ಡಿಸಿಸಿ ಬ್ಯಾಂಕಿಗೆ ಜೊಲ್ಲೆ ಅಧ್ಯಕ್ಷ, ಕಾಗೆ ಉಪಾಧ್ಯಕ್ಷ

KannadaprabhaNewsNetwork |  
Published : Nov 11, 2025, 03:15 AM IST
ಬೆಳಗಾವಿ | Kannada Prabha

ಸಾರಾಂಶ

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಚಿಕ್ಕೋಡಿ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಉಪಾಧ್ಯಕ್ಷರಾಗಿ ಕಾಗವಾಡ ಶಾಸಕ ಭರಮಗೌಡ (ರಾಜು) ಕಾಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಚಿಕ್ಕೋಡಿ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಉಪಾಧ್ಯಕ್ಷರಾಗಿ ಕಾಗವಾಡ ಶಾಸಕ ಭರಮಗೌಡ (ರಾಜು) ಕಾಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಅರಭಾವಿ ಶಾಸಕ ಮತ್ತು ಬೆಮುಲ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಗರದ ಖಾಸಗಿ ಹೋಟೆಲ್‌ ನಲ್ಲಿ ಬೆಂಬಲಿಗರ ಜೊತೆಗೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಅಧ್ಯಕ್ಷರನ್ನಾಗಿ ಅಣ್ಣಾಸಾಹೇಬ ಜೊಲ್ಲೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಜು ಕಾಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ತೀರ್ಮಾನಿಸಲಾಯಿತು. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಘೋಷಣೆ ಮಾಡಿದರು.

ಚುನಾವಣಾ ಪ್ರಕ್ರಿಯೆ ಹಿನ್ನೆಲೆಯಲ್ಲಿ ಸೋಮವಾರ ದಿನವಿಡೀ ಜಾರಕಿಹೊಳಿ ಬಣ ಹಾಗೂ ರಮೇಶ ಕತ್ತಿ-ಲಕ್ಷ್ಮಣ ಸವದಿ ಬಣದಿಂದ ತೀವ್ರ ರಾಜಕೀಯ ಚಟುವಟಿಕೆ ನಡೆದವು. ಎರಡು ಬಣಗಳಿಂದ ತಂತ್ರ, ಪ್ರತಿತಂತ್ರ ರೂಪಿಸುವ ನಿಟ್ಟಿನಲ್ಲಿ ಪ್ರತ್ಯೇಕ ಸಭೆ ನಡೆಸಿದವು. ಇತ್ತೀಚೆಗೆ ನಡೆದ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಜಾರಕಿಹೊಳಿ ಬಣ 13 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಸಾಧಿಸಿತ್ತು. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲೂ ಜಾರಕಿಹೊಳಿ ಬಣ ಮೇಲುಗೈ ಸಾಧಿಸಿದೆ. ಜಾರಕಿಹೊಳಿ ಸಹೋದರರು ಲಿಂಗಾಯತರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ ನೀಡಿದ್ದ ಭರವಸೆಯಂತೆಯೇ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನಗಳಿಗೆ ಲಿಂಗಾಯತರಿಗೆ ಆದ್ಯತೆ ನೀಡಿದ್ದಾರೆ.

30-30 ತಿಂಗಳು ಅಧಿಕಾರ ಹಂಚಿಕೆ:

30 ತಿಂಗಳ ಅವಧಿಗೆ ಅಧಿಕಾರ ಹಂಚಿಕೆ ಮಾಡಲಾಗಿದೆ. ಬಿಜೆಪಿಗೆ ಅಧ್ಯಕ್ಷ ಸ್ಥಾನ, ಕಾಂಗ್ರೆಸ್‌ಗೆ ಉಪಾಧ್ಯಕ್ಷ ಸ್ಥಾನ ಹಂಚಿಕೊಂಡಿದ್ದೇವೆ. ಈ ಹಿಂದೆ ನಾವು 3 ಜನ ಇದ್ದರೂ ಬಿಜೆಪಿಯವರು ಅಧ್ಯಕ್ಷ ಸ್ಥಾನ ಬಿಟ್ಟು ಕೊಟ್ಟಿದ್ದರು. ಈಗ ನಾವು ಬಿಜೆಪಿಯವರಿಗೆ ಅಧ್ಯಕ್ಷಸ್ಥಾನ ಬಿಟ್ಟುಕೊಟ್ಟಿದ್ದೇವೆ. ಜೊಲ್ಲೆಯವರು ನಮ್ಮನ್ನು ನಂಬಿ ಬಂದಿದ್ದರು. ಹೀಗಾಗಿ ಜೊಲ್ಲೆಯವರನ್ನು ಗೆಲ್ಲಿಸಿ, ಅಧ್ಯಕ್ಷರನ್ನಾಗಿ ಮಾಡಿದ್ದೇವೆ ಎಂದು ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.

