ಬೆಂಗ್ಳೂರು, ಮೈಸೂರು, ಮಂಗ್ಳೂರಲ್ಲಿ ಡೇಟಾ ಪಾರ್ಕ್‌

KannadaprabhaNewsNetwork |  
Published : May 01, 2026, 01:45 AM IST
ಕೆ.ಜೆ.ಜಾರ್ಜ್‌ | Kannada Prabha

ಸಾರಾಂಶ

ರಾಜ್ಯದ ಕೈಗಾರಿಕಾ ಬೆಳವಣಿಗೆಗಾಗಿ ಸುಸ್ಥಿರ ಡೇಟಾ ಕೇಂದ್ರಗಳ ಅಗತ್ಯವಿದ್ದು, ಅದಕ್ಕಾಗಿ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಡೇಟಾ ಪಾರ್ಕ್‌ ಸ್ಥಾಪನೆಗೆ ಮೂವರು ಸಚಿವರ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯದ ಕೈಗಾರಿಕಾ ಬೆಳವಣಿಗೆಗಾಗಿ ಸುಸ್ಥಿರ ಡೇಟಾ ಕೇಂದ್ರಗಳ ಅಗತ್ಯವಿದ್ದು, ಅದಕ್ಕಾಗಿ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಡೇಟಾ ಪಾರ್ಕ್‌ ಸ್ಥಾಪನೆಗೆ ಮೂವರು ಸಚಿವರ ಸಭೆಯಲ್ಲಿ ನಿರ್ಧರಿಸಲಾಗಿದೆ.

ಶಕ್ತಿ ಭವನದಲ್ಲಿ ಗುರುವಾರ ಇಂಧನ ಸಚಿವ ಕೆ.ಜೆ.ಜಾರ್ಜ್‌, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ನಡೆಸಿದ ಪ್ರಾಥಮಿಕ ಸಭೆಯಲ್ಲಿ ಮೂರು ನಗರಗಳಲ್ಲಿ ಡೇಟಾ ಪಾರ್ಕ್‌ ಸ್ಥಾಪನೆಗೆ ಚರ್ಚಿಸಿ ತೀರ್ಮಾನಿಸಲಾಯಿತು.

ಈ ಕುರಿತು ಮಾಹಿತಿ ನೀಡಿರುವ ಸಚಿವ ಎಂ.ಬಿ.ಪಾಟೀಲ್‌, ಬೆಂಗಳೂರಿನಲ್ಲಿ ಹೊಸಕೋಟೆಯ ಸಮೀಪ 500 ಮೆಗಾವ್ಯಾಟ್‌ ಸಾಮರ್ಥ್ಯದ ಸುಸ್ಥಿರ ಡೇಟಾ ಪಾರ್ಕ್‌ ಸ್ಥಾಪಿಸಲಾಗುವುದು. ಪಾವಗಡದಿಂದ ಪೂರೈಕೆಯಾಗುವ ಸೌರ ವಿದ್ಯುತ್ ನೇರವಾಗಿ ಅಲ್ಲಿಗೆ ತಲುಪುತ್ತದೆ. ಹೊಸಕೋಟೆ ಸಮೀಪದ ಕೇಂದ್ರಕ್ಕೆ ಬೆಂಗಳೂರು ಜಲಮಂಡಳಿಯು ಎರಡು ಹಂತಗಳಲ್ಲಿ ಸಂಸ್ಕರಿಸಿದ 60 ಎಂಎಲ್‌ಡಿ ನೀರು ಪೂರೈಕೆಗೆ ಸಮಸ್ಯೆಯಿಲ್ಲ ಎಂದು ತಿಳಿಸಿದೆ. ಆ ನೀರನ್ನು ಉದ್ಯಮಿಗಳು ಮೂರನೇ ಹಂತದ ಶುದ್ಧಿಕರಣ ಮಾಡಿಕೊಳ್ಳುತ್ತಾರೆ ಎಂದರು.

ಮಂಗಳೂರಿನಲ್ಲಿ ಕೂಡ ಡೇಟಾ ಪಾರ್ಕ್‌ ಸ್ಥಾಪನೆಗೆ ಭೂಮಿ ಲಭ್ಯವಿದೆ. ಅಲ್ಲಿನ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಕೆಐಎಡಿಬಿಗೆ ಸೇರಿದ 350 ಎಕರೆ ಭೂಮಿಯಿದೆ. ಮೈಸೂರಿನಲ್ಲಿ ಡೇಟಾ ಪಾರ್ಕ್‌ ಸ್ಥಾಪನೆಗೆ ಸೂಕ್ತ ಜಾಗ ಗುರುತಿಸಲಾಗುವುದು. ಈ ಮೂರೂ ಪಾರ್ಕುಗಳ ಒಟ್ಟು ಸಾಮರ್ಥ್ಯ 1,000 ಮೆಗಾವ್ಯಾಟ್ ಇರಲಿದೆ. ಈ ಪಾರ್ಕ್‌ಗಳಲ್ಲಿ ಯಾರೇ ಬಂದು ಡಾಟಾ ಸೆಂಟರ್‌ ಸ್ಥಾಪಿಸಿದರೆ ಅವರಿಗೆ ವಿದ್ಯುತ್‌ ಮತ್ತು ನೀರು ನೀಡಲಾಗುವುದು. ಅದಕ್ಕೆ ಪೂರಕವಾದ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸದ್ಯದಲ್ಲೇ ಹೂಡಿಕೆದಾರರ ಸಭೆ ನಡೆಸಲಾಗುವುದು ಎಂದು ಹೇಳಿದರು.

ಸಚಿವರ ತಂಡ ರಚನೆ:

ಮುಂದಿನ ಹಂತದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನೊಳಗೊಂಡ ಸಚಿವರ ತಂಡ ಮತ್ತು ಉನ್ನತಾಧಿಕಾರಿಗಳ ತಂಡವನ್ನು ರಚಿಸಲಾಗುವುದು. ಶೀಘ್ರ ಡೇಟಾ ಪಾರ್ಕ್‌ ಸ್ಥಾಪನೆಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಐಟಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುಳಾ, ಕೆಎಸ್‌ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬು ಗೋಯಲ್‌, ಕೆಐಎಡಿಬಿ ಆಯುಕ್ತ ಡಾ.ಮಹೇಶ್‌, ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮಮನೋಹರ್‌ ಪ್ರಸಾತ್‌ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಜನಾಕ್ರೋಶ ಪಾದಯಾತ್ರೆ, ಪ್ರತಿಭಟನಾ ಸಭೆ
ಮಳೆ ನಿಂತರೂ ನಿಲ್ಲದ ಬೆಂಗಳೂರು ಜನರ ಗೋಳು