧ ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆದು ಬಗೆಹರಿಸಲು ಮನವಿ ಮಾಡಿದರು.ರೈಲ್ವೆ ಇಲಾಖೆಯಿಂದ ನಗರ ವ್ಯಾಪ್ತಿಯಲ್ಲಿ ರೈಲ್ವೆ ಹಳಿಯ ಎರಡೂ ಕಡೆ ತಡೆಗೋಡೆ ನಿರ್ಮಿಸಲಾಗುತ್ತಿದೆ. ಇದರಿಂದ ಇಂದು ಭಾಗದಿಂದ ಇನ್ನೊಂದು ಭಾಗಕ್ಕೆ ನಾಗರಿಕರು ಹಳಿ ದಾಟಿ ಹೋಗಲು ತೊಂದರೆಯಾಗಿದೆ. ರೈಲು ನಿಲ್ದಾಣದ ಬಳಿ ಶಾಂತಿ ನಗರ ಸುತ್ತಮುತ್ತಲ ನಿವಾಸಿಗಳು ತಮ್ಮ ದಿನನಿತ್ಯದ ವ್ಯವಹಾರಗಳಿಗೆ ದೂರದ ರಸ್ತೆಯಲ್ಲಿ ಬಳಸಿಕೊಂಡು ಓಡಾಡುವಂತಾಗಿದೆ. ಈ ಭಾಗದಲ್ಲಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಮಾಡಿ ಪಾದಚಾರಿಗಳ ಓಡಾಟಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.ರೈಲ್ವೆ ನಿಲ್ದಾಣದಲ್ಲಿ ಒಳಚರಂಡಿ ಸಮಸ್ಯೆಯಿದ್ದು ಪ್ರಯಾಣಿಕರು ದುರ್ವಾಸನೆಯಿಂದ ಪ್ರಯಾಣಿಕರು ಯಾತನೆ ಅನುಭವಿಸುವಂತಾಗಿದೆ. ಈ ಸಮಸ್ಯೆ ನಿವಾರಿಸಬೇಕು. ವ್ಯವಸ್ಥಿತವಾದ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ನಿಲ್ದಾಣದಲ್ಲಿ ಪ್ರಯಾಣಿಕರ ತಂಗುದಾಣ, ಮಿನಿ ಆರೋಗ್ಯ ಕೇಂದ್ರ ಸ್ಥಾಪನೆ ಮಾಡಿ ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಮುಖಂಡ ಧನಿಯಾಕುಮಾರ್ ಕೋರಿದರು.ಈ ರೈಲು ನಿಲ್ದಾಣವನ್ನು ಹೈಟೆಕ್ ನಿಲ್ದಾಣವಾಗಿ ಅಭಿವೃದ್ಧಿಪಡಿಸಿ, ಸುಸಜ್ಜಿತ ಸೌಲಭ್ಯ ಒದಗಿಸುವುದಾಗಿ ಸಚಿವ ವಿ.ಸೋಮಣ್ಣ ನಾಗರೀಕರಿಗೆ ಭರವಸೆ ನೀಡಿದರು.