ಎಸ್‌ಸಿ, ಎಸ್‌ಟಿ ಸಮುದಾಯಕ್ಕಿರುವ ಸೌಲಭ್ಯಗಳ ಜಾಗೃತಿ ಮೂಡಿಸಿ: ಡಿಸಿ

KannadaprabhaNewsNetwork |  
Published : Mar 25, 2025, 12:52 AM IST
ಚಿತ್ರ :  24ಎಂಡಿಕೆ2 : ಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.  | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮಾಜದವರಿಗೆ ಇರುವ ಸೌಲಭ್ಯಗಳ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು. ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಅಧಿಕಾರಿಗಳ ಜೊತೆ ಕೈಜೋಡಿಸಬೇಕು. ಕಾನೂನು ಪ್ರಕಾರ ಸೌಲಭ್ಯಗಳನ್ನು ಪಡೆಯಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.ಸಮಿತಿ ನೂತನ ಸದಸ್ಯ ಮಾತನಾಡಿ, ಜೆ.ಎಲ್.ಜನಾರ್ದನ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ವಾಸಿಸುವ ಪ್ರದೇಶದಲ್ಲಿ ಅಗತ್ಯ ಮೂಲಸೌಲಭ್ಯ ಕಲ್ಪಿಸುವಂತಾಗಬೇಕು. ಪಡಿತರ ಚೀಟಿಯನ್ನು ಆದ್ಯತೆ ಮೇಲೆ ವಿತರಿಸುವಂತಾಗಬೇಕು. ಪರಿಶಿಷ್ಟರ ಕಾಲೋನಿಗಳಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್, ವಸತಿ ಸೌಲಭ್ಯ ಹೀಗೆ ಹಲವು ಮೂಲಸೌಲಭ್ಯ ಒದಗಿಸಬೇಕು. ಜೊತೆಗೆ ಹಕ್ಕುಪತ್ರವನ್ನು ವಿತರಿಸುವಂತಾಗಬೇಕು ಎಂದು ಮನವಿ ಮಾಡಿದರು. ಮತ್ತೊಬ್ಬ ಸದಸ್ಯರಾದ ಜಾಯ್ಸ್ ಮೆನೇಜಸ್ ಮಾತನಾಡಿ, ಮಹಿಳಾ ಎಸ್‌ಸಿ, ಎಸ್‌ಟಿ ಗುಂಪುಗಳನ್ನು ಆರ್ಥಿಕವಾಗಿ ಬಲಪಡಿಸಲು ಮುಂದಾಗಬೇಕು. ಬಾಳೆಗುಂಡಿ, ಬಜೆಗುಂಡಿ, ವಾಲ್ನೂರು ಮತ್ತಿತರ ಕಾಲೋನಿಗಳಲ್ಲಿ ವಾಸಿಸುವ ಪರಿಶಿಷ್ಟ ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ನೀಡುವಂತಾಗಬೇಕು ಎಂದು ಕೋರಿದರು.ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಮಾತನಾಡಿ, ಸೋಮವಾರಪೇಟೆ ತಾಲೂಕಿನ ಊರುಡುವೆ ಜಾಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳು ವಾಸಿಸುತ್ತಿದ್ದು, ಈ ಜಾಗಕ್ಕೆ ಹಕ್ಕುಪತ್ರ ವಿತರಿಸುವ ಬಗ್ಗೆ ಕಳೆದ ಬಾರಿ ಚರ್ಚಿಸಲಾಗಿತ್ತು, ಅದರಂತೆ ಕ್ರಮಕೈಗೊಳ್ಳಲಾಗಿದೆ ಎಂದರು.ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, 2005ರೊಳಗೆ ವಾಸಿಸುತ್ತಿರುವವರ ಬಗ್ಗೆ ದಾಖಲೆಗಳನ್ನು ನೀಡಬೇಕು. ಊರುಡುವೆ ಜಾಗವು ಅರಣ್ಯ ವ್ಯಾಪ್ತಿಯ ಪ್ರದೇಶದಲ್ಲಿ ಬರಲಿದ್ದು, ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಮಾದಾಪುರ ರಸ್ತೆಯು ಹಿರಿಸೇವೆ- ಚೆಟ್ಟಳ್ಳಿ ರಾಜ್ಯ ಹೆದ್ದಾರಿಯಾಗಿದ್ದು, ಪ್ರಸಕ್ತ ವಾರ್ಷಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದ್ದು, ಗುಂಡಿ ಮುಚ್ಚಿ ಸಂಚಾರಕ್ಕೆ ಅನುವು ಮಾಡಲಾಗಿದೆ ಎಂದು ಶೇಖರ್ ತಿಳಿಸಿದರು.ಪೌರಕಾರ್ಮಿಕರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಿ:

