ಕನ್ನಡಪ್ರಭ ವಾರ್ತೆ ಮೂಲ್ಕಿ
ಕಳೆದ ಕೆಲವು ದಿನಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿವಾಹ ಮತ್ತಿತರ ಧಾರ್ಮಿಕ ಕಾರ್ಯಗಳು ನಡೆಯುತ್ತಿದ್ದು ಮೂಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯ ಮುಖ್ಯ ರಸ್ತೆಯಲ್ಲಿ ಕಿನ್ನಿಗೋಳಿ ಪೇಟೆಯಿದ್ದು ಕಳೆದ ಕೆಲವು ದಿನಗಳಿಂದ ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗುತ್ತಿದ್ದು ಸಮಸ್ಯೆಯನ್ನು ಕೇಳುವವರು ಇಲ್ಲದಂತಾಗಿದೆ.
ಕಿನ್ನಿಗೋಳಿ ಬಸ್ ನಿಲ್ದಾಣದ ಸರ್ಕಲ್ನಿಂದ ಯುಗಪುರುಷದವರೆಗೆ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ ಮಾಡುತ್ತಿದ್ದು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಈ ಬಗ್ಗೆ ಅನೇಕ ಬಾರಿ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಹಾಗೂ ಮಂಗಳೂರು ಉತ್ತರ ಸಂಚಾರಿ ಠಾಣಾ ಪೊಲೀಸರಿಗೆ ದೂರು ನೀಡಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ ಕೆಲವು ದಿನಗಳಿಂದ ಮದುವೆ ಮುಂಜಿ ಸಮಾರಂಭ ಪ್ರಯುಕ್ತ ವಾಹನ ಸಂಚಾರ ದಟ್ಟಣೆ ವಿಪರೀತವಾಗಿದ್ದು ಎಲ್ಲೆಂದರಲ್ಲಿ ವಾಹನ ಸಂಚಾರ ನಿಲುಗಡೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.ಬುಧವಾರ ಮತ್ತು ಗುರುವಾರ ಕಟೀಲು ದೇವಳ ಹಾಗೂ ಆಸುಪಾಸಿನಲ್ಲಿ ಹೆಚ್ಚಿನ ವಿವಾಹ ಸಮಾರಂಭವಿದ್ದು ಕಿನ್ನಿಗೋಳಿ ರಾಜ್ಯ ಹೆದ್ದಾರಿಯಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ಕಟೀಲು ದೇವಸ್ಥಾನಕ್ಕೆ ಹೋಗುವ ಮದುವೆಯ ದಿಬ್ಬಣಗಳು, ಬಜಪೆ ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು ತುಂಬಾ ಹೊತ್ತು ಟ್ರಾಫಿಕ್ನಲ್ಲಿ ಸಿಲುಕಿ ಸಂಕಟಪಟ್ಟಿದ್ದಾರೆ.
- ದಾಮೋದರ್ ಕಿನ್ನಿಗೋಳಿ