ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಕರಸಂಕ್ರಾತಿಗೆ ಮೊದಲು ರಾಜ್ಯದ ಎಲ್ಲ ಶ್ರದ್ಧಾಕೇಂದ್ರಗಳಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಸ್ವಚ್ಛತಾ ಸಪ್ತಾಹ ನಡೆಯಿತು.ಧರ್ಮಸ್ಥಳ ಯೋಜನೆಯು ಕಳೆದ ೧೦ ವರ್ಷಗಳಿಂದ ನಿರಂತರವಾಗಿ ತನ್ನ ಸ್ವ-ಸಹಾಯ ಸಂಘಗಳ ಸದಸ್ಯರ ಮೂಲಕ ಶ್ರದ್ಧಾಕೇಂದ್ರದ ಸ್ವಚ್ಛತೆಯನ್ನು ಕೈಗೊಳ್ಳುತ್ತಿದ್ದು, ಈ ಬಾರಿ ಜನವರಿ ೭ ರಿಂದ ೧೩ ರವೆರೆಗೆ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹ ನಡೆಯಿತು.ರಾಜ್ಯದಾದ್ಯಂತ ೧೪,೦೪೯ ಶ್ರದ್ಧಾಕೇಂದ್ರಗಳನ್ನು ಗುರುತಿಸಲಾಗಿದ್ದು, ಸುಮಾರು ೩,೩೯,೬೯೯ ಸ್ವಯಂ ಸೇವಕರು, ದೇವಾಲಯದ ಆಡಳಿತ ಮಂಡಳಿ, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ಸದಸ್ಯರು, ನವಜೀವನ ಸಮಿತಿಯ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣೆಯ ಸದಸ್ಯರು, ಸ್ವಚ್ಛತಾ ಸೇನಾನಿಗಳು, ಊರಿನ ಗಣ್ಯರು, ಗ್ರಾಮಪಂನ ಸದಸ್ಯರು ವಿವಿಧ ಸಂಘ ಸಂಸ್ಥೆಯ ಕಾರ್ಯಕರ್ತರು ಭಾಗವಹಿಸಿದ್ದರು ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮ ನಡಿಗೆ ಶ್ರದ್ಧಾಕೇಂದ್ರದ ಸ್ವಚ್ಛತೆಯೆಡೆಗೆ ಎಂಬ ಉದ್ದೇಶದೊಂದಿಗೆ ದೇವಸ್ಥಾನ, ಬಸದಿ, ಮಸೀದಿ, ಚರ್ಚ್ ಗಳ ಆವರಣ ಸ್ವಚ್ಛತೆ, ಒಳಾಂಗಣ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಈ ಸ್ವಚ್ಛತಾ ಸಪ್ತಾಹದಲ್ಲಿ ೧೩,೨೮೨ ದೇವಸ್ಥಾನ, ೩೩ ಬಸದಿ, ೩೫೦ ಮಸೀದಿ, ೧೨೦ ಚರ್ಚ್, ಸೇರಿದಂತೆ ಇತರೆ ೨೬೪ ಸಾರ್ವಜನಿಕ ಸ್ಥಳ, ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಗಿದೆ. ದೇವಸ್ಥಾನದ ಕಲ್ಯಾಣಿ, ಸಭಾಭವನ, ಅರಳಿಕಟ್ಟೆ ಸ್ವಚ್ಛಗೊಳಿಸಲಾಗಿದೆ. ಶ್ರದ್ಧಾ ಕೇಂದ್ರದ ಪರಿಕರಗಳನ್ನು ಸ್ವಚ್ಛಗೊಳಿಸಲಾಗಿದೆ. ಸಾರ್ವಜನಿಕ ಶೌಚಾಲಯ, ನಗರ ಸ್ವಚ್ಛತೆ, ಬೀದಿ ಸ್ವಚ್ಛತೆಗೆ ಒತ್ತು ನೀಡಲಾಗಿದೆ. ತ್ಯಾಜ್ಯಗಳನ್ನು ಬಿಸಾಡಲು ತೊಟ್ಟಿ ಇಟ್ಟು ಕಸವನ್ನು ಅಲ್ಲಿಯೇ ಹಾಕುವಂತೆ ಭಕ್ತಾದಿಗಳಿಗೆ ಸೂಚನೆ ನೀಡುವ ಫಲಕಗಳನ್ನು ಹಾಕಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.