-ಫಲಾನುಭವಿಗಳಿಗೆ ಅವಶ್ಯಕ ಪೌಷ್ಟಿಕ ಆಹಾರ, ವೈದ್ಯಕೀಯ ಸೌಲಭ್ಯ ಕಲ್ಪಿಸಲು ಕಟ್ಟುನಿಟ್ಟಿನ ಸೂಚನೆ
----
ಕನ್ನಡಪ್ರಭ ವಾರ್ತೆ ಯಾದಗಿರಿ
ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಅಂಗನವಾಡಿ ಕೇಂದ್ರ-5ಕ್ಕೆ ಮತ್ತು ಸುರಪುರ ತಾಲೂಕಿನ ದೇವಪೂರ ಗ್ರಾಮದ ಅಂಗನವಾಡಿ ಕೇಂದ್ರ-1ಕ್ಕೆ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಕೇಂದ್ರದ ಕಾರ್ಯವೈಖರಿ ಹಾಗೂ ಫಲಾನುಭವಿಗಳಿಗೆ ಸಿಗುತ್ತಿರುವ ಪೌಷ್ಟಿಕ ಆಹಾರ ಹಾಗೂ ವೈದ್ಯಕೀಯ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಪೌಷ್ಟಿಕ ಆಹಾರ ಮತ್ತು ಶಾಲಾ ಪೂರ್ವ ಶಿಕ್ಷಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ವಿತರಿಸಲಾಗುತ್ತಿರುವ ಪೂರಕ ಪೌಷ್ಟಿಕ ಆಹಾರ, ಕೋಳಿ ಮೊಟ್ಟೆ ಮತ್ತು ಹಾಲಿನ ಪುಡಿ ಸರಬರಾಜಿನ ಕುರಿತು ಪರಿಶೀಲಿಸಿದರು. ಇದರೊಂದಿಗೆ ಅಂಗನವಾಡಿಯಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಶಾಲಾ ಪೂರ್ವ ಶಿಕ್ಷಣದ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ಪಡೆದುಕೊಂಡರು.
ಆರೋಗ್ಯ ಸೇವೆಗಳ ಪರಿಶೀಲನೆ:
ಆರೋಗ್ಯ ಇಲಾಖೆಯ ವತಿಯಿಂದ ಒದಗಿಸಲಾಗುತ್ತಿರುವ ''''ತಾಯಿ ಕಾರ್ಡ್'''', ಉಚಿತ ಆರೋಗ್ಯ ತಪಾಸಣೆ, ಸ್ಕ್ಯಾನಿಂಗ್, ಹಿಮೋಗ್ಲೋಬಿನ್ ತಪಾಸಣೆ ಹಾಗೂ ಐರನ್ (ಕಬ್ಬಿಣದ ಅಂಶ) ಮಾತ್ರೆಗಳ ವಿತರಣೆ ಪರಿಶೀಲಿಸಿದರು. ಅಲ್ಲದೆ, ಬಾಣಂತಿಯರ ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಅಗತ್ಯ ಲಸಿಕೆ/ಚುಚ್ಚುಮದ್ದು ನೀಡಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಂಡರು.
ಫಲಾನುಭವಿಗಳೊಂದಿಗೆ ಸಂವಾದ: ಸ್ಥಳದಲ್ಲಿದ್ದ ಗರ್ಭಿಣಿಯರಿಗೆ ಕೊನೆಯ ಸ್ಕ್ಯಾನಿಂಗ್, ಮುಂದಿನ ಸ್ಕ್ಯಾನಿಂಗ್ ದಿನಾಂಕ ಹಾಗೂ ಹೆರಿಗೆಯ ನಿರೀಕ್ಷಿತ ದಿನಾಂಕದ (EDD) ಬಗ್ಗೆ ಮಾಹಿತಿ ಪಡೆದರು. ರಕ್ತಹೀನತೆ ತಡೆಯಲು ಹಿಮೋಗ್ಲೋಬಿನ್ ಮಟ್ಟವನ್ನು ಕಾಯ್ದುಕೊಳ್ಳುವುದು ಅಗತ್ಯವಿದ್ದು, ಪೌಷ್ಟಿಕ ಆಹಾರ ಸೇವನೆ ಹಾಗೂ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಅಂಗನವಾಡಿ ಮಕ್ಕಳ ಶಾಲಾ ಪೂರ್ವ ಶಿಕ್ಷಣ ಮಟ್ಟವನ್ನು ಸ್ವತಃ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಪುಟಾಣಿ ಮಕ್ಕಳೊಂದಿಗೆ ಬೆರೆತು ಆತ್ಮೀಯವಾಗಿ ಸಂಭಾಷಣೆ ನಡೆಸಿದರು.
ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ: ಸ್ಥಳದಲ್ಲಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, "ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳ ಆರೋಗ್ಯದ ವಿಷಯದಲ್ಲಿ ವಿಶೇಷ ಕಾಳಜಿ ವಹಿಸಬೇಕು. ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳು ಹಾಗೂ ಮಾಹಿತಿಗಳು ಪ್ರತಿಯೊಬ್ಬ ಫಲಾನುಭವಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
-
24ವೈಡಿಆರ್3 : ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಅಂಗನವಾಡಿ ಕೇಂದ್ರ-5ಕ್ಕೆ ಮತ್ತು ಸುರಪುರ ತಾಲೂಕಿನ ದೇವಪೂರ ಗ್ರಾಮದ ಅಂಗನವಾಡಿ ಕೇಂದ್ರ-1ಕ್ಕೆ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಕೇಂದ್ರದ ಕಾರ್ಯವೈಖರಿ ಹಾಗೂ ಫಲಾನುಭವಿಗಳಿಗೆ ಸಿಗುತ್ತಿರುವ ಪೌಷ್ಟಿಕ ಆಹಾರ ಹಾಗೂ ವೈದ್ಯಕೀಯ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.