ಡಿಸಿಸಿ ಬ್ಯಾಂಕ್ ಚುನಾವಣೆ: ೧೧ ಸ್ಥಾನ ಕಾಂಗ್ರೆಸ್ ಪಾಲು..!

KannadaprabhaNewsNetwork |  
Published : Nov 03, 2025, 01:30 AM IST
2ಕೆಎಂಎನ್‌ಡಿ-4ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಚುನಾವಣೆಯಲ್ಲಿ ಮಂಡ್ಯ ತಾಲೂಕು ಪ್ರಾಥಮಿಕ ಪತ್ತಿನ ಕೃಷಿ ಸಹಕಾರ ಸಂಘಗಳ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ ಸತೀಶ್ ಅವರನ್ನು ಕಾರ್ಯಕರ್ತರು ಅಭಿನಂದಿಸಿದರು. | Kannada Prabha

ಸಾರಾಂಶ

ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿಯ ಒಟ್ಟು ೧೨ ಸ್ಥಾನಗಳ ಪೈಕಿ ೯ ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, ಭಾನುವಾರ ಉಳಿದ ಮೂರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎರಡು ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಇದರೊಂದಿಗೆ ೧೧ ಸ್ಥಾನಗಳಲ್ಲಿ ಐತಿಹಾಸಿಕ ಗೆಲುವು ಸಾಧಿಸಿ ಪಾರಪತ್ಯ ಮೆರೆದಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿಯ ಒಟ್ಟು ೧೨ ಸ್ಥಾನಗಳ ಪೈಕಿ ೯ ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, ಭಾನುವಾರ ಉಳಿದ ಮೂರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎರಡು ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಇದರೊಂದಿಗೆ ೧೧ ಸ್ಥಾನಗಳಲ್ಲಿ ಐತಿಹಾಸಿಕ ಗೆಲುವು ಸಾಧಿಸಿ ಪಾರಪತ್ಯ ಮೆರೆದಿದೆ.

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್ ಅತ್ಯಂತ ಹೀನಾಯ ಸೋಲನ್ನು ಕಂಡಿದ್ದು, ಜೆಡಿಎಸ್-ಬಿಜೆಪಿ ಮೈತ್ರಿಕೂಟ ಮುಖಭಂಗಕ್ಕೆ ಒಳಗಾಗಿದೆ. ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗದಷ್ಟು ದಯನೀಯ ಸ್ಥಿತಿಯನ್ನು ಜೆಡಿಎಸ್ ತಲುಪಿರುವುದು ಮುಖಂಡರು-ಕಾರ್ಯಕರ್ತರನ್ನು ದಿಕ್ಕೆಡಿಸುವಂತೆ ಮಾಡಿದೆ.

ಜೆಡಿಎಸ್ ಒಂದು ಸ್ಥಾನದಲ್ಲಿ ಗೆಲುವು:

ಭಾನುವಾರ ಮೂರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಂಡ್ಯ ತಾಲೂಕು ಪ್ರಾಥಮಿಕ ಪತ್ತಿನ ಕೃಷಿ ಸಹಕಾರ ಸಂಘಗಳ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸತೀಶ್ ೩೨ ಮತ ಪಡೆದು ವಿಜಯಿಯಾದರೆ, ಜೆಡಿಎಸ್-ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸ್ವಾಮಿ-೧೧ ಮತ ಗಳಿಸಿ ಪರಾಭವಗೊಂಡರು, ಪಾಂಡವಪುರ ತಾಲೂಕು ಪ್ರಾಥಮಿಕ ಪತ್ತಿನ ಕೃಷಿ ಸಹಕಾರ ಸಂಘಗಳ ಕ್ಷೇತ್ರದಿಂದ ಜೆಡಿಎಸ್-ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಎಚ್.ಸಿ.ಪುಟ್ಟಸ್ವಾಮಿಗೌಡ ೧೫ ಮತ ಪಡೆದು ಗೆಲುವು ಸಾಧಿಸಿದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಎ.ಆರ್.ಅಶೋಕ ೭ ಮತ ಪಡೆದು ಸೋಲನುಭವಿಸಿದರು. ಕೆ.ಆರ್.ಪೇಟೆ ತಾಲೂಕು ಪ್ರಾಥಮಿಕ ಪತ್ತಿನ ಕೃಷಿ ಸಹಕಾರ ಸಂಘಗಳ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್.ಎಸ್.ಅಂಬರೀಶ್ ೧೫ ಮತ ಪಡೆದು ವಿಜಯಿಯಾದರೆ, ಜೆಡಿಎಸ್-ಬಿಜೆಪಿ ಬೆಂಬಲಿತ ಅಭ್ಯರ್ಥಿ ಪಿ.ಧರಣೇಶ್‌ಕುಮಾರ್ ೧೩ ಮತಗಳೊಂದಿಗೆ ಪರಾಭವಗೊಂಡರು.

