ಮಕ್ಕಳಿಗೆ ಶಿಕ್ಷಣದಷ್ಟೇ ಸಂಸ್ಕಾರವೂ ಮುಖ್ಯ: ಕೆ.ಪಿ.ಬಾಬು

KannadaprabhaNewsNetwork |  
Published : Nov 24, 2025, 01:30 AM IST
೨೩ಕೆಎಂಎನ್‌ಡಿ-೨ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯ ಸ್ಟ್ಯಾನ್‌ಫೋರ್ಡ್  ಪಬ್ಲಿಕ್ ಶಾಲೆಯಲ್ಲಿ ನಡೆದ ಚಿಂತನ-ಮಂಥನ, ಪ್ರೇರಣಾ ಕಾರ್ಯಾಗಾರವನ್ನು ರಾಮನಗರ ಡಯಟ್ ಉಪನ್ಯಾಸಕ ಕೆ.ಪಿ.ಬಾಬು ಉದ್ಘಾಟಿಸಿದರು. | Kannada Prabha

ಸಾರಾಂಶ

ಮಕ್ಕಳು ಯಾವ ರೀತಿ ಕಲಿಕೆಯಲ್ಲಿ ತೊಡಗಿದ್ದಾರೆ ಎಂಬುದನ್ನು ಪೋಷಕರು ಸೂಕ್ಷ್ಮವಾಗಿ ಗಮನಿಸಬೇಕು. ಓದುವುದಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಇತರೆ ಮಕ್ಕಳೊಂದಿಗೆ ಹೋಲಿಕೆ ಮಾಡದೆ ಅವರಷ್ಟಕ್ಕೇ ಓದುವುದಕ್ಕೆ ಮುಕ್ತವಾಗಿ ಬಿಡಬೇಕು. ಯಾವುದೇ ಕಾರಣಕ್ಕೂ ಮಕ್ಕಳ ಮೇಲೆ ಒತ್ತಡ ಹೇರಬಾರದು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಮಕ್ಕಳಿಗೆ ಶಿಕ್ಷಣಕ್ಕೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಸಂಸ್ಕಾರವನ್ನು ಕಲಿಸುವುದಕ್ಕೆ ನೀಡುವುದು ಅಷ್ಟೇ ಮುಖ್ಯವಾಗಿದೆ ಎಂದು ರಾಮನಗರ ಡಯಟ್ ಉಪನ್ಯಾಸಕ ಕೆ.ಪಿ.ಬಾಬು ಕಿವಿಮಾತು ಹೇಳಿದರು.

ತಾಲೂಕಿನ ಕ್ಯಾತನಹಳ್ಳಿಯಲ್ಲಿರುವ ಸ್ಟ್ಯಾನ್ಫೋರ್ಡ್ ಪಬ್ಲಿಕ್ ಶಾಲೆಯಲ್ಲಿ ಚಿಂತನ-ಮಂಥನ, ಪ್ರೇರಣಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಮಕ್ಕಳು ವಿದ್ಯಾವಂತರಾಗುವುದರ ಜೊತೆಗೆ ಸಂಸ್ಕಾರವಂತರೂ ಆಗಬೇಕು. ಸಂಸ್ಕಾರವಿಲ್ಲದ ಶಿಕ್ಷಣ ಯಾವುದೇ ಪ್ರಯೋಜನವಿಲ್ಲ ಎಂದರು.

ಮಕ್ಕಳು ಯಾವ ರೀತಿ ಕಲಿಕೆಯಲ್ಲಿ ತೊಡಗಿದ್ದಾರೆ ಎಂಬುದನ್ನು ಪೋಷಕರು ಸೂಕ್ಷ್ಮವಾಗಿ ಗಮನಿಸಬೇಕು. ಓದುವುದಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಇತರೆ ಮಕ್ಕಳೊಂದಿಗೆ ಹೋಲಿಕೆ ಮಾಡದೆ ಅವರಷ್ಟಕ್ಕೇ ಓದುವುದಕ್ಕೆ ಮುಕ್ತವಾಗಿ ಬಿಡಬೇಕು. ಯಾವುದೇ ಕಾರಣಕ್ಕೂ ಮಕ್ಕಳ ಮೇಲೆ ಒತ್ತಡ ಹೇರಬಾರದು. ಇದರಿಂದ ಅವರು ಮಾನಸಿಕ ಖಿನ್ನತೆಗೆ ಒಳಗಾಗುವ ಅಪಾಯವಿದೆ ಎಂದು ಎಚ್ಚರಿಕೆ ನೀಡಿದರು.

