ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ ಸಮಸ್ಯೆ ಬಗೆಹರಿಸಲು ಡಿಸಿ ಸೂಚನೆ

KannadaprabhaNewsNetwork | Published : Feb 15, 2024 1:31 AM

ಸಾರಾಂಶ

ಅಂಗವಿಕಲರ ಕುಂದು ಕೊರತೆಗಳನ್ನು ಆಲಿಸಿದ ಜಿಲ್ಲಾಧಿಕಾರಿ, ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವಂತೆ ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರುವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ)ಗಳಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂಗವಿಕಲರ ಕುಂದು ಕೊರತೆಗಳ ನಿವಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆಗೆ ಕಾರಣಗಳನ್ನು ಹುಡುಕಿ ಆದಷ್ಟು ಬೇಗ ವಿಕಲಚೇತನರ ವಿಶಿಷ್ಟ ಗುರುತಿನ ಕಾರ್ಡ್ ಸಮಸ್ಯೆ ಬಗೆಹರಿಯಬೇಕು ಎಂದು ಸೂಚಿಸಿದರು.ಬೆಳ್ತಂಗಡಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಯುಡಿಐಡಿ ಕಾರ್ಡ್ ವಿತರಣೆ ಪ್ರಗತಿ ಕುಂಠಿತವಾಗಿರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿರುವ ಒಟ್ಟು ಅಂಗವಿಕಲರ ಸಂಖ್ಯೆಯನ್ನು ಕಲೆ ಹಾಕಬೇಕು ಹಾಗೂ 15 ದಿನಗಳೊಳಗೆ ಸಂಪೂರ್ಣ ಮಾಹಿತಿ ನೀಡುವಂತೆ ಹೇಳಿದರು.ವಿಕಲಚೇತನರ ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸುವುದು ಕಷ್ಟವಾಗಿರುವುದರಿಂದ ಆಯಾ ಶಾಲೆಗಳ ಮೂಲಕವೇ ಅರ್ಜಿ ಸಲ್ಲಿಸಲು ಕ್ರಮ ವಹಿಸಲು ಹೇಳಿದರು. ವಿಕಲಚೇತನರಿಗೆ ಮಾಶಾಸನ ಸ್ಥಗಿತಗೊಂಡಿರುವ ಬಗ್ಗೆಯೂ ಸರಿಯಾದ ಕಾರಣಗಳನ್ನು ಹುಡುಕಿ ಪರಿಶೀಲಿಸುವಂತೆ ಸೂಚಿಸಿದರು.ಸಭೆಯಲ್ಲಿ ವಿಕಲಚೇತನ ಮಹಿಳೆ ಪ್ರಮೀಳಾ ಎಂಬವರು, ಮಂಗಳೂರು ರೈಲ್ವೆ ನಿಲ್ದಾಣದ ಬಳಿ ಇರುವ ಗೂಡಂಗಡಿಯನ್ನು 2 ವರ್ಷಗಳ ಹಿಂದೆ ರಸ್ತೆ ಅಗಲೀಕರಣದ ಕೆಲಸಕ್ಕಾಗಿ ತೆಗೆದುಹಾಕಲಾಗಿದೆ ಎಂದು ಅಳಲು ತೋಡಿಕೊಂಡರು. ಪಾಲಿಕೆ ವತಿಯಿಂದ ಅಂಗವಿಕಲರಿಗೆ ನಿಗದಿಪಡಿಸಿದ ಮಾರುಕಟ್ಟೆ ಸ್ಥಳದಲ್ಲಿ ಅಂಗಡಿ ತೆರೆಯಲು ವ್ಯವಸ್ಥೆ ಮಾಡುವಂತೆ ಹೇಳಿದರು.ಕೆಲವೊಂದು ಅಂಗವಿಕಲರ ಶಾಲೆಗಳಿಗೆ ದೇವಾಲಯದಿಂದ ಊಟದ ವ್ಯವಸ್ಥೆ ಸ್ಥಗಿತಗೊಂಡಿರುವ ಬಗ್ಗೆ ಸದಸ್ಯರು ತಿಳಿಸಿದರು. ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಯಾವುದಾದರೂ ಸಂಸ್ಥೆಗಳಿಂದ ಅಥವಾ ಬೇರೆ ವ್ಯವಸ್ಥೆ ಮಾಡುವ ಭರವಸೆ ನೀಡಿದರು.ಅಂಗವಿಕಲರ ಕುಂದು ಕೊರತೆಗಳನ್ನು ಆಲಿಸಿದ ಜಿಲ್ಲಾಧಿಕಾರಿ, ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವಂತೆ ಸಲಹೆ ನೀಡಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ಜಿಲ್ಲಾ ಅಂಗವಿಕಲರ ಪುರ್ನವಸತಿ ಕೇಂದ್ರದ ಸದಸ್ಯರು, ಅಂಗವಿಕಲರ ಸಮಿತಿಯ ಅಧಿಕಾರಿಗಳು, ವಿವಿಧ ಸಂಸ್ಥೆಗಳ ಮುಖ್ಯಸ್ಥರು ಇದ್ದರು.

Share this article