ಕನ್ನಡಪ್ರಭ ವಾರ್ತೆ ಚಿಂತಾಮಣಿ
ತಾಲೂಕಿನ ಕೋನಪಲ್ಲಿಯ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಎಆರ್ ಟಿಒ ಕಚೇರಿಯ ಕಟ್ಟಡವನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಹಾಗೂ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ ಉದ್ಘಾಟಿಸಿದರು.
ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ರಾಜ್ಯಾದ್ಯಂತ ಹಲವು ಕಡೆ ಹೊಸ ಆರ್ ಟಿಒ ಕಚೇರಿಗಳ ಕಟ್ಟಡ ಕಾಮಗಾರಿಗಳು ನಡೆಯುತ್ತಿರುವುದರ ಜೊತೆಗೆ ಚಾಲನಾ ತರಬೇತಿ ಟ್ರ್ಯಾಕ್ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇಲ್ಲಿಯೂ ಚಾಲನಾ ತರಬೇತಿ ಟ್ರ್ಯಾಕ್ ನಿರ್ಮಿಸಲು ಸಚಿವ ಡಾ.ಎಂ.ಸಿ.ಸುಧಾಕರ್ ೩.೫ ಎಕರೆ ಜಮೀನು ಗುರುತಿಸಿದ್ದು, ಟ್ರ್ಯಾಕ್ ಕಾಮಗಾರಿ ಪ್ರಗತಿಯಲ್ಲಿದೆ. ತಾಲೂಕಿಗೆ ಅವಶ್ಯಕವಿರುವ ಬಸ್ಗಳ ವ್ಯವಸ್ಥೆಗಳನ್ನು ಮಾಡಿಕೊಡಲಾಗುವುದು ಎಂದರು.ವಿರೋಧ ಪಕ್ಷ ಬಿಜೆಪಿಯವರು ಸುಖಾ ಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಾರಿಗೆ ಇಲಾಖೆಯಲ್ಲಿ ಯಾವುದೇ ನೇಮಕಾತಿಯಾಗಿರಲಿಲ್ಲ, ಹೊಸ ಬಸ್ಗಳೂ ಓಡಲಿಲ್ಲ, ನಮ್ಮ ಸರ್ಕಾರವು ಮಾಡುತ್ತಿರುವ ಸಾರಿಗೆ ಇಲಾಖೆಯ ಕ್ರಾಂತಿಗಳನ್ನು ಹಾಗೂ ಶಕ್ತಿಯೋಜನೆಯಿಂದ ಆದ ಅನುಕೂಲಗಳನ್ನು ಬಿಜೆಪಿಯವರು ಪರಿಗಣಿಸಿಯೇ ಇಲ್ಲ. ಸುಖಾ ಸುಮ್ಮನೇ ನಮ್ಮ ಸರ್ಕಾರದ ಮೇಲೆ ಅಪಪ್ರಚಾರ ಮಾಡತೊಡಗಿದ್ದಾರೆಂದು ಕಿಡಿಕಾರಿದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಸಿಇಒ ಪ್ರಕಾಶ್ ನಿಟ್ಟಾಲಿ, ಸಾರಿಗೆ ಆಯುಕ್ತ ಯೋಗೀಶ್, ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಕರ್ನಾಟಕ ಜಾನಪದ ಆಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಕೋನಪಲ್ಲಿ ಗ್ರಾಪಂ ಅಧ್ಯಕ್ಷೆ ಮಮತಾ ನರಸಿಂಹಮೂರ್ತಿ, ನಗರಸಭೆ ಅಧ್ಯಕ್ಷ ಜಗನ್ನಾಥ್, ಉಪಾಧ್ಯಕ್ಷೆ ರಾಣಿಯಮ್ಮ, ಕೃಷಿಕ ಸಮಾಜದ ಅಧ್ಯಕ್ಷ ಸಂತೇಕಲ್ಲಹಳ್ಳಿ ಗೋವಿಂದಪ್ಪ, ಜಂಟಿ ಸಾರಿಗೆ ಆಯುಕ್ತೆ ಜಿ.ಎನ್ ಗಾಯಿತ್ರಿದೇವಿ, ತಹಸೀಲ್ದಾರ್ ಸುದರ್ಶನ್ ಯಾದವ್, ತಾಪಂ ಇಒ ಎಸ್.ಆನಂದ್, ಡಿವೈಎಸ್ಪಿ ಮುರಳೀಧರ್ ಮತಿತ್ತರರು ಉಪಸ್ಥಿತರಿದ್ದರು.