ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದೈನಂದಿನ ಕಚೇರಿ ಕಾರ್ಯಗಳ ಜೊತೆಗೆ ಚುನಾವಣಾ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಿ ಕೆಲಸ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ. ಎನ್ ರವೀಂದ್ರ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.ಡೀಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಲೋಕಸಭಾ ಚುನಾವಣೆಯು ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಲೋಕಸಭಾ ಚುನಾವಣೆಗೆ ಯಾವುದೇ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಬಹುದು. ಆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾದ 24 ಗಂಟೆಯೊಳಗೆ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಪೂರ್ವ ಸಿದ್ಧತೆಗಳನ್ನು ಇಂದಿನಿಂದಲೆ ಮಾಡಿಕೊಳ್ಳುವುದು. ಚುನಾವಣಾ ಆಯೋಗದ ನಿರ್ದೇಶನದಂತೆ ಪೂರ್ವ ತಯಾರಿ ಕಾರ್ಯಗಳನ್ನು ಚಾಚು ತಪ್ಪದೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವುದು. ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜನೆ, ಎಲ್ಲಾ ಮತಗಟ್ಟೆಗಳಿಗೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ, ರ್ಯಾಂಪ್ ನಿರ್ಮಾಣ, ಭದ್ರತೆ, ಪೊಲೀಸ್ ಬಂದೋಬಸ್ತ್, ಚೆಕ್ ಪೋಸ್ಟ್ ನಿರ್ಮಾಣ, ಚುನಾವಣಾ ಲಿಪಿಕ ಪರಿಕರಗಳು ಹಾಗೂ ಇತರ ವಸ್ತುಗಳ ಖರೀದಿ, ಸಾರಿಗೆ ವ್ಯವಸ್ಥೆ, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಳ್ಳುವವರಿಗೆ ಒಂದು ಸುತ್ತಿನ ತರಬೇತಿ ಸೇರಿದಂತೆ ಇನ್ನಿತರ ಸಕಲ ತಯಾರಿಗಳನ್ನು ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಿ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.ಚುನಾವಣಾ ಕರ್ತವ್ಯಕ್ಕಾಗಿ 21 ವಿಷಯಗಳಿಗೆ 21 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣಾ ಆಯೋಗದ ಪ್ರಸ್ತುತದ ನಿರ್ದೇಶನಗಳನ್ವಯ ಕರಾರುವಕ್ಕಾಗಿ ಕಾರ್ಯನಿರ್ವಾಹಿಸಬೇಕು. ಮಾದರಿ ನೀತಿ ಸಂಹಿತೆಯ ಅಧಿಸೂಚನೆ ಪ್ರಕಟವಾದ ದಿನಾಂಕದಿಂದ ಚುನಾವಣೆ ಫಲಿತಾಂಶದ ನಂತರವೂ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ಅಧಿಕಾರಿಗಳು ಜಿಲ್ಲೆಯಾದ್ಯಂತ ಅವಶ್ಯಕತೆ ಇರುವ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸಬೇಕು. ಅನುಮತಿ ಇಲ್ಲದೆ ಯಾವುದೇ ರೀತಿಯ ಸಾರ್ವಜನಿಕ ಸಭೆ, ಸಮಾರಂಭಗಳು ಏರ್ಪಡದಂತೆ ನೋಡಿಕೊಳ್ಳಬೇಕು. ಅನಿವಾರ್ಯತೆ ಎಂಬ ಕಾರ್ಯಕ್ರಮಗಳಿಗೆ ಪೊಲೀಸ್ ಅಧಿಕಾರಿಗಳ ಅನುಮತಿ ಕಡ್ಡಾಯವಾಗಿರಬೇಕು. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಜಾಹೀರಾತು ಪ್ರಕಟಿಸಲು ಸರ್ಕಾರಿ ಮತ್ತು ಅನುದಾನಿತ ಕಟ್ಟಡಗಳನ್ನು ಬಳಸಿಕೊಳ್ಳದಂತೆ ನಿಗಾವಹಿಸಬೇಕು. ನೀತಿ ಸಂಹಿತೆ ಜಾರಿಯಾದ 24 ಗಂಟೆಯೊಳಗೆ ಸರ್ಕಾರದ ಅಧೀನದಲ್ಲಿರುವ ಕಚೇರಿಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಾ ರೀತಿಯ ಪ್ರಚಾರ ಫಲಕಗಳಲ್ಲಿನ ಸರ್ಕಾರಿ ಜಾಹೀರಾತುಗಳನ್ನು ತೆರವುಗೊಳಿಸಬೇಕು. ಚುನಾವಣಾ ಸಭೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಸಕ್ಷಮದ ಅಧಿಕಾರಿಗಳ ಅನುಮತಿಯನ್ನು ಪಡೆಯಬೇಕು. ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರವಹಿಸಿ ಪ್ರಚಾರ ಕೈಗೊಳ್ಳಬೇಕೆಂದು ತಿಳಿಸಿದರು.
ಸಭೆಯಲ್ಲಿ ಜಿಪಮ ಸಿಇಒ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಜಿಲ್ಲಾ ಎಸ್ಪಿ ಡಿ.ಎಲ್.ನಾಗೇಶ್, ಎಡಿಸಿ ಡಾ.ಎನ್. ತಿಪ್ಪೇಸ್ವಾಮಿ, ಎಸಿ ಡಿ.ಹೆಚ್. ಅಶ್ವಿನ್, ಜಿಪಂ ಉಪಕಾರ್ಯದರ್ಶಿ ಡಾ.ಎನ್. ಭಾಸ್ಕರ್, ಜಿಲ್ಲಾ ಚುನಾವಣಾ ವೆಚ್ಚ ಅಧಿಕಾರಿ ಹರೀಶ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.