ಮುಮ್ತಾಜ್‌ ಅಲಿ ಮೃತದೇಹ ಪತ್ತೆ, ಮಹಿಳೆ ಸೇರಿ 6 ಮಂದಿ ವಿರುದ್ಧ ಕೇಸ್‌

KannadaprabhaNewsNetwork |  
Published : Oct 08, 2024, 01:18 AM IST
೩೨ | Kannada Prabha

ಸಾರಾಂಶ

ಕೂಳೂರು ಸೇತುವೆ ಪಕ್ಕ ಬಿಎಂಡಬ್ಲ್ಯೂ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಹಿಯುದ್ದೀನ್‌ ಬಾವ ಅವರ ಸಹೋದರ, ಉದ್ಯಮಿ ಬಿ.ಎಂ. ಮುಮ್ತಾಜ್‌ ಅಲಿ ಮೃತದೇಹ ಮಂಗಳವಾರ ಬೆಳಗ್ಗೆ ಕೂಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧನಕ್ಕೆ ಜಾಲ ಬೀಸಲಾಗಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಕೂಳೂರು ಸೇತುವೆ ಪಕ್ಕ ಬಿಎಂಡಬ್ಲ್ಯೂ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಹಿಯುದ್ದೀನ್‌ ಬಾವ ಅವರ ಸಹೋದರ, ಉದ್ಯಮಿ ಬಿ.ಎಂ. ಮುಮ್ತಾಜ್‌ ಅಲಿ ಮೃತದೇಹ ಮಂಗಳವಾರ ಬೆಳಗ್ಗೆ ಕೂಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಮ್ತಾಜ್‌ ಅಲಿ ಅವರಿಗೆ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಕೃಷ್ಣಾಪುರದ ಮಹಿಳೆ, ಆಕೆಯ ಪತಿ ಸೇರಿದಂತೆ ಆರು ಮಂದಿ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧನಕ್ಕೆ ಜಾಲ ಬೀಸಲಾಗಿದೆ.

ಸೋಮವಾರ ಬೆಳಗ್ಗೆ 3.10ರ ವೇಳೆಗೆ ಮನೆಯಿಂದ ಹೊರಟಿದ್ದ ಮುಮ್ತಾಜ್‌ ಅಲಿ ಸುಮಾರು 4.30ರ ವೇಳೆಗೆ ಕೂಳೂರು ಸೇತುವೆ ಬಳಿ ಬಿಎಂಡಬ್ಲ್ಯೂ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದರು. ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿಶಾಮಕ, ಸ್ಥಳೀಯ ಯುವಕರು ಸೇರಿ ಒಟ್ಟು ಆರು ತಂಡಗಳು ರಾತ್ರಿವರೆಗೆ ಶೋಧ ಕಾರ್ಯ ನಡೆಸಿದರೂ ದೇಹ ಪತ್ತೆಯಾಗಿರಲಿಲ್ಲ. ಮಂಗಳವಾರ ಬೆಳಗ್ಗೆ 6 ಗಂಟೆಗೆ ಮತ್ತೆ ಶೋಧ ಆರಂಭವಾಯಿತು. ಸುಮಾರು 10.30ರ ವೇಳೆಗೆ ಮುಮ್ತಾಜ್‌ ಅವರ ಮೃತದೇಹ ಕೂಳೂರು ಸೇತುವೆಯ ಕೆಲವೇ ಮೀಟರ್‌ ದೂರದಲ್ಲಿ ಪತ್ತೆಯಾಯಿತು.

