ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಿಂದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಕನ್ನಡಪ್ರಭ ವಾರ್ತೆ ಕೊಪ್ಪಳಮಳೆಗಾಲ ಆರಂಭವಾಗಿದ್ದು, ವಿವಿಧ ಕಾರಣಗಳಿಂದ ಕುಡಿಯುವ ನೀರಿನ ಮೂಲ, ನೀರು ಸರಬರಾಜು ಮಾರ್ಗಗಳಲ್ಲಿ ನೀರು ಕಲುಷಿತಗೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಇಂತಹ ಸಂದರ್ಭದಲ್ಲಿ ನೀರಿನ ಆಕರ, ಪೂರೈಕೆ ಸ್ಥಳಗಳಲ್ಲಿ ನೀರು ಕುಡಿಯಲು ಯೋಗ್ಯವಲ್ಲ ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಮುಂದೆ ಉಂಟಾಗಬಹುದಾದ ಸಮಸ್ಯೆಗಳಿಗೆ ಮುಂಜಾಗ್ರತಾ ಕ್ರಮ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕುಡಿಯುವ ನೀರಿನ ಮೂಲ ಆಕರಗಳು, ಒಎಚ್ಟಿ, ಮಿನಿ ಟ್ಯಾಂಕ್ಗಳಂತಹ ಸಂಗ್ರಹಗಾರಗಳು ಹಾಗೂ ನೀರು ಸರಬರಾಜು ಮಾಡುವ ಪೈಪ್ಲೈನ್ಗಳಲ್ಲಿ ವಿವಿಧ ಕಾರಣಗಳಿಂದ ನೀರು ಕಲುಷಿತಗೊಳ್ಳುತ್ತದೆ. ಈ ನೀರನ್ನು ಕುಡಿಯಲು ಬಳಸುವುದರಿಂದ ಜನರಲ್ಲಿ ಕಾಯಿಲೆಗಳು ಬರುತ್ತವೆ. ಇದನ್ನು ತಪ್ಪಿಸಲು ಕಲುಷಿತ ನೀರಿನ ಸ್ಥಳಗಳಲ್ಲಿ ನೀರು ಕುಡಿಯಲು ಯೋಗ್ಯವಲ್ಲ ಎಂದು ಬರೆಯಿಸಿ. ಸ್ಥಳೀಯ ಸಂಸ್ಥೆಗಳು ಕೂಡ ಇಂತಹ ಕಲುಷಿತ ನೀರಿನ ಆಕರ, ಸರಬರಾಜು ಕೇಂದ್ರಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು. ಈ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಬೇಕು. ಆರೋಗ್ಯ ಇಲಾಖೆಯಿಂದ ಕಡ್ಡಾಯವಾಗಿ ನಿಯಮಿತವಾಗಿ ನೀರಿನ ಪರೀಕ್ಷೆಗಳನ್ನು ಮಾಡಿಸಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಬಗ್ಗೆ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಎಚ್ಚರಿಕೆ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಪ್ರತಿ ಮೂರು ತಿಂಗಳಿಗೊಮ್ಮೆ ನೀರಿನ ಪರೀಕ್ಷೆ ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ನಿರ್ದಿಷ್ಟ ಸ್ಥಳದಲ್ಲಿ ಪದೇ ಪದೇ ಕಲುಷಿತ ನೀರಿನ ಬಗ್ಗೆ ವರದಿ ಬಂದಲ್ಲಿ ಅಂತಹ ಸ್ಥಳಗಳಿಂದ ಕುಡಿಯುವ ನೀರು ಸರಬರಾಜು ಆಗದಂತೆ ನಿಷೇಧಿಸಿ. ಮುಖ್ಯವಾಗಿ ಸಮಸ್ಯೆ ಬಂದ ಮೇಲೆ ಅದನ್ನು ಪರಿಹರಿಸುವುದಕ್ಕಿಂತ, ಸಮಸ್ಯೆಯ ಮೂಲ ಪತ್ತೆ ಹಚ್ಚಿ ಅದನ್ನು ಪರಿಹರಿಸಿ. ನೀರು ಕಲುಷಿತಗೊಳ್ಳಲು ಮೂಲ ಕಾರಣಗಳನ್ನು ಕಂಡುಹಿಡಿದು ಅದನ್ನು ಸರಿಪಡಿಸಿ. ಪರೀಕ್ಷೆಯಲ್ಲಿ ಕಲುಷಿತ ಎಂದು ವರದಿ ಬಂದ ಮೇಲೆ ನಿಯಮಾನುಸಾರ ನೀರನ್ನು ಶುದ್ಧೀಕರಿಸಿದ ಮೇಲೆಯೇ ಸಾರ್ವಜನಿಕರಿಗೆ ಪೂರೈಕೆ ಮಾಡಬೇಕು. ಇದರೊಂದಿಗೆ ಮಳೆಗಾಲದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಿ, ಎಲ್ಲ ನಗರ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದರು.ಜಿಲ್ಲೆಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಕರ್ಯಗಳು, ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಒದಗಿಸಬೇಕು. ವಸತಿ ನಿಲಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ನಿರ್ದಿಷ್ಟ ಸಂಖ್ಯಾಬಲಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿದ್ದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಅನುಕೂಲ ಮಾಡಿಕೊಡಬೇಕು ಎಂದು ಉಸ್ತುವಾರಿ ಕಾರ್ಯದರ್ಶಿ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಅಂಗನವಾಡಿಗಳಿಗೆ ನಿವೇಶನ ಗುರುತಿಸುವುದು, ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು.ಸಭೆಯಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ತಹಸೀಲ್ದಾರ ವಿಠ್ಠಲ್ ಚೌಗಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ ಸೇರಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.