ಮಕ್ಕಳಿಗೆ ಸ್ಪರ್ಧಾ ಮನೋಭಾವನೆ ಮೂಡಿಸಿ: ಶಾಸಕ ಕಂದಕೂರು

KannadaprabhaNewsNetwork |  
Published : Jun 25, 2024, 12:33 AM IST
ಗುರುಮಠಕಲ್ ಮತಕ್ಷೇತ್ರದ ಕೊಟಗೇರಾ ಗ್ರಾಮದಲ್ಲಿ 24 ಕೋಟಿ ರು.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಕಟ್ಟಡದ ಉದ್ಘಾಟನೆ ವೇಳೆ ಶಾಲಾ ಮಕ್ಕಳೊಂದಿಗೆ ಶಾಸಕ ಶರಣಗೌಡ ಕಂದಕೂರು. | Kannada Prabha

ಸಾರಾಂಶ

ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳೆಂದು ಭಾವಿಸಿ, ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಅವರಲ್ಲಿ ಸ್ಪರ್ಧಾ ಮನೋಭಾವನೆ ಮೂಡಿಸಿದಲ್ಲಿ ಮಾತ್ರ ಅವರಲ್ಲಿರುವ ಪ್ರತಿಭೆ, ಜ್ಞಾನ ವಿಕಾಸವಾಗುತ್ತದೆ ಎಂದು ಶಾಸಕರು ಹೇಳಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಪ್ರಸಕ್ತ ದಿನಗಳಲ್ಲಿ ಶಿಕ್ಷಣಕ್ಕೆ ಎಲ್ಲರೂ ಒತ್ತು ನೀಡುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ವಸತಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳೆಂದು ಭಾವಿಸಿ, ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಅವರಲ್ಲಿ ಸ್ಪರ್ಧಾ ಮನೋಭಾವನೆ ಮೂಡಿಸಿದಲ್ಲಿ ಮಾತ್ರ ಅವರಲ್ಲಿರುವ ಪ್ರತಿಭೆ, ಜ್ಞಾನ ವಿಕಾಸವಾಗುತ್ತದೆ ಎಂದು ಗುರುಮಠಕಲ್ ಮತಕ್ಷೇತ್ರದ ಶಾಸಕ ಶರಣಗೌಡ ಕಂದಕೂರು ಹೇಳಿದರು.

ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಕೊಟಗೇರಾ ಗ್ರಾಮದಲ್ಲಿ ಸೋಮವಾರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಯಾದಗಿರಿ ವತಿಯಿಂದ 24 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ, ಆರೋಗ್ಯ, ಶುದ್ಧ ಕುಡಿಯುವ ನೀರು, ಉದ್ಯೋಗ ಸೃಷ್ಟಿಗೆ ಹೆಚ್ಚು ಗಮನ ನೀಡುತ್ತಿದ್ದೇನೆ. ಕಾರಣ ಗ್ರಾಮೀಣ ಭಾಗದ ಜನರು ತಮ್ಮ ಮಕ್ಕಳಿಗೆ ತಪ್ಪದೇ ಶಿಕ್ಷಣ ಒದಗಿಸಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.

ಇಂತಹ ಒಳ್ಳೆಯ ಪರಿಸರದಲ್ಲಿ ಸುಸಜ್ಜಿತ ವಸತಿ ಶಾಲೆ ನಿರ್ಮಾಣ ಮಾಡಲಾಗಿದೆ. ಇಲ್ಲಿನ ಶಿಕ್ಷಕರು ಪರಿಸರ ಸ್ವಚ್ಛತೆಗೆ ಆಧ್ಯತೆ ನೀಡುವ ಜೊತೆಗೆ ನಿಮಗೆ ತಂಗಲು ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗಿದೆ. ಇಲ್ಲಿಯೇ ಎಲ್ಲರೂ ವಾಸ ಮಾಡಿ, ವಿದ್ಯಾರ್ಥಿಗಳಿಗೆ ಇನ್ನು ಹೆಚ್ಚು ಬೋಧನೆ ಮಾಡುವ ಜೊತೆಗೆ ಅವರ ಚಟುವಟಿಕೆಗಳ ಮೇಲೆ ಗಮನ ಹರಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 3 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆಯಿದೆ. ಸರ್ಕಾರದ ಮೇಲೆ ನೇಮಕಕ್ಕೆ ಒತ್ತಡ ಹಾಕಿದ್ದೇನೆ. ಅಲ್ಲದೇ ಜಿಲ್ಲಾ ಕೇಂದ್ರ ಯಾದಗಿರಿಯಲ್ಲಿ 2 ಬಿಸಿಎಂ ವಸತಿ ನಿಲಯಗಳ ಸ್ಥಾಪನೆಗೆ ಕ್ರಮ ಕೈಗೊಂಡಿದ್ದೇನೆ ಎಂದರು.

