ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿಗೆ ಖಂಡನೆ: - ಈಶ್ವರ ಖಂಡ್ರೆ

KannadaprabhaNewsNetwork | Published : Jan 24, 2024 2:01 AM

ಸಾರಾಂಶ

ಸಮಾಜದ ಎಲ್ಲರಿಗೂ ಸಮಾನತೆ, ಸೌಲಭ್ಯ, ನ್ಯಾಯ ದೊರೆತಾಗ ಮಾತ್ರ ರಾಮರಾಜ್ಯ ಆಗುತ್ತದೆ. ಆದರೆ, ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಯ ಮೇಲೆ ದಾಳಿ ನಡೆಯುತ್ತಿರುವಾಗ ನ್ಯಾಯ ಸಿಗಲು ಹೇಗೆ ಸಾಧ್ಯ, ರಾಮರಾಜ್ಯ ಆಗಲು ಹೇಗೆ ಸಾಧ್ಯ

- ರಾಜಕೀಯ ಸ್ವಾರ್ಥಕ್ಕಾಗಿ ದೇಶವನ್ನು ಧರ್ಮ, ಜಾತಿ ಹೆಸರಲ್ಲಿ ಒಡೆಯಲಾಗುತ್ತಿದೆ----

ಕನ್ನಡಪ್ರಭ ವಾರ್ತೆ ಮೈಸೂರು

ಅಸ್ಸಾಂನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿರುವುದನ್ನು ಖಂಡಿಸಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯವರು ನಗರದ ದಾಸಪ್ಪ ವೃತ್ತದಲ್ಲಿರುವ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಸಮಾಜದ ಎಲ್ಲರಿಗೂ ಸಮಾನತೆ, ಸೌಲಭ್ಯ, ನ್ಯಾಯ ದೊರೆತಾಗ ಮಾತ್ರ ರಾಮರಾಜ್ಯ ಆಗುತ್ತದೆ. ಆದರೆ, ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಯ ಮೇಲೆ ದಾಳಿ ನಡೆಯುತ್ತಿರುವಾಗ ನ್ಯಾಯ ಸಿಗಲು ಹೇಗೆ ಸಾಧ್ಯ, ರಾಮರಾಜ್ಯ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ರಾಜಕೀಯ ಸ್ವಾರ್ಥಕ್ಕಾಗಿ ಇಂದು ದೇಶವನ್ನು ಧರ್ಮ, ಜಾತಿ ಹೆಸರಲ್ಲಿ ಒಡೆಯಲಾಗುತ್ತಿದೆ. ಇದು ದೇಶದ ಸಮಗ್ರತೆ, ಸಾರ್ವಭೌಮತ್ವಕ್ಕೆ ಮಾರಕವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಯಲ್ಲಿ ಬಿಜೆಪಿಯ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಘೋಷಣೆ ಕೂಗಿ, ದಾಳಿ ಮಾಡುತ್ತಿರುವುದು ಅಕ್ಷಮ್ಯ ಮತ್ತು ಹೇಯ ಕೃತ್ಯ. ಇದು ಪ್ರಜಾಪ್ರಭುತ್ವ ನೀತಿಗೆ ವಿರುದ್ಧವಾಗಿದೆ. ಬಿಜೆಪಿ ಬಾಯಲ್ಲಿ ಶಾಂತಿ ಮಂತ್ರ ಪಠಿಸುತ್ತದೆ. ಬಗಲಲ್ಲಿ ದೊಣ್ಣೆ ಹಿಡಿದು ಹಲ್ಲೆಗೆ ಹೋಗುತ್ತದೆ. 25 ಬಿಜೆಪಿ ಕಾರ್ಯಕರ್ತರು ಬಡಿಗೆ ಹಿಡಿದು ತಮ್ಮ ನ್ಯಾಯ ಯಾತ್ರೆಯ ಬಸ್ ಹಿಂದೆ ಬಂದಿದ್ದರು ಎಂದು ನಾಗಾಂವ್ ನಲ್ಲಿ ಸ್ವತಃ ರಾಹುಲ್ ಗಾಂಧಿ ಅವರೇ ಹೇಳಿದ್ದಾರೆ. ಜೊತೆಗೆ ಅಸ್ಸಾಂನ ಬಿಜೆಪಿ ಸರ್ಕಾರ ನ್ಯಾಯ ಯಾತ್ರೆಯಲ್ಲಿ ಭಾಗಿಯಾಗದಂತೆ ಆ ರಾಜ್ಯದ ಜನತೆಗೆ ಬೆದರಿಕೆ ಹಾಕುತ್ತಿದೆ. ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿದ್ದೇವೋ ಅಥವಾ ಸರ್ವಾಧಿಕಾರಿ ರಾಷ್ಟ್ರದಲ್ಲಿದ್ದೇವೆಯೋ ಎಂದು ಅನುಮಾನ ಮೂಡುತ್ತದೆ ಎಂದು ಅವರು ಕಿಡಿಕಾರಿದರು.