ಸಫಾಯಿ ಕರ್ಮಚಾರಿಗಳ/ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್‌ಗಳ ಜಾಗೃತಿ ಸಮಿತಿ ಸಭೆಯಲ್ಲಿ ಮಾತನಾಡಿದ ಸಮಿತಿ ಸದಸ್ಯ ರಂಗಸ್ವಾಮಿ, ಪೌರಕಾರ್ಮಿಕರಿಗೆ ವಿವಿಧ ಅಭಿವೃದ್ಧಿ ನಿಗಮದಲ್ಲಿ ನೇರ ಸಾಲ ಯೋಜನೆ ಒದಗಿಸುವಂತಾಗಬೇಕು ಎಂದು ಕೋರಿದರು.ಗೋಣಿಕೊಪ್ಪದಲ್ಲಿ ಎರಡು ಪೌರಕಾರ್ಮಿಕ ಕುಟುಂಬಗಳು ವಾಸ ಮಾಡುತ್ತಿದ್ದು, ಈ ಪ್ರದೇಶದಲ್ಲಿ ಸ್ವಚ್ಛತೆ ಇಲ್ಲದೆ ತುಂಬಾ ಗಂಭೀರ ಸಮಸ್ಯೆಯಾಗಿದೆ. ಈ ಬಗ್ಗೆ ಗ್ರಾ.ಪಂ. ಪಿಡಿಒ ಬಗೆಹರಿಸಬೇಕು. ಸಿದ್ದಾಪುರದಲ್ಲಿ ಪೌರಕಾರ್ಮಿಕರಿಗೆ ಹಲವು ಸೌಲಭ್ಯ ಕಲ್ಪಿಸಬೇಕು. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಕೋರಿದರು.ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ತಾ.ಪಂ. ಇಒ ಮತ್ತು ಸಮಿತಿ ಸದಸ್ಯರು ಸಿದ್ದಾಪುರಕ್ಕೆ ಖುದ್ದಾಗಿ ಭೇಟಿ ನೀಡಿ ಸಮಸ್ಯೆ ಬಗೆ ಹರಿಸುವಂತೆ ಸೂಚಿಸಿದರು. ಖಾಸಗಿ ಜಾಗದಲ್ಲಿ ವಾಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಹಕ್ಕುಪತ್ರ ನೀಡುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ರಂಗಸ್ವಾಮಿ ಕೋರಿದರು. ಹಾಗೆಯೇ ಸುಂಟಿಕೊಪ್ಪದ ಬಸ್ ನಿಲ್ದಾಣದ ಬಳಿ ಬಸ್ ನಿಲುಗಡೆ ಮಾಡಬೇಕು ಎಂದರು.

ಗ್ರಾ.ಪಂ. ವಾರು ನಿವೇಶನ ರಹಿತರ ಪಟ್ಟಿಗೆ ಪೌರಕಾರ್ಮಿಕರನ್ನು ಸೇರಿಸುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಶೇಖರ್ ಸಲಹೆ ನೀಡಿದರು. ನಗರಾಭಿವೃದ್ಧಿ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ತಹಸೀಲ್ದಾರರಾದ ಪ್ರವೀಣ್ ಕುಮಾರ್, ತಾ.ಪಂ. ಇಒ ಅಪ್ಪಣ್ಣ, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳಾದ ನಾಚಪ್ಪ, ಕೃಷ್ಣಪ್ರಸಾದ್, ಸತೀಶ್, ಇತರರು ಇದ್ದರು.ಯೋಜನೆಗಳು ಶೇ.95ರಷ್ಟು ಪ್ರಗತಿ:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅನುಷ್ಠಾನಗೊಂಡಿರುವ ಕಾರ್ಯಕ್ರಮಗಳ ಸಂಬಂಧ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪ್ರಸಕ್ತ ವರ್ಷದಲ್ಲಿ ಶೇ.95ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮಾರ್ಚ್ 29ರ ವರೆಗೆ ಶೇ.100ರಷ್ಟು ಪ್ರಗತಿ ಸಾಧಿಸಿ ವರದಿ ನೀಡುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.ವೈಯಕ್ತಿಕ ಹಾಗೂ ಸಮುದಾಯ ಸೌಲಭ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