ಹಾವೇರಿ: ಬೆಳೆಹಾನಿ ಪರಿಹಾರ ವಿತರಣೆಯನ್ನು ಸರಳೀಕರಣಗೊಳಿಸಲು ಎನ್ಡಿಆರ್ಎಫ್ ಮಾರ್ಗಸೂಚಿಗಳಲ್ಲಿ ಬದಲಾವಣೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಶೀಘ್ರದಲ್ಲಿಯೇ ಬೆಳೆಹಾನಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ರೈತರಿಗೆ ಭರವಸೆ ನೀಡಿದರು. ಸ್ಥಳೀಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ರೈತರ ಅಹವಾಲುಗಳನ್ನು ಆಲಿಸಿದ ಸಚಿವರು, ಬೆಳೆಹಾನಿ ಪರಿಹಾರ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಪರಿಹಾರ ವಿತರಣೆಗೆ ಹಣದ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ₹38 ಕೋಟಿ ಇದೆ. ಜಂಟಿ ಸಮೀಕ್ಷೆ ಪ್ರಗತಿಯಲ್ಲಿದ್ದು, ತ್ವರಿತವಾಗಿ ಪೂರ್ಣಗೊಳಿಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಕೆಸಿಸಿ ಬ್ಯಾಂಕ್ ಇನ್ನೂ ವಿಭಜನೆ ಆಗಿಲ್ಲ. ಹೀಗಾಗಿ ರೈತರ ನಿರೀಕ್ಷೆ ಪ್ರಮಾಣದಲ್ಲಿ ಸಾಲ ಸಿಗುತ್ತಿಲ್ಲ. ಗದಗ, ಧಾರವಾಡ, ಹಾವೇರಿ ಜಿಲ್ಲೆಗಳ ರೈತರಿಗೆ ಬೆಳೆಸಾಲ ವಿತರಣೆಯಲ್ಲಿ ಸಮಾನ ನೀತಿ ಅನುಸರಿಸಬೇಕಾಗಿದೆ. ಕೃಷಿ ಸಾಲ ವಿತರಣೆಯಲ್ಲಿ ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೆಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಮನವಿ ಮಾಡಲಾಗುವುದು ಎಂದರು. ಕೆಸಿಸಿ ಬ್ಯಾಂಕ್ ಈಗ ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದೆ. ಬ್ಯಾಂಕ್ ವಿಭಜನೆ ಕಷ್ಟ ಎಂಬ ಅರಿವು ಇದೆ. ಆದರೂ ಸಹಜ ಇಂದಲ್ಲ ನಾಳೆ ಪ್ರತ್ಯೇಕ ಬ್ಯಾಂಕ್ ಸ್ಥಾಪನೆ ಆಗಲೇಬೇಕು. ಹೀಗಾಗಿ ಗದಗ ಮತ್ತು ಧಾರವಾಡ ಜಿಲ್ಲೆಗಳ ಮನವೊಲಿಸಿ ಬ್ಯಾಂಕ್ ವಿಭಜನೆಗೆ ಪ್ರಯತ್ನ ಮಾಡಲಾಗುವುದು ಎಂದರು.ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ವಿತರಣೆಗೆ ಅರ್ಜಿ ಸಲ್ಲಿಸದ ವ್ಯವಸ್ಥೆ ಬರಬೇಕು ಎಂಬ ಬೇಡಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಯು.ಬಿ. ಬಣಕಾರ ಅವರು ತಮ್ಮ ತಾಲೂಕಿನಲ್ಲಿ ತಹಸೀಲ್ದಾರ್ ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ಸಭೆ ಕರೆದು ಚರ್ಚೆ ಮಾಡಿ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.ರೈತರ ಸಮಸ್ಯೆಗಳಿಗೆ ವಿವರಣೆ ನೀಡಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಬೆಳೆಹಾನಿ ಪರಿಹಾರವನ್ನು ಶೀಘ್ರ ವಿತರಣೆ ಮಾಡಲಾಗುವುದು. ಜಮೀನುಗಳ ದಾರಿ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದು. ರೈತರ ಆತ್ಮಹತ್ಯೆ ಪ್ರಕರಣಗಳ ಪರಿಹಾರ ವಿತರಣೆಗೆ ಈಗಾಗಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಈ ವೇಳೆ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕರಾದ ಪ್ರಕಾಶ ಕೋಳಿವಾಡ, ಯಾಸಿರ್ಅಹ್ಮದ್ಖಾನ್ ಪಠಾಣ್, ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಪಂ ಸಿಇಒ ರುಚಿ ಬಿಂದಲ್, ಎಸ್ಪಿ ಯಶೋದಾ ವಂಟಿಗೋಡಿ ಉಪಸ್ಥಿತರಿದ್ದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹತಕ್ಷಣ ಬೆಳೆ ಹಾನಿ ಪರಿಹಾರ ವಿತರಣೆ ಮಾಡಬೇಕು. ವರದಾ- ಬೇಡ್ತಿ ನದಿ ಜೋಡಣೆ ಮಾಡಬೇಕು. ರೈತರಿಗೆ ಮೂರರಿಂದ ಐದು ಲಕ್ಷದವರೆಗೆ ಕೃಷಿ ಸಾಲ ವಿತರಣೆ ಮಾಡಬೇಕು. ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸುವ ಪದ್ಧತಿ ಕೈಬಿಡಬೇಕು. ಡಿಸಿಸಿ ಬ್ಯಾಂಕ್ ವಿಭಜನೆ ಮಾಡಬೇಕು. ಎನ್ಡಿಆರ್ಎಫ್ ಮಾರ್ಗಸೂಚಿ ಬದಲಾವಣೆ ಮಾಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚೆಳ್ಳೇರ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮನವಿ ಮಾಡಿದರು.