ಮೌಲ್ಯಾಧಾರಿತ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಸೂಕ್ಷ್ಮ ಚಿಂತನೆ ಮೂಡಿಸಬೇಕು: ಚಕ್ರವರ್ತಿ ಸೂಲಿಬೆಲೆ

KannadaprabhaNewsNetwork |  
Published : Oct 14, 2025, 01:02 AM IST
ಫೋಟೋ: ೧೨ಪಿಟಿಆರ್-ವಿವೇಕಾನಂದ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಉಪನ್ಯಾಸ ನೀಡಿದರು. | Kannada Prabha

ಸಾರಾಂಶ

ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ‘ವಿವೇಕ ವಿಜಯ’ ಉಪನ್ಯಾಸ ಕಾರ್ಯಕ್ರಮದ ಎರಡನೇ ಅವಧಿಯ ‘ರಾಷ್ಟ್ರ ರಕ್ಷಣಾ-ವಿವೇಕ ಶಿಕ್ಷಣ’ ಎಂಬ ಶೀರ್ಷಿಕೆಯಡಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಉಪನ್ಯಾಸ ನೆರವೇರಿತು.

ಪುತ್ತೂರು: ಹಿಂದಿನ ಕಾಲದ ವಿದ್ಯಾರ್ಥಿಗಳಿಗೆ ಹಾಗೂ ಪ್ರಸ್ತುತ ಕಾಲಘಟ್ಟದ ವಿದ್ಯಾರ್ಥಿಗಳಿಗೆ ಹಲವು ವ್ಯತ್ಯಾಸಗಳಿವೆ. ಹಿಂದಿನ ಕಾಲದಲ್ಲಿ ಶಿಕ್ಷಣ ಪಡೆಯಲು ಹಲವು ಕೊರತೆಗಳಿದ್ದವು. ಇಂದಿನ ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ಎಲ್ಲ ರೀತಿಯ ಅನುಕೂಲತೆಗಳಿದ್ದರೂ ಅದರ ಸದುಪಯೋಗವನ್ನು ಪಡೆದುಕೊಳ್ಳುತ್ತಿಲ್ಲ. ಈ ಕಾಲಘಟ್ಟದ ವಿದ್ಯಾರ್ಥಿಗಳಲ್ಲಿ ಕಾಣಸಿಗುವ ಎರಡು ಬಹುಮುಖ್ಯ ಸಮಸ್ಯೆಗಳೆಂದರೆ ಏಕಾಗ್ರತೆ ಹಾಗೂ ಸೂಕ್ಷ್ಮ ಸಂವೇದನೆಗಳ ಕೊರತೆ. ಇವುಗಳನ್ನು ನಿವಾರಿಸಲು ವಿವಿಧ ಮೌಲ್ಯಯುತ ಸನ್ನಿವೇಶಗಳನ್ನು ಸೃಷ್ಟಿಸುವ ಕರ್ತವ್ಯ ಪ್ರತಿಯೊಬ್ಬ ಶಿಕ್ಷಕರದ್ದು ಎಂದು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ‘ವಿವೇಕ ವಿಜಯ’ ಉಪನ್ಯಾಸ ಕಾರ್ಯಕ್ರಮದ ಎರಡನೇ ಅವಧಿಯ ‘ರಾಷ್ಟ್ರ ರಕ್ಷಣಾ-ವಿವೇಕ ಶಿಕ್ಷಣ’ ಎಂಬ ಶೀರ್ಷಿಕೆಯಡಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ ಉಪನ್ಯಾಸದಲ್ಲಿ ದಿಕ್ಸೂಚಿ ಮಾತುಗಳನ್ನಾಡಿದರು.ಶಿಕ್ಷಕರು ಪಠ್ಯ ಚಟುವಟಿಕೆಗಳಿಂದ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು. ಮೌಲ್ಯಗಳನ್ನು ಕಳೆದುಕೊಂಡು ನಿರಂತರವಾಗಿ ಹಲವಾರು ಸವಾಲುಗಳನ್ನು ಎದುರಿಸುತ್ತಿರುವ ಇಂದಿನ ಸಮಾಜದಲ್ಲಿ ಶಿಕ್ಷಕನಾದವನು ಮೌಲ್ಯಗಳನ್ನು ಪುನರ್ ಸ್ಥಾಪಿಸಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

ಅತಿಥಿಯಾದ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜ್‌ನ ನಿವೃತ್ತ ಪ್ರಾಂಶುಪಾಲ ಡಾ.ವರದರಾಜ ಚಂದ್ರಗಿರಿ ಮಾತನಾಡಿ, ದೇಶಭಕ್ತಿ, ನಾಡಪ್ರೇಮ ಮೊದಲಾದ ಮೌಲ್ಯಯುತ ವಿಚಾರಧಾರೆಗಳತ್ತ ಕೇಂದ್ರೀಕೃತವಾಗಿದ್ದ ನಮ್ಮ ಭಾರತೀಯ ಶಿಕ್ಷಣ ಪದ್ಧತಿಯು ಇಂದು ಆಧುನಿಕ ಪಾಶ್ಚಾತ್ಯ ಶಿಕ್ಷಣ ಪದ್ಧತಿ ಹಾಗೂ ತಂತ್ರಜ್ಞಾನದ ಪ್ರಭಾವಕ್ಕೊಳಗಾಗಿ ನೈತಿಕ ಮೌಲ್ಯಗಳನ್ನು ಕಳೆದುಕೊಂಡಿದೆ. ಮಗುವಿನ ಸರ್ವತೋಮುಖ ಬೆಳವಣಿಗೆಗಾಗಿ ಇಂದು ಶಿಕ್ಷಕರು ಪೋಷಕರ ಸ್ಥಾನವನ್ನು ವಹಿಸುವ ಅಗತ್ಯತೆ ಇದೆ. ನಾವೆಲ್ಲರೂ ಒಪ್ಪಿಕೊಂಡಿರುವ ಹಾಗೂ ಗೌರವಿಸುತ್ತಿರುವ ಗುರುತತ್ವ ಪರಂಪರೆಯನ್ನು ಮುಂದುವರಿಸುವ ಜೊತೆಗೆ ರಾಷ್ಟ್ರ ಶಿಕ್ಷಣದ ಮೂಲಕ ಜವಾಬ್ದಾರಿಯುತ ಯುವ ಜನತೆಯ ನಿರ್ಮಾಣದ ಹೊಣೆಗಾರಿಕೆ ಇಂದಿನ ಶಿಕ್ಷಕರ ಮೇಲಿದೆ ಎಂದರು.ವೇದಿಕೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ನಿರ್ದೇಶಕ ಡಾ.ಕೆ.ಎನ್.ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ನಿರ್ದೇಶಕರು, ವಿವೇಕಾನಂದ ವಿದ್ಯಾವರ್ಧಕ ಸಂಘ ವಿವಿಧ ವಿದ್ಯಾಸಂಸ್ಥೆಗಳ ಹಾಗೂ ಪುತ್ತೂರಿನ ಆಸುಪಾಸಿನ ಶಿಕ್ಷಣ ಸಂಸ್ಥೆಗಳ ಶಿಕ್ಷಕ ವೃಂದದವರು, ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ವಿವೇಕಾನಂದ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ರವೀಂದ್ರ ಪಿ. ಸ್ವಾಗತಿಸಿದರು. ಪ್ರಾಂಶುಪಾಲ ದೇವಿಚರಣ್ ರೈ ಎಂ. ವಂದಿಸಿದರು. ಉಪನ್ಯಾಸಕಿ ಹರ್ಷಿತಾ ಪಿ. ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