ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆಯಲ್ಲಿ ಮಾತನಾಡಿ, ತಂಬಾಕು ಸೇವನೆಯಿಂದ ಯುವಜನರಲ್ಲಿ ಶ್ವಾಸಕೋಶದ ತೊಂದರೆಗಳು, ಆಸ್ತಮಾ, ಬ್ರಾಂಕೈಟಿಸ್, ಉಸಿರಾಟದ ತೀವ್ರ ತೊಂದರೆ ಮತ್ತು ಶ್ವಾಸಕೋಶದ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಬಗ್ಗೆ ಯುವಕರಲ್ಲಿ ತಂಬಾಕು ಸೇವನೆಯ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.
ಭಾರತ ಯುವ ಜನತೆ ಮೇಲೆ ಅವಲಂಬಿತವಾಗಿರುವ ದೇಶ. ಜಿಲ್ಲೆಯಲ್ಲಿ ಅನಧಿಕೃತವಾಗಿ ತಂಬಾಕು ಮಾರಾಟ ಮಾಡುವ ಸ್ಥಳಗಳನ್ನು ಗುರುತಿಸಿ ಮಾಹಿತಿ ಪಡೆದು ಪೊಲೀಸ್ ಇಲಾಖೆ ಅಧಿಕಾರಿಗಳು ತಂಬಾಕು ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.ಜಿಲ್ಲೆಯನ್ನು ತಂಬಾಕು ಮುಕ್ತ ಹಾಗೂ ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಯುವಕರು ಆರೋಗ್ಯದ ಮೇಲೆ ಹೆಚ್ಚು ಗಮನ ಹರಿಸಬೇಕು. ದೈನಂದಿನ ಜೀವನದಲ್ಲಿ ಯೋಗ ಮಾಡುವುದರಿಂದ ಆರೋಗ್ಯ ಮುಕ್ತ ಸಮಾಜ ನಿರ್ಮಿಸಲು ಸಾಧ್ಯ ಎಂದು ಹೇಳಿದರು.
ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆ ದಂತ ವೈದ್ಯೆ ಡಾ.ಜೆ.ಡಿ.ಸ್ಮಿತಾ ಮಾತನಾಡಿ, ತಂಬಾಕು ಸೇವನೆಯಿಂದ ದೇಹದ ಪ್ರತಿಯೊಂದು ಅಂಗದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದು ಶ್ವಾಸಕೋಶದ ಕ್ಯಾನ್ಸರ್, ಹೃದಯಾಘಾತ, ಪಾರ್ಶ್ವವಾಯು ಮತ್ತು ದೀರ್ಘಕಾಲದ ಉಸಿರಾಟದ ಕಾಯಿಲೆಗಳಿಗೆ ಪ್ರಮುಖ ಕಾರಣವಾಗಿದೆ ಎಂದರು.
ತಂಬಾಕಿನಲ್ಲಿರುವ ನಿಕೋಟಿನ್ ರಕ್ತನಾಳಗಳನ್ನು ಸಂಕುಚಿತಗೊಳಿಸಿ ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಇದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ಸಂಭವಿಸುವ ಅಪಾಯ ಹೆಚ್ಚು. ಕ್ಯಾನ್ಸರ್, ಬಾಯಿ, ಗಂಟಲು, ಅನ್ನನಾಳ, ಶ್ವಾಸಕೋಶ ಮತ್ತು ಮೂತ್ರಕೋಶ ಸೇರಿ ವಿವಿಧ ಕ್ಯಾನ್ಸರ್ಗಳಿಗೆ ತಂಬಾಕು ಸೇವನೆ ಕಾರಣವಾಗುತ್ತದೆ ಎಂದು ತಿಳಿಸಿದರು.