ಬಳ್ಳಾರಿ: ಮಕ್ಕಳಲ್ಲಿ ಸಾಂಸ್ಕೃತಿಕ ಪ್ರಜ್ಞೆ ಮೂಡಿಸುವ ಹಾಗೂ ಸಂಸ್ಕಾರವಂತರನ್ನಾಗಿಸುವ ಕೆಲಸಗಳು ಹೆಚ್ಚಾಗಿ ನಡೆಯಬೇಕಾಗಿದೆ ಎಂದು ಹಿರಿಯ ರಂಗಭೂಮಿ ಕಲಾವಿದ ಡಾ. ಶಿವಕುಮಾರಸ್ವಾಮಿ ತಾತ ಅಭಿಪ್ರಾಯಪಟ್ಟರು.
ಇಂದಿನ ಮಕ್ಕಳು ಸಾಮಾನ್ಯ ಸಮಸ್ಯೆಗಳನ್ನು ಸಹ ಎದುರಿಸಲಾಗದ ದುರ್ಬಲ ಮನಸ್ಥಿತಿಯಲ್ಲಿದ್ದಾರೆ. ಸಮಾಜದಲ್ಲಿ ಚಿಕ್ಕ ಚಿಕ್ಕ ವಿಚಾರಗಳಿಗೂ ಮಕ್ಕಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಮಕ್ಕಳ ಮನಸ್ಥಿತಿ ಬದಲಾವಣೆ ಹಾಗೂ ಅವರನ್ನು ಸದಾ ಕ್ರೀಯಾಶೀಲರನ್ನಾಗಿಸಲು ಸಾಂಸ್ಕೃತಿಕ ಪ್ರಜ್ಞೆ ಬಿತ್ತುವುದು ಅತ್ಯಂತ ಅಗತ್ಯವಿದೆ. ಈ ದಿಸೆಯಲ್ಲಿ ಸರ್ಕಾರವಷ್ಟೇ ಅಲ್ಲ; ಸಂಘ, ಸಂಸ್ಥೆಗಳು ಸಹ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದರು.
ಕಳೆದ ಹತ್ತು ವರ್ಷಗಳ ಹಿಂದೆ ಗ್ರಾಮೀಣ ಭಾಗದಲ್ಲಿ ಬಯಲಾಟ, ನಾಟಕ, ಪುರಾಣ, ಪ್ರವಚನ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯುತ್ತಿದ್ದವು. ಅವುಗಳೇ ನಮ್ಮನ್ನು ಕಲಾವಿದರನ್ನಾಗಿ ತಯಾರಿಸಿದವು. ಆದರೆ ಇಂದಿನ ಟಿವಿ, ಮೊಬೈಲ್ಗಳ ಅನಿಯಮಿತ ಬಳಕೆಯಿಂದಾಗಿ ಮನುಷ್ಯನಲ್ಲಿನ ಸಾಂಸ್ಕೃತಿಕ ಪ್ರಜ್ಞೆ ಅಧೋಗತಿಯತ್ತ ಸಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.ಸಂಸ್ಥೆಯ ಕಾರ್ಯದರ್ಶಿ ಆರ್.ಪಿ. ಮಂಜುನಾಥ್ ಬಿ.ಜಿ. ದಿನ್ನೆ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ಸಾಂಸ್ಕೃತಿಕ ಪರಂಪರೆಗೆ ಪುನಶ್ಚೇತನ ಕೊಡುವ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ. ಶಿಕ್ಷಣದಲ್ಲಿ ರಂಗಭೂಮಿಯನ್ನು ಅಳವಡಿಸುವ ಮೂಲಕ ಮಕ್ಕಳಲ್ಲಿ ಪ್ರಬುದ್ಧತೆಯನ್ನು ಹಾಗೂ ಸಮಾಜದಲ್ಲಿ ಸ್ವಾಸ್ಥ್ಯತೆಯನ್ನು ಬೆಳೆಸಬಹುದಾಗಿದೆ ಎಂದರು.
ಸಂಸ್ಥೆಯ ಸದಸ್ಯ ಡಿ.ಎಂ. ಯಲ್ಲಪ್ಪ, ವಿನಯ್ ಹಾಗೂ ಅತಿಥಿ ಶಿಕ್ಷಕ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.
ಬಳಿಕ ವಿವಿಧ ತಂಡಗಳಿಂದ ಸಮೂಹ ನೃತ್ಯಗಳು, ಗೊರವರ ಕುಣಿತ, ಕೊರವಂಜಿ ನೃತ್ಯರೂಪಕ, ಕೋಲಾಟ, ಸುಗಮ ಸಂಗೀತ ಹಾಗೂ ಹಾರೋಹಕ್ಕಿ ನಾಟಕ ಪ್ರದರ್ಶನ ಜರುಗಿದವು.