ಕನ್ನಡಪ್ರಭ ವಾರ್ತೆ ಪಾಂಡವಪುರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಕಳೆದ 2 ವರ್ಷದ ಹಿಂದೆ ತೆಗೆದಿದ್ದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಿರಿಯ ಬಿಟ್ಟು ಸಣ್ಣತನ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಹಾರಿಹಾಯ್ದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಮ್ಮಿಶ್ರ ಸರಕಾರದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್ ಸಚಿವರಾಗಿ ಕೆಲಸ ಮಾಡುತ್ತಿದ್ದೆವು. ಜತೆಗೆ ಕಳೆದ ಲೋಕಸಭಾ ಚುನಾವಣೆ ವೇಳೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ನಾನು ಮತ್ತು ಡಿಕೆಶಿ ಇಬ್ಬರು ಕೆಲಸ ಮಾಡಿದ್ದೇವೆ ಎಂದರು. ಒಂದಮ್ಮೆ ಆಕಸ್ಮಿಕವಾಗಿ ಏಟ್ರಿಯಾ ಹೋಟೆಲ್ನಲ್ಲಿ ಭೇಟಿಯಾದ ವೇಳೆ ಕಾರ್ಯಕರ್ತರೊಬ್ಬರು ನೀಡುತ್ತಿದ್ದ ಹೂಗುಚ್ಚ ಹಿಡಿದು ನಿಂತಿರುವ ಘೋಟೋವನ್ನು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಗೊಂದಲ ಸೃಷ್ಠಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಎರಡು ವರ್ಷದ ಹಳೇಯ ಫೋಟೋವನ್ನು ಹಾಕುವ ಮೂಲಕ ಸೋಲಿನ ಭೀತಿಯಿಂದಾಗಿ ಕಾಂಗ್ರೆಸ್ನವರು ಈರೀತಿಯ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ವೇಳೆ ಜಿಲ್ಲೆಯ ಜನತೆ ಅವರಿಗೆ ತಕ್ಕ ಪಾಠಕಲಿಸಲಿದ್ದಾರೆ ಎಂದು ಕಿಡಿಕಾರಿದರು. ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯ ಗೆಲುವು ಖಚಿತ. ಶ್ರೀರಾಮನ ಆಶೀರ್ವಾದದಿಂದ ದೇಶದ ಪ್ರಧಾನಿ ನರೇಂದ್ರಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಬೆಂಬಲಿಸಬೇಕೆಂದು ಜಿಲ್ಲೆ ಸೇರಿದಂತೆ ರಾಜ್ಯದ ಜನ ತೀರ್ಮಾನಿಸಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.