ಇ- ಆಫೀಸ್ ತಂತ್ರಾಂಶ ಸಮರ್ಪಕವಾಗಿ ನಿರ್ವಹಿಸುವಂತೆ ಡೀಸಿ ಸೂಚನೆ

KannadaprabhaNewsNetwork |  
Published : Jun 18, 2026, 01:45 AM IST
17ಕೆಎಂಎನ್ ಡಿ18 | Kannada Prabha

ಸಾರಾಂಶ

48,392 ಆಧಾರ್ ಸೀಡಿಂಗ್ ಬಾಕಿಯಿದ್ದು, ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಬಾಕಿಯಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ಅಭಿಲೇಖಾಲಯ ಶಾಖೆಯ ದಾಖಲೆ ನಿರ್ವಹಣೆ ಹಾಗೂ ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿ ಸರ್ಕಾರಕ್ಕೆ ನಿಗದಿತ ಶುಲ್ಕವನ್ನು ಕಡ್ಡಾಯವಾಗಿ ವಸೂಲಿಸಿ ದಾಖಲೆಗಳನ್ನು ಸಮರ್ಪಕವಾಗಿ ಸಂರಕ್ಷಿಸುವಂತೆ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಸರ್ಕಾರದ ಇ- ಆಫೀಸ್ ತಂತ್ರಾಂಶವನ್ನು ಸಮರ್ಪಕವಾಗಿ ನಿರ್ವಹಿಸುವ ಜೊತೆಗೆ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ ಡಿಜಿಟಲ್ ಕಾರ್ಯ ವಿಧಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಕಚೇರಿಗೆ ಅನಿರೀಕ್ಷಿತ ಭೇಟಿಕೊಟ್ಟು ವಿವಿಧ ಶಾಖೆಗಳ ಕಾರ್ಯ ನಿರ್ವಹಣೆ, ಕಡತ ವಿಲೇವಾರಿ ಪ್ರಗತಿ, ಸಿಬ್ಬಂದಿ ಹಾಜರಾತಿ ಹಾಗೂ ಸಾರ್ವಜನಿಕ ಸೇವೆಗಳ ಅನುಷ್ಠಾನ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿ, ಇ- ಆಫೀಸ್ ಅನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದಿದ್ದಲ್ಲಿ ನಿಮ್ಮನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಹಸೀಲ್ದಾರ್ ಗೆ ಎಚ್ಚರಿಕೆ ನೀಡಿದರು.

ಸರ್ಕಾರದ ಆಧುನೀಕರಣ ಹಾಜರಾತಿ ವ್ಯವಸ್ಥೆಯ ಕರ್ತವ್ಯ ಆ್ಯಪ್ ಅನ್ನು ಕಡ್ಡಾಯವಾಗಿ ಡೌನ್ ಲೋಡ್ ಮಾಡಿಕೊಂಡು ಇ-ಹಾಜರಾತಿಯನ್ನು ದಾಖಲಿಸಬೇಕು, ತಾಲೂಕಿನಲ್ಲಿ ಇನ್ನೂ 26,188 ಇ- ಪೌತಿ ಖಾತೆ ಪ್ರಕರಣಗಳು ಬಾಕಿ ಇವೆ. ತುರ್ತಾಗಿ ಕಾನೂನುಬದ್ಧ ವಾರಸುದಾರರಿಗೆ ಖಾತೆ ಬದಲಾವಣೆ ಮಾಡಬೇಕು ಎಂದರು.

48,392 ಆಧಾರ್ ಸೀಡಿಂಗ್ ಬಾಕಿಯಿದ್ದು, ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಬಾಕಿಯಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ಅಭಿಲೇಖಾಲಯ ಶಾಖೆಯ ದಾಖಲೆ ನಿರ್ವಹಣೆ ಹಾಗೂ ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿ ಸರ್ಕಾರಕ್ಕೆ ನಿಗದಿತ ಶುಲ್ಕವನ್ನು ಕಡ್ಡಾಯವಾಗಿ ವಸೂಲಿಸಿ ದಾಖಲೆಗಳನ್ನು ಸಮರ್ಪಕವಾಗಿ ಸಂರಕ್ಷಿಸುವಂತೆ ಕರೆ ನೀಡಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಫಾರಂ 01 ರಿಂದ 05, ಲ್ಯಾಂಡ್ ಬೀಟ್, ಬಗರ್ ಹುಕುಂ, ತಹಸೀಲ್ದಾರ್ ನ್ಯಾಯಾಲಯ ಪ್ರಕರಣಗಳು, ಭೂಸುರಕ್ಷಾ, ಆರ್ ಆರ್ ಟಿ ತಿದ್ದುಪಡಿ, ಕಂದಾಯ ಗ್ರಾಮ ರಚನೆ, ಸಕಾಲ, ದರ್ಖಾಸ್ತು ಪೋಡಿ, ಸರ್ವೇ ಕಾರ್ಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರನ್ನು ಕಚೇರಿಗೆ ಪದೇ ಪದೇ ಅಲೆಸದೇ ನ್ಯಾಯ ಸಮ್ಮತವಾಗಿ ಸೇವೆಯನ್ನು ನೀಡಬೇಕೆಂದು ಸಲಹೆ ನೀಡಿದರು.

ಆದಾಯ, ಜಾತಿ, ವಾಸ, ವಂಶವೃಕ್ಷ, ಭೂಹಿಡುವಳಿ ಪ್ರಮಾಣಪತ್ರ ಸೇರಿ ಎಲ್ಲಾ ಸೇವೆಗಳನ್ನು ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿಯೇ ಪ್ರಮಾಣ ಪತ್ರವನ್ನು ಅರ್ಜಿದಾರರಿಗೆ ನೀಡಬೇಕು. ವಿಳಂಬ ಮತ್ತು ನಿರ್ಲಕ್ಷ್ಯ ಕಂಡುಬಂದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಸತಿ ಉದ್ದೇಶಕ್ಕಾಗಿ ನಿವೇಶನ ರಹಿತರಿಗೆ ನಿವೇಶನ ನೀಡುವ ಅಭಿಯಾನದಡಿ ಸರ್ಕಾರದ ನಿರ್ದೇಶನದ ರೀತ್ಯಾ ಪ್ರತಿ ಗ್ರಾಮ ಪಂಚಾಯಿತಿಗೆ ಕನಿಷ್ಠ 5 ಎಕರೆ ಹಾಗೂ ಗರಿಷ್ಠ 20 ಎಕರೆ ಸರ್ಕಾರಿ ಜಾಗವನ್ನು ನಿವೇಶನ ಉದ್ದೇಶಕ್ಕಾಗಿ ಗುರುತಿಸಿ, ಅಗತ್ಯ ಪ್ರಸ್ತಾವನೆಗಳನ್ನು ತಯಾರಿಸಿ ಸಲ್ಲಿಸಬೇಕೆಂದು ಹೇಳಿದರು.

ಹೋಬಳಿ ಮಟ್ಟದ ಸಿಬ್ಬಂದಿ ಕೇಂದ್ರಸ್ಥಾನದಲ್ಲಿಯೇ ಲಭ್ಯವಿರಬೇಕು. ಸಾರ್ವಜನಿಕರ ಮನವಿಗಳಿಗೆ ತ್ವರಿತ ಸ್ಪಂದನೆ ನೀಡಬೇಕು, ಕಚೇರಿ ಶಿಸ್ತು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.

ಇದೇ ವೇಳೆ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್ ಸೇರಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೌಟುಂಬಿಕ ಕಲಹ: ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ
ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಅಂಗಡಿಗಳ ತೆರವು