ನುಡಿದಂತೆ ನಡೆದಿದ್ದೇವೆ: ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಎಲ್ಲಾ ಸದಸ್ಯರ ಜೊತೆಗೆ ಚರ್ಚೆ ಮಾಡಿ, ಡಿಸಿಸಿ ಬ್ಯಾಂಕಿಗೆ ಅಧ್ಯಕ್ಷರಾಗಿ ಅಣ್ಣಾಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಸ್ಥಾನ ಲಿಂಗಾಯತ ಸಮಾಜಕ್ಕೆ ನೀಡಿದ್ದೇವೆ. ಜೊಲ್ಲೆ ಅವರನ್ನು ಜಾರಕಿಹೊಳಿ‌ ಅವರು ಸೋಲಿಸುತ್ತಾರೆ ಎಂದು ಅಪಪ್ರಚಾರ ಮಾಡಿದ್ದರು. ಮೂರು ಜನ ಅಣ್ತಮ್ಮಂದಿರು ಸೇರಿಕೊಂಡು ಗೆಲ್ಲಿಸಿ ಅಧ್ಯಕ್ಷ ಕೂಡ ಮಾಡಿದ್ದೇವೆ. ಐದು ವರ್ಷದಲ್ಲಿ ಬ್ಯಾಂಕ್ ಒಂದನೇ ಸ್ಥಾನಕ್ಕೆ ತರುತ್ತೇವೆ ಎಂದರು.

ಬ್ಯಾಂಕ್ ನಲ್ಲಿ ಕುಳಿತು ರಾಜಕಾರಣ ಮಾಡಿ ಬ್ಯಾಂಕ್ ನಡೆಸುತ್ತಿದ್ದರು. ಸಾವಿರ ಕೋಟಿ ವಿತ್ ಡ್ರಾ ಆಗುತ್ತಿದೆ ಎಂದು ಹಬ್ಬಿಸುತ್ತಿದ್ದಾರೆ. ಪ್ರತಿ ವರ್ಷ ಈ ಸಮಯದಲ್ಲಿ ವಿತ್ ಡ್ರಾ ಮಾಡೋದು ಸಹಜ. ಚಿನ್ನದ ಬೆಲೆ ಏರಿಕೆ ಹಿನ್ನೆಲೆ ಜಾಸ್ತಿ ಡ್ರಾ ಆಗಿದೆ. ಕರ್ನಾಟಕದಲ್ಲಿ ಡಿಸಿಸಿ ಬ್ಯಾಂಕ್ ನಂಬರ್ ಒನ್ ಮಾಡುತ್ತೇವೆ‌. ರಾಜಕಾರಣದಲ್ಲಿ ವಿರೋಧಿಗಳಿಗೆ ಸುಮ್ಮನೆ ಕೂಡಿ ಎಂದು ಹೇಳಲು ಆಗಲ್ಲ ಎಂದರು.

ಒಮ್ಮತದಿಂದ ಅವಿರೋಧ ಆಯ್ಕೆ: ಸತೀಶ

ಬೆಳಗಾವಿ: ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರನ್ನು ನಮ್ಮೆಲ್ಲರ ಸಹಮತದಿಂದ ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದೇವೆ. ಬ್ಯಾಂಕ್‌ ನಡೆಸಿದ ಅನುಭವ ಅವರಿಗಿದ್ದು, ಬಿಡಿಸಿಸಿ ಬ್ಯಾಂಕ್‌ ಅನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಇರಲಿ ನಮ್ಮ ಜತೆ ಇದ್ದವರನ್ನು ನಾವು ಕೈ ಬಿಡಲ್ಲ. ಅಣ್ಣಾಸಾಹೇಬ ಜೊಲ್ಲೆ ಅವರು ನಿರ್ದೇಶಕರಾಗಿ ಆಯ್ಕೆಯಾಗಲು ಅವರ ಜತೆ ನಿಂತಿದ್ದೇವೆ. ಈಗಲೂ ಅವರು ಅಧ್ಯಕ್ಷರಾಗಿ ಆಯ್ಕೆಯಾಗಲು ನಾವು ಸಹಕಾರ ನೀಡುತ್ತೇವೆ. ನಮ್ಮ ಪರ ಸದಸ್ಯರನ್ನು ಸೆಳೆಯಲು ಬೆಂಗಳೂರು, ಬೆಳಗಾವಿಯಲ್ಲಿ ಇದ್ದುಕೊಂಡು ಮಸಾಜ್ ಮಾಡಿದರು. ಆದರೆ, ನಾವು ಆಯುರ್ವೇದೀಕ್ ಡಾಕ್ಟರ್ ಇದ್ದೇವೆ. ಸರಿಯಾದ ಔಷಧ ಕೊಟ್ಟಿದ್ದೇವೆ. ಹೀಗಾಗಿ ಸರಿಯಾಗಿದೆ. ಜಿಲ್ಲೆಯಿಂದ ಹಾಲುಮತ ಸಮಾಜದವರನ್ನು ಅಪೆಕ್ಸ್‌ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆ ಮಾಡಲಾಗುವುದು ಎಂದರು.