ಬಿಜೆಪಿ ಬಾವುಟ ಹಿಡಿದು ಬಂದ ಗುಂಪು ನ್ಯಾಯ ಯಾತ್ರೆಗೆ ಅಡ್ಡಿಪಡಿಸುತ್ತಿದೆ. ಆದರೆ, ನ್ಯಾಯ ಯಾತ್ರೆ ನಿಲ್ಲುವುದಿಲ್ಲ. ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಗೆ ಮತ್ತು ನ್ಯಾಯ ಯಾತ್ರೆಗೆ ದೇಶಾದ್ಯಂತ ದೊರಕುತ್ತಿರುವ ಜನ ಬೆಂಬಲದಿಂದ ಬಿಜೆಪಿ ವಿಚಲಿತವಾಗಿದೆ. ಹೀಗಾಗಿಯೇ ಈ ರೀತಿ ದಾಳಿ ಮಾಡುತ್ತಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಎಲ್ಲಾ ಪಕ್ಷಗಳಿಗೂ ಸಮಾನವಾದ ಅವಕಾಶ ಇರಬೇಕು ಎಂದು ಅವರು ಒತ್ತಾಯಿಸಿದರು.

ಶಾಸಕ ದರ್ಶನ್ ಧ್ರುವನಾರಾಯಣ್, ಮಾಜಿ ಸಂಸದ ಕಾಗಲವಾಡಿ ಎಂ. ಶಿವಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ, ಮಾಜಿ ಮೇಯರ್ ಗಳಾದ ಟಿ.ಬಿ. ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ, ಎಂಡಿಎ ಮಾಜಿ ಅಧ್ಯಕ್ಷ ಸಿ. ಬಸವೇಗೌ, ಜಿಪಂ ಮಾಜಿ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ, ಮುಖಂಡರಾದ ಚಂದ್ರಮೌಳಿ, ಶಿವಣ್ಣ, ಈಶ್ವರ್ ಚಕ್ಕಡಿ, ಅಶೋಕ್, ನಾಗೇಶ್, ಶ್ರೀನಾಥ್ ಬಾಬು, ಡಾ. ಶುಶ್ರುತ್ ಗೌಡ, ಲೋಕೇಶ್ ಕುಮಾರ್, ಮಂಜುಳಾ ಮಂಜುನಾಥ್, ವೆಂಕಟೇಶ್, ಪಿ. ರಾಜು, ಶಿವಮಲ್ಲು, ಪ್ರದೀಪ್ ಕುಮಾರ್, ಯೋಗೇಶ್ ಮೊದಲಾದವರು ಇದ್ದರು.

----

ಕೋಟ್...

ಗೂಂಡಾಗಳಿಗೆ ಬಾಡಿಗೆ ನೀಡಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ನಿಲ್ಲಿಸಲು ಬಿಜೆಪಿಯವರು ಯತ್ನಿಸಿದ್ದಾರೆ. ಯಾತ್ರೆಯಲ್ಲಿ ಮೋದಿ, ಶ್ರೀರಾಮನಿಗೆ ಜೈಕಾರ ಕೂಗಿ ಪ್ರಚೋದಿಸಲು ಯತ್ನಿಸಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ರಾಹಲ್ ಗಾಂಧಿಯವರ ಯಾತ್ರೆ ನಿಲ್ಲುವುದಿಲ್ಲ. ಬಿಜೆಪಿಯವರ ಯಾವುದೇ ಆಟವೂ ನಡೆಯುವುದಿಲ್ಲ.

- ಈಶ್ವರ್ ಖಂಡ್ರೆ, ಅರಣ್ಯ ಸಚಿವ

Share this article