ಬಳಿಕ ಮೃತದೇಹವನ್ನು ಎಜೆ ಆಸ್ಪತ್ರೆಗೆ ಕೊಂಡೊಯ್ದು, ಪೋಸ್ಟ್‌ ಮಾರ್ಟಂ ಮತ್ತಿತರ ಪ್ರಕ್ರಿಯೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಕೃಷ್ಣಾಪುರದ ಅವರ ಮನೆಯಲ್ಲಿ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದ್ದು, ನೂರಾರು ಮಂದಿ ಭಾಗವಹಿಸಿದ್ದರು. ಸಂಜೆ ವೇಳೆಗೆ ಕೃಷ್ಣಾಪುರ ಈದ್ಗಾ ಮಸೀದಿಯಲ್ಲಿ ಸರ್ವ ಮುಖಂಡರು, ಸಾರ್ವಜನಿಕರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಮಹಿಳೆ ಸೇರಿದಂತೆ ಆರು ಮಂದಿಯ ತಂಡದ ನಿರಂತರ ಬ್ಲ್ಯಾಕ್‌ಮೇಲ್, ಬೆದರಿಕೆ ಮತ್ತು ಕಿರುಕುಳದ ಪರಿಣಾಮವೇ ಮುಮ್ತಾಜ್‌ ಅಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ನೀಡಿದ ದೂರಿನ ಆಧಾರದಲ್ಲಿ ಆರು ಮಂದಿ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಸುಲಿಗೆ ಹಾಗೂ ಆತ್ಮಹತ್ಯೆಗೆ ಪ್ರೇರಣೆ ಪ್ರಕರಣ ದಾಖಲಿಸಲಾಗಿದೆ.

ಆಯಿಷಾ ರೆಹಮತ್‌ ಮಾಸ್ಟರ್‌ ಮೈಂಡ್‌:

ಸುರತ್ಕಲ್‌ ಕೃಷ್ಣಾಪುರದ 7ನೇ ಬ್ಲಾಕ್‌ ನಿವಾಸಿ ಆಯಿಷಾ ರೆಹಮತ್‌ ಎಂಬಾಕೆಯೇ ಪ್ರಕರಣದ ಮಾಸ್ಟರ್‌ ಮೈಂಡ್‌. ಮುಮ್ತಾಜ್‌ ಅಲಿಗೆ ನಿರಂತರ ಬೆದರಿಕೆ, ಹಣದ ಬೇಡಿಕೆ ಇಟ್ಟಿದ್ದ ಈಕೆಯ ಪತಿ ಶೋಯೆಬ್‌ ಕೂಡ ಸಾಥ್‌ ನೀಡಿದ್ದ. ಜತೆಗೆ ಕಾಟಿಪಳ್ಳ ಬೊಳ್ಳಾಜೆಯ ಅಬ್ದುಲ್‌ ಸತ್ತಾರ್‌, ಬಂಟ್ವಾಳ ಸಜಿಪಮುನ್ನೂರು ನಿವಾಸಿ ಖಲಂದರ್‌ ಶಾಫಿ, ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಮುಸ್ತಫಾ, ಇದೇ ಊರಿನ ಮೊಹಮ್ಮದ್‌ ಸಿರಾಜ್‌ ಸಲಾಂ ಎಂಬವರ ಮೇಲೂ ಪ್ರಕರಣ ದಾಖಲಾಗಿದೆ. ಇವರ ಪತ್ತೆಗೆ ಪೊಲೀಸ್‌ ತಂಡಗಳು ಕಾರ್ಯಾಚರಣೆ ಆರಂಭಿಸಿವೆ.

ಸೋಮವಾರ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಮುಮ್ತಾಜ್‌ ಅವರು ಕೃತ್ಯಕ್ಕೆ ಕಾರಣರಾದ ವ್ಯಕ್ತಿಗಳನ್ನು ಹೆಸರಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕುಟುಂಬ ಸದಸ್ಯರು ಮತ್ತು ಸ್ನೇಹಿತರಿಗೆ ಆಡಿಯೊ ಸಂದೇಶ ಕಳುಹಿಸಿದ್ದರು. ಈ ಕುರಿತಾಗಿಯೂ ತನಿಖೆ ಮುಂದುವರಿದಿದೆ. ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್‌ ಅಗ್ರವಾಲ್‌ ತಿಳಿಸಿದ್ದಾರೆ.

...................

