ಕನ್ನಡಪ್ರಭ ವಾರ್ತೆ ಚಡಚಣ
ಸಮೀಪದ ಕನ್ನೂರು ಗುರುಮಠದಲ್ಲಿ ಲಿಂಗೈಕ್ಯ ಮಲ್ಲಿಕಾರ್ಜುನ ಶಿವಾಚಾರ್ಯರ 18ನೇ ಪುಣ್ಯಸ್ಮರಣೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಗುರುಪರಂಪರೆ ಜಾತ್ರೋತ್ಸವದ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಆಧುನಿಕತೆ ಮತ್ತು ಸುಧಾರಣೆ ನೆಪದಲ್ಲಿ ಭಾರತೀಯ ಉತ್ಕೃಷ್ಟ ಸಂಸ್ಕೃತಿಗೆ ಧಕ್ಕೆ ಉಂಟಾಗುತ್ತಿದೆ. ಬುದ್ಧಿ ಶಕ್ತಿ ಬೆಳೆದಷ್ಟು ಭಾವನೆಗಳು ಬೆಳೆಯದೆ ಎಲ್ಲ ರಂಗಗಳಲ್ಲಿ ಅಶಾಂತಿ, ಅತೃಪ್ತಿ ಹೆಚ್ಚುತ್ತಿದೆ. ಯುವ ಜನಾಂಗದಲ್ಲಿ ಧರ್ಮ ಮತ್ತು ರಾಷ್ಟ್ರಪ್ರಜ್ಞೆ ಕಡಿಮೆಯಾಗುತ್ತಿದೆ. ಇಂದಿನ ಜನಾಂಗಕ್ಕೆ ಶಿಕ್ಷಣದ ಜತೆ ಸಂಸ್ಕಾರ ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.ಜಗದ್ಗುರು ರೇಣುಕಾಚಾರ್ಯರು ಜೀವನ ಶ್ರೇಯಸ್ಸಿಗೆ ಅಹಿಂಸೆ, ಧ್ಯಾನ ಮತ್ತಿತರ ದಶ ಧರ್ಮಸೂತ್ರಗಳನ್ನು ಬೋಧಿಸಿದ್ದಾರೆ. ವೀರಶೈವ ಧರ್ಮ ಸಕಲ ಜೀವಾತ್ಮರಿಗೂ ಒಳ್ಳೆಯದನ್ನೇ ಬಯಸುತ್ತಿದೆ. ಸತ್ಯ, ಶುದ್ಧ ಹಾಗೂ ಧರ್ಮ ಮಾರ್ಗದಲ್ಲಿ ನಡೆದು ಎಲ್ಲರೂ ಆರೋಗ್ಯಪೂರ್ಣ ಸಮಾಜ ನಿರ್ಮಿಸಲು ಬದ್ಧರಾಗಬೇಕು ಎಂದರು.
ಸಮಾರಂಭ ಉದ್ಘಾಟಿಸಿದ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಮಾತನಾಡಿ, ಇಂದು ಬದುಕಿನಲ್ಲಿ ಶಾಂತಿ ನೆಮ್ಮದಿ ಇಲ್ಲದಂತಾಗಿದ್ದು, ಅಧ್ಯಾತ್ಮದ ಅರಿವು ಅಗತ್ಯವಾಗಿದೆ. ಶರಣರು ಅಮೂಲ್ಯ ಸಂದೇಶಗಳನ್ನು ಜಗತ್ತಿಗೆ ನೀಡಿದ್ದಾರೆ. ಅವುಗಳನ್ನು ಅನುಸರಿಸಿ ಎಲ್ಲರೂ ಸಾರ್ಥಕ ಬದುಕು ನಡೆಸಬೇಕು ಎಂದರು.
ಇಳಕಲ್, ಗುಡೂರಿನ ಅನ್ನದಾನ ಶಾಸ್ತ್ರಿಗಳಿಂದ ಕಲಬುರ್ಗಿ ಶರಣಬಸವೇಶ್ವರ ಪುರಾಣ ಪ್ರವಚನ ಜರುಗಿತು. ನಾಗಠಾಣ ಹಿರೇಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ಎಮ್ಮಿಗನೂರು ವಾಮದೇವ ಮಹಾಂತ ಶಿವಾಚಾರ್ಯರು ಆಶೀರ್ವಚನ ನೀಡಿದರು. ಪದ್ಮಶ್ರೀ ಡಾ.ಮಲ್ಲಮ್ಮ ಜೋಗತಿಗೆ ಸಮಾಜ ಸೇವಾ ಚಂದ್ರಿಕೆ ಹಾಗೂ ಹೊರ್ತಿಯ ಸಮಾಜ ಸೇವಕ ಅಣ್ಣಪ್ಪ ಖೈನೂರುಗೆ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪುಣ್ಯಸ್ಮರಣೋತ್ಸವ ನಿಮಿತ್ತ 1008 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ಸಮಾರಂಭಕ್ಕೂ ಮುನ್ನ ರಂಭಾಪುರಿ ಶ್ರೀಗಳಿಗೆ ಅಶ್ವಾರೂಢ ಸಾರೋಟಿನ ಮೆರವಣಿಗೆ ಮೂಲಕ ಭವ್ಯ ಸ್ವಾಗತ ಕೋರಲಾಯಿತು.