ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ

KannadaprabhaNewsNetwork |  
Published : Jun 22, 2025, 01:18 AM ISTUpdated : Jun 22, 2025, 11:07 AM IST
ಯೋಗ ದಿನದಲ್ಲಿ ವಿಜಯೇಂದ್ರ ಅವರಿಗೆ ಯೋಗ | Kannada Prabha

ಸಾರಾಂಶ

ರಾಜ್ಯಾಧ್ಯಕ್ಷರ ಹುದ್ದೆ ಕುರಿತು ಪಕ್ಷ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

 ಬೆಂಗಳೂರು :  ರಾಜ್ಯಾಧ್ಯಕ್ಷರ ಹುದ್ದೆ ಕುರಿತು ಪಕ್ಷ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲಾ ಜಿಲ್ಲಾಧ್ಯಕ್ಷರ ಅಭಿಪ್ರಾಯ ಪಡೆದು ಹಾಗೂ ಪಕ್ಷದ ಮುಖಂಡರ ಅಭಿಮತ ಪಡೆದ ಬಳಿಕ ಅಂತಿಮವಾಗಿ ಯಾರನ್ನು ರಾಜ್ಯಾಧ್ಯಕ್ಷರಾಗಿ ಮಾಡಿದರೆ ಒಳ್ಳೆಯದು ಎಂದು ಪಕ್ಷ ಶೀಘ್ರದಲ್ಲೇ ನಿರ್ಧರಿಸುವ ವಿಶ್ವಾಸವಿದೆ ಎಂದರು.

ನಾನು ಕಳೆದ ಒಂದೂಕಾಲು ವರ್ಷದಿಂದ ಕೊಟ್ಟಿರುವ ಜವಾಬ್ದಾರಿಯನ್ನು ಪಕ್ಷದ ಕಾರ್ಯಕರ್ತನಾಗಿ ಶ್ರದ್ಧೆಯಿಂದ ನಿರ್ವಹಿಸುತ್ತಿದ್ದೇನೆ. ಕೇಂದ್ರ ಮತ್ತು ರಾಷ್ಟ್ರೀಯ ನಾಯಕರಿಗೆ ಕೊಡಬೇಕಾದ ಮಾಹಿತಿ ಕೊಡುತ್ತಾ ಬಂದಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಕೇಂದ್ರ ಸಚಿವ ಅಮಿತ್‌ ಶಾ ಅವರ ಭೇಟಿ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಮತ್ತು ಪಕ್ಷದ ಕೆಲ ಹಿರಿಯ ಮುಖಂಡರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದೇವೆ. ಸುಮಾರು 20-25 ನಿಮಿಷಗಳ ಕಾಲ ರಾಜ್ಯದ ರಾಜಕಾರಣ, ಪ್ರಚಲಿತ ವಿದ್ಯಾಮಾನಗಳ ಕುರಿತು ಚರ್ಚಿಸಿರುವುದಾಗಿ ಹೇಳಿದರು.

ಒಟ್ಟಾಗಿ ಹೋಗುವಂತೆ ಶಾ ಕಿವಿಮಾತು:

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಒಡೆದಾಳುವ ನೀತಿ ಅನುಸರಿಸುತ್ತಿದೆ. ಈ ಸರ್ಕಾರ ರಾಜ್ಯದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದ ಕುರಿತು ಚರ್ಚೆ ಮಾಡಿದ್ದೇವೆ. ಅವರು ಸಮಾಧಾನದಿಂದ ಆಲಿಸಿದ್ದಾರೆ. ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಉತ್ತಮ ಅವಕಾಶವಿದೆ. ಎಲ್ಲರೂ ವ್ಯತ್ಯಾಸಗಳನ್ನು ಮರೆತು ಒಟ್ಟಾಗಿ-ಒಂದಾಗಿ ಹೋಗಬೇಕೆಂದು ತಿಳಿಸಿದ್ದಾರೆ. ಆಗ ಮಾತ್ರ ಕಾರ್ಯಕರ್ತರಿಗೆ ಗೌರವ ಕೊಟ್ಟಂತಾಗುತ್ತದೆ. ಜನ ನಮ್ಮಲ್ಲಿ ವಿಶ್ವಾಸ ಇಡುತ್ತಾರೆ ಎಂದು ಕಿವಿಮಾತು ಹೇಳಿದ್ದಾಗಿ ತಿಳಿಸಿದರು.

ಅಮಿತ್‌ ಶಾ ಸಂತೋಷ:

ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷಕ್ಕೆ ಎಷ್ಟು ಜವಾಬ್ದಾರಿ ಇದೆಯೋ ಅದಕ್ಕಿಂತ ಹೆಚ್ಚಿನ ಹೊಣೆಗಾರಿಕೆ ವಿಪಕ್ಷಕ್ಕಿದೆ. ರಾಜ್ಯ ಸರ್ಕಾರದ ಈಗಿನ ಕಾರ್ಯವೈಖರಿ, ಕಾಂಗ್ರೆಸ್ ಸರ್ಕಾರದ ಕರಾಳ ಮುಖವನ್ನು ಜನರ ಮುಂದೆ ಅನಾವರಣಗೊಳಿಸುವ ಕೆಲಸವನ್ನು ನಾವು ವಿಪಕ್ಷವಾಗಿ ಮಾಡುತ್ತಾ ಬಂದಿದ್ದೇವೆ ಎಂದು ವಿವರಿಸಿದಾಗ ಅಮಿತ್‌ ಶಾ ಅವರು ಸಂತೋಷ ವ್ಯಕ್ತಪಡಿಸಿದ್ದಾಗಿ ಹೇಳಿದರು.ಕೆ.ಎಸ್.ಈಶ್ವರಪ್ಪ ಅವರನ್ನು ಪಕ್ಷಕ್ಕೆ ಮರುಸೇರ್ಪಡೆ ಕುರಿತು ಪ್ರಶ್ನಿಸಿದಾಗ, ಈ ಬಗ್ಗೆ ರಾಜ್ಯಮಟ್ಟ ಅಥವಾ ಕೇಂದ್ರ ಮಟ್ಟದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಬಿ.ವೈ.ವಿಜಯೇಂದ್ರ ಉತ್ತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