ಹಣಕ್ಕಾಗಿ ವ್ಯವಸ್ಥಿತ ರೀತಿಯ ಹನಿಟ್ರಾಪ್‌?

ವಿದ್ಯಾಸಂಸ್ಥೆ ಮಾತ್ರವಲ್ಲದೆ ವಿವಿಧ ಉದ್ಯಮಗಳನ್ನು ಹೊಂದಿದ್ದ ಮುಮ್ತಾಜ್‌ ಅಲಿ ಸಾಮಾಜಿಕ, ರಾಜಕೀಯವಾಗಿ ಪ್ರಭಾವಿ ವ್ಯಕ್ತಿಯಾಗಿದ್ದರು. ಪ್ರಥಮ ಆರೋಪಿ ಆಯಿಷಾ ರೆಹಮತ್‌, ಇತರರ ಜತೆ ಸೇರಿ ವ್ಯವಸ್ಥಿತವಾಗಿ ಹನಿಟ್ರಾಪ್‌ ನಡೆಸಿದ್ದೇ ಮುಮ್ತಾಜ್‌ ಸಾವಿಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಆಯಿಷಾ ರೆಹಮತ್‌ ಹಲವು ವರ್ಷಗಳಿಂದ ಮುಮ್ತಾಜ್‌ ಅಲಿಗೆ ಪರಿಚಯವಿದ್ದು, ಮುಮ್ತಾಜ್‌ ಅವರ ಸಂಸ್ಥೆಯಲ್ಲೇ ಉದ್ಯೋಗಕ್ಕಿದ್ದಳು. ಈ ನಡುವೆ 2-3 ತಿಂಗಳಿಂದೀಚೆಗೆ ಸೆಕ್ಸ್‌ ವಿಡಿಯೊ ಇದೆ ಎಂದು ಹೇಳಿ ಮುಮ್ತಾಜ್‌ಗೆ ಕಿರುಕುಳ ನೀಡಲಾರಂಭಿಸಿದ್ದಳು. ಮಾತ್ರವಲ್ಲದೆ, ವಿವಾಹವಾಗುವಂತೆ ಬೆದರಿಕೆಯೊಡ್ಡುತ್ತಿದ್ದಳು. ವಿವಾಹಕ್ಕೆ ಮುಮ್ತಾಜ್‌ ನಿರಾಕರಿಸಿದ್ದರು ಎನ್ನಲಾಗಿದೆ. ಅದರ ಬಳಿಕ ಹಣಕ್ಕಾಗಿ ಪದೇ ಪದೆ ಸತಾಯಿಸುತ್ತಿದ್ದ ರೆಹಮತ್‌ಗೆ 50 ಲಕ್ಷ ರು.ಗಳನ್ನು ಮುಮ್ತಾಜ್‌ ನೀಡಿದ್ದಾರೆ. ಅದರಲ್ಲಿ 25 ಲಕ್ಷ ರು.ಗಳನ್ನು ಚೆಕ್‌ ಮೂಲಕ ಪಾವತಿಸಿದ್ದಾರೆ.