ನಂ.1 ಸ್ಥಾನಕ್ಕೆ ತರಲು ಪ್ರಯತ್ನ: ಜೊಲ್ಲೆ

ಬೆಳಗಾವಿ: ಜಾರಕಿಹೊಳಿ ಸಹೋದರರು ನನ್ನ ಮೇಲೆ ವಿಶ್ವಾಸ ಇಟ್ಟಕೊಂಡು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ನಾನು ಉಪಾಧ್ಯಕ್ಷ ರಾಜು ಕಾಗೆ ಸೇರಿಕೊಂಡು ಬರುವ ಐದು‌ ವರ್ಷದಲ್ಲಿ ಡಿಸಿಸಿ ಬ್ಯಾಂಕ್ ನಂಬರ್ ಒನ್ ಸ್ಥಾನಕ್ಕೆ ತರುವ ಪ್ರಯತ್ನ ಮಾಡುತ್ತೇವೆ ಎಂದು ಡಿಸಿಸಿ ಬ್ಯಾಂಕಿನ ನೂತನ ಅಧ್ಯಕ್ಷ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ಚುನಾವಣೆ ನಮ್ಮ ಬಳಿ ಅಧಿಕಾರಕ್ಕೆ ಬಂದರೆ ಬ್ಯಾಂಕ್ ದಿವಾಳಿ ಮಾಡುತ್ತಾರೆ ಎಂದು ವಿರೋಧಿಗಳು ಅಪಪ್ರಚಾರ ನಡೆಸಿದರು. ಡಿಸಿಸಿ ಬ್ಯಾಂಕ್ ಐದು‌ ವರ್ಷದಲ್ಲಿ ಮಾದರಿ ಬ್ಯಾಂಕ್ ಮಾಡುವ ಪ್ರಯತ್ನವನ್ನು ಮಾಡಲಾಗುವುದು. ಡಿಸಿಸಿ ಬ್ಯಾಂಕ್ ಒಳ್ಳೆಯ ರೀತಿಯಲ್ಲಿ ನಡೆಯುತ್ತಿದೆ. ಕಳೆದ ಆರು ತಿಂಗಳಿನಿಂದ ಚುನಾವಣೆ ಇದ್ದಿದ್ದರಿಂದ ಆಡಳಿತದಲ್ಲಿ ಕೆಲವೊಂದು ದೋಷವಾಗಿತ್ತು. ಈಗ ನಮ್ಮ ಪ್ಯಾನಲ್‌ಗೆ ಬಹುಮತ ಪಡೆದು ಅಧಿಕಾರ ನೀಡಿದೆ. ಒಳ್ಳೆಯ ಆಡಳಿತ ನೀಡಿ ರೈತರಿಗೆ ಒಳ್ಳೆಯ ಆಡಳಿತ ನೀಡುವುದೇ ನಮ್ಮ ಗುರಿ ಎಂದರು.

ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ರಾಜು ಕಾಗೆ ಮಾತನಾಡಿ, ವಯಸ್ಸಿನಲ್ಲಿ ಡಿಸಿಸಿ ಬ್ಯಾಂಕ್‌ನಲ್ಲಿ ನಾನೇ‌ ಹಿರಿಯ ವಯಸ್ಕರ. ಎಲ್ಲ ನಿರ್ದೇಶಕರಲ್ಲಿ ಸಣ್ಣ ಪುಟ್ಟ ‌ಮನಸ್ತಾಪ ಇದ್ದರೂ ಅದನ್ನು ಬಗೆ ಹರಿಸಿ ಎಲ್ಲರ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಯತ್ತ ಕೊಂಡೊಯ್ಯಲು ಶ್ರಮಿಸಲಾಗುವುದು. ನಾವು ಸಹಕಾರ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ಎಲ್ಲ ಸದಸ್ಯರು ಸೇರಿಕೊಂಡು ಡಿಸಿಸಿ ಬ್ಯಾಂಕ್ ಮಾದರಿಯನ್ನಾಗಿ ಮಾಡುತ್ತೇವೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