ನೆರೆಯ ಮೊಟ್ನಳ್ಳಿ ಕ್ರಾಸ್ ಹತ್ತಿರ ಇರುವ ಮೊರಾರ್ಜಿ ವಸತಿ ಶಾಲೆ ದುರಸ್ತಿಗೆ ಆದಷ್ಟು ಬೇಗನೆ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಅನುಕೂಲತೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಮತಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆಯಿಂದ ಸಾವಿರಾರು ಜನರು ಉದ್ಯೋಗ ಅರಸಿ ಬೃಹತ್ ನಗರಗಳಿಗೆ ವಲಸೆ ಹೋಗಿದ್ದಾರೆ. ಉನ್ನತ ಅಭ್ಯಾಸ ಮಾಡಿದ ನಮ್ಮ ಯುವಕರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ. ಕಡೆಚೂರ-ಬಾಡಿಯಾಲ ಭಾಗದಲ್ಲಿ 3 ಸಾವಿರ ಎಕರೆ ಕೈಗಾರಿಕಾ ಭೂಮಿಯಿದೆ. ನಾನೂ ಈಗಾಗಲೇ ಅವರನ್ನು ಭೇಟಿಯಾಗಿ ಇಲ್ಲಿನ ವಾಸ್ತವಿಕ ಪರಿಸ್ಥಿತಿಯನ್ನು ವಿವರಿಸಿ, ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.

ಈ ಹಿಂದೆ ಶಾಸಕರಾಗಿದ್ದ ನಮ್ಮ ತಂದೆ ದಿ. ನಾಗನಗೌಡ ಕಂದಕೂರ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದರು. ಅವರ ಜೊತೆಯಲ್ಲಿ ನಾನೂ ಕೂಡ ಜನರ ಹಾಗೂ ಪಕ್ಷದ ಕಾರ್ಯಕರ್ತರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ ಪರಿಣಾಮ ನೀವು ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದೀರಿ. ಈ ಭಾಗದ ಹಳ್ಳಿಗಳ ಪ್ರಗತಿಗೆ ಆಧ್ಯತೆ ಮೇರೆಗೆ ನಾನೂ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸರೋಜಾ, ಕ್ಷೇತ್ರ ಶಿಕ್ಷಣಾಧಿಕಾರಿ ಋಷಿಕೇಶ, ಬಿಆರ್‌ಸಿ ಮಲ್ಲಿಕಾರ್ಜುನ, ಮೋಟ್ನಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ, ಪ್ರಾಂಶುಪಾಲೆ ರಮಾಭಾಯಿ, ಗುರುಮಠಕಲ್ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಪಾಪಣ್ಣ ಮನ್ನೆ, ಬ್ಲಾಕ್ ಜೆಡಿಎಸ್ ಅಧ್ಯಕ್ಷ ಪ್ರಕಾಶ ನೀರೇಟಿ, ರಾಮಣ್ಣ ಕೋಟಗೇರಾ, ಸುಭಾಶ್ಚಂದ್ರ ಕಟಕಟಿ ಹೊನಗೇರಾ, ದೀಪಕ್ ಬೆಳ್ಳಿ, ರವಿ ಪಾಟೀಲ್, ಗಿರಿನಾಥರಡ್ಡಿ ಚಿಂತಗುಂಟಾ, ಅಶೋಕ ಕೋಟಗೇರಾ, ಬಂದಪ್ಪಗೌಡ ಲಿಂಗೇರಿ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಶೇಷ ಅಗತ್ಯತೆಯುಳ್ಳ 50 ಮಕ್ಕಳ ವೈದ್ಯಕೀಯ ಮೌಲ್ಯಾಂಕನ: ಟಿ. ಮಂಜುನಾಥ್
ಕ್ರೀಡಾಂಗಣ ಕಟ್ಟಲು ಸ್ಥಳ ಮಂಜೂರು