ನಂತರವೂ ಹೆಚ್ಚಿನ ಹಣಕ್ಕೆ ರೆಹಮತ್‌ ಬೇಡಿಕೆ ಇಟ್ಟಾಗ ಮುಮ್ತಾಜ್‌ ನಿರಾಕರಿಸಿದ್ದಾರೆ. ಈ ವೇಳೆ ಮುಮ್ತಾಜ್‌ ಅವರ ರಾಜಕೀಯ ವಿರೋಧಿ ಅಬ್ದುಲ್‌ ಸತ್ತಾರ್‌ನ್ನು ಸಂಪರ್ಕಿಸಿ ಎಲ್ಲ ವಿಚಾರ ತಿಳಿಸಿದ್ದಾಳೆ. ಈ ಕಾಲ್‌ ರೆಕಾರ್ಡ್‌ನ ಆಡಿಯೊ ಇಟ್ಟುಕೊಂಡು ಸತ್ತಾರ್‌ ಮತ್ತು ಉಳಿದ ಮೂವರು ಮುಮ್ತಾಜ್‌ ಅಲಿಗೆ 2 ಕೋಟಿ ರು. ಕೊಡುವಂತೆ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ. ಈ ನಡುವೆ ಆಯಿಷಾ ರೆಹಮತ್‌, ಮುಮ್ತಾಜ್‌ ಅವರ ಪತ್ನಿಯನ್ನು ಭೇಟಿಯಾಗಿದ್ದು, ಇದರ ಬಳಿಕ ಮುಮ್ತಾಜ್‌ ಕುಟುಂಬದಲ್ಲಿ ತೀವ್ರ ಗೊಂದಲ ಸೃಷ್ಟಿಯಾಗಿತ್ತು. ಈ ಎಲ್ಲ ವಿಚಾರಗಳಿಂದ ತನ್ನ ಮರ್ಯಾದೆಗೆ ಧಕ್ಕೆ ಉಂಟಾಯಿತೆಂದು ತೀವ್ರ ಮಾನಸಿಕ ಗೊಂದಲಕ್ಕೀಡಾದ ಮುಮ್ತಾಜ್‌ ದಾರಿ ಕಾಣದೆ ಆತ್ಮಹತ್ಯೆ ತೀರ್ಮಾನ ಕೈಗೊಂಡರು ಎಂದು ತಿಳಿದುಬಂದಿದೆ...................ಬಸ್ಸಿಗೆ ಡಿಕ್ಕಿಯಾಗಿದ್ದ ಕಾರುಸೋಮವಾರ ಮುಂಜಾನೆ 3.10ರ ಸುಮಾರಿಗೆ ಮನೆಯಿಂದ ಹೊರಟಿದ್ದ ಮುಮ್ತಾಜ್‌ ಅವರ ಬಿಎಂಡಬ್ಲ್ಯೂ ಕಾರು ಕೂಳೂರಿನ ಎಂಸಿಎಂ ಬಳಿಯ ರೈಲ್ವೆ ಗೇಟ್‌ ಬಳಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಸಿಸಿಟಿವಿ ಫೂಟೇಜ್‌ಗಳ ಆಧಾರದಲ್ಲಿ ಅಪಘಾತಕ್ಕೆ ಒಳಗಾದ ಬಸ್ಸನ್ನು ಗುರುತಿಸಲಾಗಿದ್ದು, ಬಸ್ಸು ಮಾಲೀಕರು ಈ ಕುರಿತು ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆದಿದೆ.....................

ಸಾವಿನ ಕಾರಣಕರ್ತರಿಗೆ ಶಿಕ್ಷೆಯಾಗಲಿ: ಬಾವ

ಮುಮ್ತಾಜ್‌ ಅಲಿ ಅಕಾಲಿಕ ಸಾವಿನಿಂದ ಅವರ ಕುಟುಂಬ ಕಂಗಾಲಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಮೊಹಿಯುದ್ದೀನ್‌ ಬಾವ, ಬ್ಲಾಕ್ ಮೇಲ್‌ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ಶೈಕ್ಷಣಿಕ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದ. ಇದನ್ನು ಸಹಿಸದೆ ಕೆಲವು ಶಕ್ತಿಗಳು ಕುತಂತ್ರ ಮಾಡಿ ಸಾವಿಗೆ ಕಾರಣರಾಗಿದ್ದಾರೆ. ಆತನ ಫೋನ್‌ನ್ನು ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ನನ್ನ ಸಹೋದರನ ಸಾವಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಲ್‌ಪಿಜಿ ಪೂರೈಕೆ ಸುಧಾರಣೆ: ಸಪ್ಲೈ ಶೇ.20ರಷ್ಟು ಏರಿಕೆ
ಬಾಗಲಕೋಟೆ, ದಾವಣಗೆರೆ ಕ್ಷೇತ್ರಕ್ಕೆ ಏ.9ಕ್ಕೆ ಉಪಸಮರ