ಗದಗ: ಅಮಾಯಕ 11 ಮಂದಿ ಸಾವಿಗೆ ಕಾರಣರಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ನೈತಿಕ ಹೊಣೆಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಅವರು ಶುಕ್ರವಾರ ಸಂಜೆ ಗದಗ ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು. ಘಟನೆಗೆ ಸಂಬಂಧಿಸಿದಂತೆ ಆಗಿರುವ ಎಫ್ಐಆರ್ನಲ್ಲಿ ವಿಜಯೋತ್ಸವಕ್ಕೆ ಅವಕಾಶ ನೀಡದಿರುವುದು ಸ್ಪಷ್ಟವಾಗಿದೆ. ಆದರೂ, ನಿಷ್ಠಾವಂತ ಪೊಲೀಸ್ ಅಧಿಕಾರಿಗಳ ತಲೆದಂಡ ಮಾಡಿರುವುದು ಅನ್ಯಾಯ. ಇದು ದಕ್ಷ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಗ್ಗಿಸಿದೆ. ಬಿಜೆಪಿ ಇದನ್ನು ಉಗ್ರವಾಗಿ ಖಂಡಿಸುತ್ತದೆ ಎಂದರು.ಪ್ರತಿಭಟನೆಯಲ್ಲಿ ಅಶೋಕ ನವಲಗುಂದ, ಬಿಜೆಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಕೊಳ್ಳಿ ಮುಂತಾದವರು ಮಾತನಾಡಿದರು.ಈ ಸಂದರ್ಭದಲ್ಲಿ ಮುಖಂಡರಾದ ಎಂ.ಎಂ.ಹಿರೇಮಠ, ಲಿಂಗರಾಜ ಪಾಟೀಲ, ಆರ್.ಕೆ ಚವ್ಹಾಣ, ವಸಂತ ಮೇಟಿ, ಸುರೇಶ ಮರಳಪ್ಪನವರ, ಬೂದಪ್ಪ ಹಳ್ಳಿ, ಬಿ.ಎಚ್. ಲದವಾ, ಆನಂದಪ್ಪ ಹಾರೋಗೇರಿ, ಸಂತೋಷ ಅಕ್ಕಿ, ರಾಘವೇಂದ್ರ ಯಳವತ್ತಿ, ಮಂಜುನಾಥ ಕೋಟ್ನಿಕಲ್, ವಸಂತ ಪಡಗದ, ಸುರೇಶ ಚಿತ್ತರಗಿ, ವಿದ್ಯಾವತಿ ಗಡಗಿ, ವಿಜಯಲಕ್ಷ್ಮಿ ಮಾನ್ವಿ, ಸ್ವಾತಿ ಅಕ್ಕಿ ಸೇರಿದಂತೆ ಹಲವರು ಇದ್ದರು. ಮಾನವ ಸರಪಳಿ: ಗದಗ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.ಈ ವೇಳೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರ ಹರಿಯಲು ಯತ್ನಿಸಿದರು. ಈ ವೇಳೆ ಪೊಲೀಸರು ತಡೆಯಲು ಮುಂದಾದಾಗ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು.ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಘಟನೆಯ ಹೊಣೆಗಾರಿಕೆ ಹೊರಲಿ, ಮೃತರ ಕುಟುಂಬಸ್ಥರಿಗೆ ಹಾಗೂ ಗಾಯಾಳುಗಳಿಗೆ ಕೂಡಲೇ ಪರಿಹಾರ ನೀಡಲಿ, ಕರ್ತವ್ಯನಿಷ್ಠ ಪೊಲೀಸರೊಂದಿಗೆ ನಾವಿದ್ದೇವೆ ಎಂಬ ಭಿತ್ತಿಪತ್ರಗಳನ್ನು ಪ್ರದರ್ಶಿಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.