ಚನ್ನಪಟ್ಟಣ: ತಾಲೂಕಿನ ದಶವಾರ ಮುಖ್ಯ ರಸ್ತೆ ಡಾಂಬರೀಕರಣ ವಿಳಂಬ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ದಶವಾರ ರಸ್ತೆ ತಡೆ ನಡೆಸಿದ ಗ್ರಾಮಸ್ಥರು, ರಸ್ತೆ ನಿರ್ಮಾಣ ಕಾಮಗಾರಿಗೆಂದು ಆರು ತಿಂಗಳ ಹಿಂದೆ ಜಲ್ಲಿಕಲ್ಲು ಹಾಕಲಾಗಿದ್ದು, ಡಾಂಬರೀಕರಣ ನಡೆಸಿಲ್ಲ. ಜಲ್ಲಿಕಲ್ಲಿನ ದೂಳು ಹೊರಹೊಮ್ಮುತ್ತಿದ್ದು, ಮನೆಗಳಲ್ಲಿ ವಾಸ ಮಾಡಲು ಆಗುತ್ತಿಲ್ಲ. ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು, ಮಕ್ಕಳು, ವಯಸ್ಸಾದವರು ಸಂಚರಿಸಲು ಸಾಧ್ಯವಾಗದೇ ಪರದಾಡುವಂತಾಗಿದೆ ಎಂದು ಆರೋಪಿಸಿದರು.ರಸ್ತೆಯಲ್ಲಿ ಡಾಂಬರು ಕಿತ್ತು ಹೋಗಿದ್ದು, ಸರಕಾರದಿಂದ ಕಣ್ವ ಡ್ಯಾಂನಿಂದ ಮಾಕಳಿಯ ಪ್ಲಾಂಟೇಷನ್ ದೊಡ್ಡಿವರೆಗಿನ ರಸ್ತೆ ಡಾಂಬರೀಕರಣಕ್ಕಾಗಿ ೧೦ ಕೋಟಿ ಹಣ ಬಿಡುಗಡೆಯಾಗಿದೆ. ಗುತ್ತಿಗೆಗಾರ ರಸ್ತೆ ಅಗೆದು ಜಲ್ಲಿ ಹಾಕಿ ಹೋಗಿದ್ದಾರೆ. ಕಾಮಗಾರಿ ಮುಂದುವರಿಸದೆ ಜಲ್ಲಿ ಕಲ್ಲುಗಳು ಮೇಲೆದ್ದಿದ್ದು, ಇದರಿಂದ ರಸ್ತೆಯಲ್ಲಿ ಓಡಾಡುವುದೆ ಕಷ್ಟವಾಗಿದೆ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಉಡಾಫೆ ಉತ್ತರ ನೀಡುತ್ತಾರೆಂದು ಕಿಡಿಕಾರಿದರು.
ಟೆಂಡರ್ ಪಡೆದ ಗುತ್ತಿಗೆದಾರ ನಕಲಿ ಬ್ಯಾಂಕ್ ಗ್ಯಾರಂಟಿ ನೀಡಿದ್ದ ಕಾರಣ ಆತನನ್ನು ಬ್ಲಾಕ್ ಲಿಸ್ಟ್ಗೆ ಸೇರಿಸಿದ್ದು, ರಸ್ತೆ ಟೆಂಡರ್ ರದ್ದುಗೊಳಿಸಲಾಗಿದೆ. ಈ ವಿಚಾರ ಅಧಿಕಾರಿಗಳಿಗೆ ತಿಳಿದಿದ್ದರೂ ಪರ್ಯಾಯ ಕ್ರಮಗಳನ್ನು ಕೈಗೊಳ್ಳದ ಕಾರಣ ಕಾಮಗಾರಿ ಅಪೂರ್ಣಗೊಂಡಿದೆ. ಈ ಸಂಬಂಧ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಅಧಿಕಾರಿಗಳ ಭೇಟಿ:
ಗ್ರಾಮಸ್ಥರು ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಎಂ.ಕೆ.ದೊಡ್ಡಿ ಪೊಲೀಸರು ಆಗಮಿಸಿ ಪ್ರತಿಭಟನಾನಿರತರನ್ನು ಸಮಾಧಾನ ಪಡಿಸಲು ಯತ್ನಿಸಿದರು. ಈ ವೇಳೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು, ಸ್ಥಳಕ್ಕೆ ಅಧಿಕಾರಿಗಳು ಬಂದು ಭರವಸೆ ನೀಡುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ಗ್ರಾಮಸ್ಥರು ಪಟ್ಟು ಹಿಡಿದರು.ಪಟ್ಟು ಸಡಲಿಸದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಇಇ ಮಹದೇವಯ್ಯ ಆಗಮಿಸಿ ಒಂದೆರಡು ದಿನಗಳಲ್ಲಿ ಕಾಮಗಾರಿ ಪ್ರಾರಂಭಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.