ಕನ್ನಡಪ್ರಭ ವಾರ್ತೆ ಮಂಡ್ಯ
ಕೆ.ಆರ್.ಪೇಟೆ ತಾಲೂಕಿನ ಸಿಂಧಘಟ್ಟ ಮತ್ತು ತೆಂಡೇಕರೆಯಲ್ಲಿ ಪೂರ್ವ ಮುಂಗಾರಿನಲ್ಲಿ ಬಿತ್ತನೆ ಮಾಡಲಾದ ಬೆಳೆಗಳ ಪರಿಸ್ಥಿತಿಯ ಕುರಿತಂತೆ ಅಧ್ಯಯನ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಳೆಯ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳಬಹುದಾದರೂ ಖಚಿತವಾಗಿ ಏನನ್ನೂ ಹೇಳಲಾಗದ ಪರಿಸ್ಥಿತಿಯಲ್ಲಿದ್ದೇವೆ. ಮಳೆ ಆಶಾದಾಯಕವಾಗಿ ಬಂದರೆ ಬೆಳೆ ಬೆಳೆಯುವುದಕ್ಕೆ ಅವಕಾಶ ಮಾಡಿಕೊಡಬಹುದು. ಒಂದು ವೇಳೆ ಮಳೆ ಕೊರತೆಯಿಂದ ಭತ್ತ, ಕಬ್ಬು ಸೇರಿದಂತೆ ಇನ್ನಿತರೆ ಬೆಳೆಗಳನ್ನು ಬಿತ್ತನೆ ಮಾಡಲಾಗದಿದ್ದರೆ ಅರೆ ಖುಷ್ಕಿ ಬೆಳೆಗಳನ್ನು ಬೆಳೆಯುವುದಕ್ಕೆ ಅನುವು ಮಾಡಿಕೊಡಬಹುದೇ ಎಂಬ ಬಗ್ಗೆ ಒಂದು ವಾರದೊಳಗೆ ನಿರ್ಧರಿಸಿ ರೈತರಿಗೆ ಮಾಹಿತಿ ನೀಡಲಾಗುವುದು ಎಂದರು.ಪೂರ್ವ ಮುಂಗಾರಿನಲ್ಲಿ ಬಿತ್ತನೆಯಾದ ಉದ್ದು, ಹೆಸರು, ಅಲಸಂದೆ ಬೆಳೆಗಳು ಮಳೆ ಅಭಾವದಿಂದ ಒಣಗುತ್ತಿವೆ. ಈ ಬೆಳೆಗಳಿಗೆ ಹೆಚ್ಚಿನ ಮಳೆಯ ಅಗತ್ಯವಿರಲಿಲ್ಲ. ಮಳೆ ಸ್ವಲ್ಪ ಪ್ರಮಾಣದಲ್ಲಿ ಆಗಿದ್ದರೂ ಬೆಳೆ ರೈತರ ಕೈಸೇರುತ್ತಿತ್ತು. ಮಳೆಯಾಗದಿರುವ ಹಿನ್ನೆಲೆಯಲ್ಲಿ ಬಿತ್ತನೆ ಮಾಡಿದ್ದ ಬೆಳೆಯಲ್ಲಿ ಸ್ವಲ್ಪ ಪ್ರಮಾಣದ ಬೆಳೆ ಒಣಗುತ್ತಿದೆ ಎಂದರು.
ವಿಶ್ವೇಶ್ವರಯ್ಯ ನಾಲಾ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಇಲ್ಲದ ಕಾರಣ ಕಬ್ಬು ಬೆಳೆ ಒಣಗಿದೆ. ಸೋಮವಾರ ನಾಗಮಂಗಲ ತಾಲೂಕಿನಲ್ಲೂ ಬೆಳೆ ಪರಿಸ್ಥಿತಿಯ ಅಧ್ಯಯನ ನಡೆಸಿ ಎಲ್ಲಾ ತಾಲೂಕುಗಳಿಂದ ಕ್ರೋಢೀಕರಿಸಿದ ಮಾಹಿತಿಯನ್ನೊಳಗೊಂಡ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಎಲ್ಲಾ ಜಿಲ್ಲೆಗಳಿಂದ ಬಂದಂತಹ ವರದಿಯನ್ನು ಆಧರಿಸಿ ಮುಖ್ಯಮಂತ್ರಿಗಳೊಂದಿಗೆ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಚರ್ಚಿಸಿ ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಆಲೋಚಿಸುತ್ತೇವೆ ಎಂದು ನುಡಿದರು.
ಜಿಲ್ಲೆಯ ರೈತರು ಬೆಳೆ ವಿಮೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದರಿಂದ ಅತಿವೃಷ್ಟಿ ಅಥವಾ ಅನಾವೃಷ್ಟಿಯಿಂದ ಬೆಳೆಗಳು ನಷ್ಟವಾದರೆ ಬರುವ ವಿಮೆ ಹಣದಿಂದ ಆರ್ಥಿಕ ನಷ್ಟದಿಂದ ಪಾರಾಗಬಹುದು ಎಂದು ಸಚಿವ ಎನ್.ಚಲುವರಾಯಸ್ವಾಮಿ ರೈತರಿಗೆ ಕಿವಿಮಾತು ಹೇಳಿದರು.
ಇದನ್ನು ಕೇಳಿದ ಸಚಿವರು, ಬೆಳೆ ವಿಮೆ ಮಾಡಿಸಿದ್ದರೆ ವಿಮೆ ಹಣ ನಿಮ್ಮ ಕೈಸೇರುತ್ತಿತ್ತು. ಬೆಳೆ ನಷ್ಟದಿಂದ ಉಂಟಾಗಿದ್ದ ಆರ್ಥಿಕ ನಷ್ಟದಿಂದ ಪಾರಾಗಬಹುದಿತ್ತು. ಬೆಳೆ ವಿಮೆ ಬಗ್ಗೆ ರೈತರು ಆಸಕ್ತಿ ಮೂಡಿಸಿಕೊಂಡು ಪ್ರತಿ ವರ್ಷ ಬೆಳೆಗಳಿಗೆ ವಿಮೆ ಮಾಡಿಸಬೇಕು. ವಿಮೆ ಹಣದಲ್ಲಿ ಶೇ.೯೮ರಷ್ಟನ್ನು ಸರ್ಕಾರವೇ ಪಾವತಿಸುತ್ತದೆ. ಉಳಿದ ಶೇ.೨ರಷ್ಟನ್ನು ಮಾತ್ರ ರೈತರು ಪಾವತಿಸಿದರೆ ಸಾಕು. ಮಳೆ ಹೆಚ್ಚಾಗಿ ಬೆಳೆ ಹಾಳಾದರೂ, ಮಳೆ ಕೊರತೆಯಿಂದ ಬೆಳೆ ನಷ್ಟವಾದರೂ ವಿಮೆ ಹಣ ಕೈಗೆ ಸಿಗುವ ಗ್ಯಾರಂಟಿ ಇರುತ್ತದೆ. ಇದರ ಬಗ್ಗೆ ಗ್ರಾಮ ಸಭೆಗಳಲ್ಲಿ ಪಿಡಿಒಗಳು ರೈತರಿಗೆ ಅರಿವು ಮೂಡಿಸಿ ಬೆಳೆ ವಿಮೆ ಪ್ರಮಾಣವನ್ನು ಹೆಚ್ಚಿಸುವಂತೆ ಜಿಪಂ ಸಿಇಓ ಅವರಿಗೆ ಸೂಚನೆ ನೀಡಿದರು.