ಅವಿರೋಧ ಆಯ್ಕೆಯಾದವರು:

ಮಳವಳ್ಳಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಪಿ.ಎಂ.ನರೇಂದ್ರಸ್ವಾಮಿ, ನಾಗಮಂಗಲ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಸಚಿನ್ ಚಲುವರಾಯಸ್ವಾಮಿ, ಮದ್ದೂರು ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಪಿ.ಸಂದರ್ಶ, ಶ್ರೀರಂಗಪಟ್ಟಣ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಬಿ.ಗಿರೀಶ, ಜಿಲ್ಲೆಯ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ವಿ.ದಿನೇಶ್, ಜಿಲ್ಲೆಯಲ್ಲಿನ ಬಳಕೆದಾರರ ಮತ್ತು ಸಂಸ್ಕರಣ ಸಹಕಾರ ಸಂಘಗಳು ಮತ್ತು ನಗರ ಸಹಕಾರಿ ಬ್ಯಾಂಕ್ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಎಚ್.ಅಶೋಕ, ಪಾಂಡವಪುರ ಉಪ ಇಭಾಗದ ಹಾಲು ಉತ್ಪಾದಕರ ಸಹಕಾರ ಸಂಘದ ಕ್ಷೇತ್ರದಿಂದ ಎ.ವಿಜೇಂದ್ರಮೂರ್ತಿ, ಜಿಲ್ಲೆಯಲ್ಲಿನ ಕೈಗಾರಿಕಾ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ಸಿ.ಜೋಗಿಗೌಡ ಹಾಗೂ ಮಂಡ್ಯ ಉಪವಿಭಾಗ ಹಾಲು ಉತ್ಪಾದಕರ ಸಹಕಾರ ಸಂಘದ ಕ್ಷೇತ್ರದಿಂದ ಸಿ.ಚಲುವರಾಜು ಅವಿರೋಧ ಆಯ್ಕೆಯಾಗಿದ್ದರು.ಸಚಿನ್ ಚಲುವರಾಯಸ್ವಾಮಿಗೆ ಅಧ್ಯಕ್ಷ ಪಟ್ಟ?

ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಚುನಾವಣೆಯಲ್ಲಿ ನಾಗಮಂಗಲ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಅವಿರೋಧ ಆಯ್ಕೆಯಾಗಿರುವ ಸಚಿನ್ ಚಲುವರಾಯಸ್ವಾಮಿ ಅಧ್ಯಕ್ಷ ಪಟ್ಟ ಅಲಂಕರಿಸುವ ಸಾಧ್ಯತೆಗಳು ದಟ್ಟವಾಗಿವೆ.

ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕೃಪಾಶೀರ್ವಾದದಿಂದ ಸಚಿನ್ ನಾಗಮಂಗಲ ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗುವ ಮೂಲಕ ರಾಜಕೀಯ ಪ್ರವೇಶ ಪಡೆದರು. ಆ ನಂತರ ಅಧ್ಯಕ್ಷರಾದರು. ಇದೀಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಚುನಾವಣೆಯ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದು, ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಪುತ್ರನ ರಾಜಕೀಯ ಬೆಳವಣಿಗೆಗೆ ತೆರೆಯ ಮರೆಯಲ್ಲಿ ನಿಂತು ಎಲ್ಲ ರೀತಿಯ ಸಹಕಾರ ನೀಡುತ್ತಿರುವ ಸಚಿವ ಎನ್.ಚಲುವರಾಯಸ್ವಾಮಿ ಅವರು ಹಂತ ಹಂತವಾಗಿ ಪುತ್ರನನ್ನು ರಾಜಕೀಯವಾಗಿ ಪ್ರವರ್ಧಮಾನಕ್ಕೆ ತರುವ ದಿಸೆಯಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಪುತ್ರನ ರಾಜಕೀಯ ಬೆಳವಣಿಗೆಗೆ ಯಾರಿಂದಲೂ ತೊಡಕಾಗದಂತೆ, ಸಮಸ್ಯೆಯಾಗದಂತೆ ಯಾರಿಂದಲೂ ವಿರೋಧಗಳು ಎದುರಾಗದಂತೆ ಎಲ್ಲರೊಂದಿಗೆ ಪುತ್ರನನ್ನೂ ಜೊತೆಯಾಗಿಸಿಕೊಂಡು ಮುನ್ನಡೆದಿದ್ದಾರೆ.

ಜಿಲ್ಲೆಯ ೧೨ ಮಂದಿಯನ್ನು ವಿವಿಧ ನಿಗಮ-ಮಂಡಳಿಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಮಾನ ದೊರಕಿಸಿಕೊಟ್ಟು ಎರಡನೇ ಹಂತದ ನಾಯಕರ ಬೆಳವಣಿಗೆಗೆ ಕಾರಣರಾಗಿರುವ ಎನ್.ಚಲುವರಾಯಸ್ವಾಮಿ ತೀರ್ಮಾನಕ್ಕೆ ಯಾರಿಂದಲೂ ವಿರೋಧಗಳು ವ್ಯಕ್ತವಾಗುತ್ತಿಲ್ಲ. ಹಾಗಾಗಿ ಪುತ್ರನನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡುವುದಕ್ಕೆ ಎಲ್ಲರೂ ಸಮ್ಮತಿ ಸೂಚಿಸುವ ಸಂಭವ ಹೆಚ್ಚಾಗಿದೆ.

PREV

Recommended Stories

2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