ಕನ್ನಡಪ್ರಭ ವಾರ್ತೆ, ತುಮಕೂರುವಿದ್ಯಾರ್ಥಿಗಳು ಕೇವಲ ಅಂಕ ಗಳಿಸುವ ಯಂತ್ರಗಳಾಗದೆ ಬದುಕಿನಲ್ಲಿ ಶಿಸ್ತು, ಸಂಸ್ಕಾರ ಬೆಳೆಸಿಕೊಳ್ಳಬೇಕು. ದೇಶಾಭಿಮಾನ, ಸಾಮಾಜಿಕ ಜವಾಬ್ದಾರಿಯ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ ಎಂ.ಬಿ. ಮರಿಬಸಪ್ಪ ಹೇಳಿದರು.ತಾವು ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮಧುಗಿರಿ ತಾಲೂಕು ಐ.ಡಿ. ಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಳೇ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದ ಅವರು, ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸದಿದ್ದರೂ ಪರವಾಗಿಲ್ಲ. ತಂದೆ-ತಾಯಿ ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ವಿದ್ಯಾರ್ಥಿ ಜೀವನದಲ್ಲೇ ಅಳವಡಿಸಿಕೊಳ್ಳಬೇಕು. ಇಂತಹ ಆಶಯಗಳನ್ನು ಒಳಗೊಂಡ ಮೌಲ್ಯಧಾರಿತ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯಬೇಕು. ಆ ಮೂಲಕ ಅವರು ಪರಿಪೂರ್ಣ ವ್ಯಕ್ತಿಗಳಾಗಿ ಬೆಳೆಯಬೇಕು ಎಂದು ತಿಳಿಸಿದರು. ಶಿಕ್ಷಕರು ವಿದ್ಯಾರ್ಥಿಗಳಿಗೆ ಉಣಬಡಿಸುವ ಜ್ಞಾನದ ಬುತ್ತಿ ಅವರು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ನೆರವಾಗಬೇಕು. ಆ ಮೂಲಕ ಅವರು ಜವಾಬ್ದಾರಿಯುತ ಪ್ರಜೆಗಳಾಗಿ ಸಮಾಜದ ಆಸ್ತಿಯಾಗಿ ರೂಪುಗೊಳ್ಳುತ್ತಾರೆ. ಸಂಸ್ಕಾರವಿಲ್ಲದ ಶಿಕ್ಷಣದಿಂದ ಸದೃಢ ವ್ಯಕ್ತಿತ್ವ ನಿರ್ಮಾಣ ಸಾಧ್ಯವಿಲ್ಲ. ತಂದೆ-ತಾಯಿ ಕೂಡಾ ಮಕ್ಕಳಿಗಾಗಿ ಆಸ್ತಿ ಮಾಡದೆ ಅವರಿಗೆ ಸದಾಚಾರ, ಸಂಸ್ಕಾರ ಕಲಿಸಿ ಅವರನ್ನೇ ಆಸ್ತಿಯನ್ನಾಗಿ ಮಾಡಬೇಕು. ವೃದ್ಧಾಪ್ಯದಲ್ಲಿ ತಂದೆತಾಯಿಯನ್ನು ಅನಾಥರನ್ನಾಗಿ ಮಾಡಬೇಡಿ, ಅವರನ್ನು ಗೌರವಿಸುವ, ಸಲಹುವ ಹೊಣೆ ಮಕ್ಕಳದಾಗಿರುತ್ತದೆ ಎಂಬ ಅರಿವು ಇರಲಿ ಎಂದು ಎಂ.ಬಿ. ಮರಿಬಸಪ್ಪ ಹೇಳಿದರು. ಈ ಸಂದರ್ಭದಲ್ಲಿ ಇದೇ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಾಂಶುಪಾಲರಾಗಿದ್ದ ಅಡವೀಶ್, ಶಿಕ್ಷಕರಗಳಾದ ದ್ಯಾಮಯ್ಯ, ನರಸಿಂಹಯ್ಯ, ಅಲ್ಲಭಕಾಶ, ರಂಗನಾಥ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.