ಚಿತ್ರದುರ್ಗ: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛ ವಾಹಿನಿ ಸಿಬ್ಬಂದಿಗೆ ಕಿರುಕುಳ ನೀಡುವ ವಾತಾವರಣ ಸೃಷ್ಟಿಯಾಗುತ್ತಿದೆ ಎಂದು ಗ್ರಾಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಿ.ಎಂ.ಮಲಿಯಪ್ಪ ಆರೋಪಿಸಿದರು. ನಗರದ ತರಾಸು ರಂಗಮಂದಿರದಲ್ಲಿ ಶನಿವಾರ ಸಿಐಟಿಯು ವತಿಯಿಂದ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ನೌಕರರ ಜಿಲ್ಲಾ ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಗಮನ ಹರಿಸುವ ಅಗತ್ಯವಿದೆ. ಸಿಬ್ಬಂದಿ ಮುಕ್ತವಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು. ಗ್ರಾಮ ಪಂಚಾಯಿತಿ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಡಿ.20 ರಂದು ರಾಜ್ಯಾದ್ಯಂತ ಚಳವಳಿಗೆ ಕರೆ ನೀಡಿಡಲಾಗಿದೆ. ಅಂದು ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯಿತಿಗೆ ಮುತ್ತಿಗೆ ಹಾಕಲಾಗುವುದು. ಹೋರಾಟ ಮಾಡದ ಹೊರದು ಸರ್ಕಾರಗಳು ಬೇಡಿಕೆ ಈಡೇರಿಸುವುದಿಲ್ಲ ಎಂಬ ಸತ್ಯವ ನೌಕರರು ಅರಿಯಬೇಕು ಎಂದರು. ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳಿಗಾಗಿ ಹತ್ತಾರು ವರ್ಷಗಳಿಂದಲೂ ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಆಳುವ ಸರ್ಕಾರಗಳಿಗೆ ಬಡವರ ಬಗ್ಗೆ ಕಾಳಜಿಯಿಲ್ಲ. ಕಮ್ಯುನಿಸ್ಟ್ ಪಾರ್ಟಿ ದುಡಿಯುವ ವರ್ಗದ ಪರವಾಗಿದೆ. ಕಾರ್ಮಿಕರ ಜೀವನ ಹಸನುಗೊಳಿಸಲು ಸಂಘಟನೆ, ಹೋರಾಟದಿಂದ ಮಾತ್ರ ಸಾಧ್ಯ. ಅದಕ್ಕಾಗಿ ಡಿ.20 ರಂದು ಜಿಲ್ಲಾ ಪಂಚಾಯಿತಿ ಮುತ್ತಿಗೆಯಲ್ಲಿ ಗ್ರಾಮ ಪಂಚಾಯಿತಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಕ್ತಿ ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು. ಗ್ರಾಮ ಪಂಚಾಯಿತಿ ನೌಕರರು ಏಮಾರಬಾರದು. ನಮ್ಮ ಹೋರಾಟದಿಂದ ಬಿಲ್ ಕಲೆಕ್ಟರ್ಗಳಿಗೆ ಬಡ್ತಿ ಸಿಕ್ಕಿದೆ. ಪ್ರತಿಯೊಬ್ಬರು ಸಂಘಕ್ಕೆ ಸದಸ್ಯರಾಗಬೇಕು. ಜಿಲ್ಲಾ ಪಂಚಾಯಿತಿಗೆ ಮುತ್ತಿಗೆ ಹಾಕುವ ಮುನ್ನ ಜಿಲ್ಲೆಯ ಬೇರೆ ತಾಲೂಕುಗಳಲ್ಲಿ ಸಮಾವೇಶ ನಡೆಸಬೇಕಿದೆ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳ ಕುರಿತು ಚರ್ಚೆಯಾಗಬೇಕು. ಇಲ್ಲದಿದ್ದರೆ ರಾಜ್ಯವ್ಯಾಪಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
2024-25 ನೇ ಸಾಲಿನ ಅಂತಿಮ ಜೇಷ್ಠತಾ ಪಟ್ಟಿ ಬಿಡುಗಡೆಗೊಳಿಸಿ ಮುಂಬಡ್ತಿ ಪ್ರಕ್ರಿಯೆಯನ್ನು ಶೀಘ್ರವೇ ಜಾರಿಗೊಳಿಸಬೇಕು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ನೌಕರರಿಗೆ ತುಟ್ಟಿ ಭತ್ಯೆ ನೀಡಬೇಕು. 20 ತಿಂಗಳ ನಿವೃತ್ತಿ ವೇತನ ಹಾಗೂ ಮರಣ ಹೊಂದಿರುವ ಸಿಬ್ಬಂದಿಗಳ ಕುಟುಂಬಕ್ಕೆ ಪರಿಹಾರ ನೀಡಬೇಕು. ಜಿಲ್ಲೆಯಲ್ಲಿರುವ ಸಿಬ್ಬಂದಿಗಳಿಗೆ ಬಾಕಿ ವೇತನ ಶೀಘ್ರವೇ ಬಿಡುಗಡೆಗೊಳಿಸಬೇಕು ಎಂದು ಸಮಾವೇಶದಲ್ಲಿ ಆಗ್ರಹಿಸಲಾಯಿತು.ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಡೇಗೌಡ್ರು, ಉಪಾಧ್ಯಕ್ಷ ಬಿ.ವೆಂಕಟೇಶ್, ಖಜಾಂಚಿ ಶಿವಣ್ಣ ಬಿ.ಕಾರ್ಯದರ್ಶಿ ರಂಗನಾಥ, ಜ್ಯೋತಿ, ಜಯಲಕ್ಷ್ಮಿ, ತನುಜ, ಸುನಿತ ವೇದಿಕೆಯಲ್ಲಿದ್ದರು.