ಕನ್ನಡಪ್ರಭ ವಾರ್ತೆ ಮಳವಳ್ಳಿ:
ಪಟ್ಟಣದ ತಾಪಂ ಸಭಾಂಗಣದಲ್ಲಿ ತಹಸೀಲ್ದಾರ್ ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಕ್ಕಲಿಗ ಹಾಗೂ ಇತರ ಸಮುದಾಯಗಳ ಮುಖಂಡರ ಸಲಹೆ, ಸೂಚನೆ ಪಡೆದು ತಾಲೂಕು ಆಡಳಿತದ ವತಿಯಿಂದ ಜೂನ್ 27 ರಂದು ಕೆಂಪೇಗೌಡ ಜಯಂತಿಯನ್ನು ಅರ್ಥಪೂರ್ಣವಾಗಿ, ಯಶಸ್ವಿಯಾಗಿ ನಡೆಸಲು ನಿರ್ಧರಿಸಲಾಯಿತು.
ಒಕ್ಕಲಿಗರ ಸಂಘದ ಅಧ್ಯಕ್ಷ ನಾಗೇಶ್ ಮಾತನಾಡಿ, ನಾಡಪ್ರಭು ಕೆಂಪೇಗೌಡರು ಎಲ್ಲಾ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಅವರು ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಂಪೇಗೌಡರ ಜಯಂತಿಯನ್ನು ಆಚರಿಸಬೇಕಾಗಿದೆ ಎಂದರು.ಎಲ್ಲಾ ಸಮುದಾಯದ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಾಲೂಕು ಆಡಳಿತ ಪೂರ್ವಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಜಾನಪದ ಕಲಾಮೇಳದೊಂದಿಗೆ ಕೆಂಪೇಗೌಡರ ಭಾವಚಿತ್ರ ಮೆರವಣಿಗೆ ಮಾಡಬೇಕು, ಸಾಧಕರಿಗೆ ಸನ್ಮಾನ ಮಾಡಬೇಕೆಂದು ಸಲಹೆ ನೀಡಿದರು.ಮುಖಂಡ ಎನ್.ಕೆ.ಕುಮಾರ್ ಮಾತನಾಡಿ, ಕೆಂಪೇಗೌಡರ ಜಯಂತಿಯನ್ನು ಹಬ್ಬದ ರೀತಿಯಲ್ಲಿ ಮಾಡಬೇಕು. ಎಲ್ಲಾ ಹೋಬಳಿಗಳಲ್ಲಿ ಪ್ರಚಾರ ನಡೆಸಿ ಸಾವಿರಾರು ಮಂದಿ ಭಾಗವಹಿಸಿ ಯಶಸ್ವಿಯಾಗಿ ಜಯಂತಿ ಆಚಸುವಂತೆ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳು ಶ್ರಮಿಸಬೇಕು ಎಂದು ತಿಳಿಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ ರಾಜು ಮಾತನಾಡಿ, ಕೆಂಪೇಗೌಡರು ತಮ್ಮ ಆಳ್ವಿಕೆಯಲ್ಲಿ ಒಂದೊಂದು ಸಮುದಾಯಕ್ಕೂ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಎಲ್ಲಾ ಜನಾಂಗದವರು ಸ್ಮರಿಸುವ ಸಾಧಕರು ಕೆಂಪೇಗೌಡರು. ಆದ್ದರಿಂದ ಅದ್ಧೂರಿಯಾಗಿ ಕೆಂಪೇಗೌಡರ ಜಯಂತಿಯನ್ನು ಆಚರಿಸಬೇಕೆಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.ತಹಸೀಲ್ದಾರ್ ಲೋಕೇಶ್ ಮಾತನಾಡಿ, ಮುಖಂಡರ ಸಲಹೆ ಮತ್ತು ಸಹಕಾರದೊಂದಿಗೆ ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಗುವುದು. ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಿ ತಮ್ಮ ಇಲಾಖೆಗೆ ಕೊಟ್ಟಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.