ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ದೇವಸ್ಥಾನಕ್ಕೆ ಭೇಟಿ ನೀಡದ ಸಾಮಾನ್ಯ ಪ್ರಯಾಣಿಕರ ವಾಹನಗಳಿಗೂ ಪಾರ್ಕಿಂಗ್ ಶುಲ್ಕದ ಹೆಸರಿನಲ್ಲಿ ರಸ್ತೆ ಮಧ್ಯದಲ್ಲೇ ಹಣ ವಸೂಲಿ ಮಾಡಲಾಗುತ್ತಿದೆ ಎಂದು ವಾಹನ ಸವಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಘಾಟಿ ಮಾರ್ಗವು ಸುತ್ತಮುತ್ತಲಿನ ಗ್ರಾಮಗಳು, ಕೃಷಿ ಜಮೀನುಗಳು ಹಾಗೂ ಗೌರಿಬಿದನೂರು ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ಸಂಪರ್ಕ ರಸ್ತೆ ಆಗಿದ್ದು, ಪ್ರತಿದಿನ ನೂರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ಆದರೆ ದೇವಸ್ಥಾನ ಪಾರ್ಕಿಂಗ್ ಶುಲ್ಕದ ಹೆಸರಿನಲ್ಲಿ ದೇವಾಲಯದಿಂದ 1 ಕಿಮೀ ದೂರದಲ್ಲೇ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿರುವ ಕ್ರಮ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎನ್ನಲಾಗಿದೆ.ಈ ಕುರಿತು ಘಾಟಿ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರಿಗೆ ದೂರು ಸಲ್ಲಿಸಿರುವ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ನರೇಂದ್ರಕುಮಾರ್, ರಸ್ತೆ ಮಧ್ಯದಲ್ಲೇ ವಾಹನಗಳನ್ನು ತಡೆದು ಯಾವುದೇ ಗುರುತಿನ ಚೀಟಿ ಧರಿಸದ ಕೆಲವರು ಸುಂಕ ವಸೂಲಿಗೆ ಮುಂದಾಗುತ್ತಿದ್ದಾರೆ. ದೇವಸ್ಥಾನಕ್ಕೆ ತೆರಳುವ ಪ್ರಯಾಣಿಕರಲ್ಲದಿದ್ದರೂ, ಸ್ಥಳೀಯ ಗ್ರಾಮಗಳ ನಿವಾಸಿಗಳು ಎಂದು ತಿಳಿಸಿದರೂ ಗೂಂಡಾವರ್ತನೆಯಿಂದ ವಸೂಲಿಗೆ ಮುಂದಾಗಿದ್ದಾರೆ ಎಂದು ದೂರಿದ್ದಾರೆ.
ದೇವಸ್ಥಾನಕ್ಕೆ ತೆರಳುವ ಭಕ್ತರಿಂದ ಪಾರ್ಕಿಂಗ್ ಶುಲ್ಕ ಪಡೆಯುವುದು ಬೇರೆ ವಿಷಯ. ಆದರೆ ಕೇವಲ ರಸ್ತೆಯಲ್ಲಿ ಹಾದು ಹೋಗುವ ವಾಹನಗಳ ಮೇಲೂ ಶುಲ್ಕ ವಿಧಿಸುವುದು ನ್ಯಾಯಸಮ್ಮತವಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಪಂಚಾಯಿತಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.