ಬೆಳೆ ಪರಿಹಾರದ ಮೊತ್ತವನ್ನು ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ: ಡಿಸಿ ನಲಿನ್ ಅತುಲ್

KannadaprabhaNewsNetwork |  
Published : May 18, 2024, 12:39 AM IST
17ಕೆಪಿಎಲ್23  ಡಿಸಿ ನಲಿನ್ ಅತುಲ್ | Kannada Prabha

ಸಾರಾಂಶ

ಬರಗಾಲದ ಹಿನ್ನೆಲೆಯಲ್ಲಿ ಸರ್ಕಾರದಿಂದ ರೈತರ ಖಾತೆಗೆ ಜಮೆ ಆಗುವ ಬೆಳೆ ಪರಿಹಾರದ ಮೊತ್ತವನ್ನು ರೈತರ ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಬ್ಯಾಂಕ್‌ಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದ್ದಾರೆ.

ಕೊಪ್ಪಳ: ಬರಗಾಲದ ಹಿನ್ನೆಲೆಯಲ್ಲಿ ಸರ್ಕಾರದಿಂದ ರೈತರ ಖಾತೆಗೆ ಜಮೆ ಆಗುವ ಬೆಳೆ ಪರಿಹಾರದ ಮೊತ್ತವನ್ನು ರೈತರ ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಬ್ಯಾಂಕ್‌ಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಬ್ಯಾಂಕರ್ಸ್ ಹಾಗೂ ಆರ್‌ಬಿಐ ಪ್ರತಿನಿಧಿಗಳೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಈಗಾಗಲೇ ಸರ್ಕಾರದಿಂದ ರೈತರ ಖಾತೆಗೆ ಇನ್‌ಪುಟ್ ಸಬ್ಸಿಡಿ (ಪರಿಹಾರ) ಜಮೆ ಮಾಡಲಾಗುತ್ತಿದೆ. ಈ ಪರಿಹಾರ ಮೊತ್ತವನ್ನು ಕೆಲವು ಬ್ಯಾಂಕ್‌ಗಳು ರೈತರಿಗೆ ನೀಡದೆ ಸಾಲದ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಇದು ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ನಿಯಮಗಳ ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮ ಅಧೀನದಲ್ಲಿ ಬರುವ ಎಲ್ಲ ಬ್ಯಾಂಕ್‌ಗಳು ಹಾಗೂ ಬ್ಯಾಂಕ್ ಶಾಖೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಬೆಳೆ ಪರಿಹಾರದ ಮೊತ್ತವನ್ನು ಸಾಲದ ಖಾತೆಗೆ ಜಮೆ ಮಾಡಬಾರದೆಂದು ನಿರ್ದೇಶನ ನೀಡಿ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ರೈತರ ಖಾತೆಗೆ ಬೆಳೆ ಪರಿಹಾರವನ್ನು ಡಿಬಿಟಿ ಮೂಲಕ ನೇರ ಪಾವತಿ ಮಾಡಲಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಇನ್ನೂ ಕೆಲವು ರೈತರಿಗೆ ಬೆಳೆ ಪರಿಹಾರ ಮೊತ್ತ ಜಮೆ ಆಗಿರುವುದಿಲ್ಲ. ಬ್ಯಾಂಕ್ ಖಾತೆಗೆ ಸಂಬಂಧಿಸಿದ ತಾಂತ್ರಿಕ ತೊಂದರೆಗಳನ್ನು ಬ್ಯಾಂಕ್ ಸಿಬ್ಬಂದಿ ಪರಿಹರಿಸಿ ಕೊಡಬೇಕು. ರೈತರೊಂದಿಗೆ ಸೌಜನ್ಯದಿಂದ ವರ್ತಿಸಿ, ಬೆಳೆ ಪರಿಹಾರ ಮೊತ್ತ ಜಮೆ ಆಗಲು ಸಹಕರಿಸಬೇಕು. ಪರಿಹಾರ ಮೊತ್ತ ಜಮೆ ಆಗದ ರೈತರ ಸಹಾಯಕ್ಕೆ ಜಿಲ್ಲೆಯಾದ್ಯಂತ ತಾಲೂಕು ಹಾಗೂ ಹೋಬಳಿವಾರು ಸಹಾಯವಾಣಿಗಳನ್ನು ತೆರೆಯಲಾಗಿದ್ದು, ರೈತರು ಸಹಾಯವಾಣಿಗೆ ಕರೆ ಮಾಡಿ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ/ನಾಡ ಕಚೇರಿ ಅಥವಾ ಕಂದಾಯ ಇಲಾಖೆಗಳಿಗೆ ಸಂಪರ್ಕಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ., ಲೀಡ್ ಬ್ಯಾಂಕ್ ವ್ಯವಸ್ಥಾಪಕ ವೀರೇಂದ್ರ, ಆರ್‌ಬಿಐ ವ್ಯವಸ್ಥಾಪಕ ಮೋನಿ ರಾಜಬ್ರಹ್ಮ, ನಬಾರ್ಡ್‌ನ ಡಿಡಿಎಂ ಎಂ. ಮಹದೇವ ಕೀರ್ತಿ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳ ಗೋಳು, ಕೇಳೋರು ಯಾರು?
ಸಂಸ್ಕೃತಿಯ ಸಂರಕ್ಷಣೆ ಹೊಣೆ ಯುವಶಕ್ತಿ ಮೇಲಿದೆ: ಸಂಜೀವ ಚವ್ಹಾಣ