ಚಿಕ್ಕ ವಯಸ್ಸಿನಲ್ಲೇ ಮಕ್ಕಳಲ್ಲಿ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಬೇಕು. ಧೈರ್ಯ, ಆತ್ಮವಿಶ್ವಾಸವನ್ನು ಹೆಚ್ಚಿಸುವುದರೊಂದಿಗೆ ಸ್ವಾಭಿಮಾನಿಗಳನ್ನಾಗಿ ಅವರ ಬದುಕನ್ನು ರೂಪಿಸುವ ಅಗತ್ಯವಿದೆ. ಇದರಿಂದ ಮಕ್ಕಳು ಎಂದಿಗೂ ಹಾದಿ ತಪ್ಪುವುದಿಲ್ಲ ಎಂದು ವಿವರಿಸಿದರು.

ಪಠ್ಯಬೋಧನೆಯಷ್ಟೇ ಶಿಕ್ಷಕರ ಕೆಲಸವಲ್ಲ. ಪಠ್ಯದಲ್ಲಿರುವ ವಿಷಯದ ಜೊತೆಗೆ ಸಾಮಾನ್ಯ ಜ್ಞಾನವನ್ನೂ ಬೆಳೆಸುವುದು ಶಿಕ್ಷಕರ ಕರ್ತವ್ಯ. ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ಮಕ್ಕಳನ್ನು ಯಾವ ರೀತಿ ತಯಾರು ಮಾಡಬೇಕು. ಯಾವ ಯಾವ ಕ್ಷೇತ್ರಗಳಲ್ಲಿ ಹೆಚ್ಚು ಅವಕಾಶಗಳಿವೆ, ಪ್ರಾಧಾನ್ಯತೆ ಇದೆ, ಯಾವುದನ್ನು ಆಯ್ಕೆ ಮಾಡಿಕೊಂಡರೆ ಭವಿಷ್ಯ ಉಜ್ವಲವಾಗಲಿದೆ ಎಂಬುದನ್ನು ಮಾರ್ಗದರ್ಶನ ಮಾಡಬೇಕು ಎಂದರು.

ಪರೀಕ್ಷಾ ಸಮಯದಲ್ಲಿ ಮಕ್ಕಳು ಒತ್ತಡಗಳಿಗೆ ಒಳಗಾಗಬಾರದು. ಭಯಪಡಬಾರದು. ಅಂದಿನ ಪಾಠಗಳನ್ನು ಅಂದೇ ಓದಿ ಕರಗತ ಮಾಡಿಕೊಂಡರೆ ಪರೀಕ್ಷೆ ಎದುರಿಸುವುದಕ್ಕೆ ಸುಲಭವಾಗಲಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿರುವುದರಿಂದ ಮೊಬೈಲ್, ಟೀವಿ ನೋಡುವುದರಿಂದ ವಿದ್ಯಾರ್ಥಿಗಳು ದೂರ ಉಳಿಯಬೇಕು. ಈಗಿನಿಂದಲೇ ಕಲಿಕೆಯ ವೇಳಾಪಟ್ಟಿ ಹಾಕಿಕೊಂಡು ಅದರಂತೆ ಕಲಿಕೆಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.

ನಾಲ್ಕೈದು ವರ್ಷಗಳ ಹಿಂದಿನ ಪ್ರಶ್ನೆಪತ್ರಿಕೆಗಳನ್ನು ಪರಾಮರ್ಶೆ ಮಾಡಬೇಕು. ಕಷ್ಟದ ವಿಷಯಗಳಿದ್ದರೆ ಅದಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಡಬೇಕು. ವಿಷಯಗಳು ಅರ್ಥವಾಗದಿದ್ದರೆ ಶಿಕ್ಷಕರಿಂದ ಕೇಳಿ ಮನನ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳೇ ವಿಷಯವಾರು ಒಂದಷ್ಟು ಪ್ರಶ್ನೆಗಳನ್ನು ಹಾಕಿಕೊಂಡು ಉತ್ತರ ಬರೆದು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಕೆ.ಎನ್.ವಾಸುದೇವ, ಉಪಾಧ್ಯಕ್ಷ ಕೆ.ಕೃಷ್ಣೇಗೌಡ, ಕಾರ್ಯದರ್ಶಿ ಕೆ.ವಿ.ಚೇತನ್, ಖಜಾಂಚಿ ಡಾ.ಕೆ.ಸೌಮ್ಯ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