ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ 4 ಗ್ರಾಮ ಪಂಚಾಯ್ತಿಗಳ ಜನಪ್ರತಿನಿಧಿಗಳು, ರೈತ ಸಂಘ, ದಲಿತ ಸಂಘಟನೆ ಹಾಗೂ ಗ್ರಾಮದ ಮುಖಂಡರು ಭಾಗವಹಿಸಿದ ಸಭೆಯಲ್ಲಿ ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯ್ತಿಗಳನ್ನು ಸೇರ್ಪಡೆ ವಿರೋಧಿಸಿ ಮುಂದಿನ ಹೋರಾಟದ ರೂಪುರೇಷಗಳ ಕುರಿತು ಚರ್ಚೆ ನಡೆಸಲಾಯಿತು.
ಹೋರಾಟದ ಮೊದಲ ಹಂತವಾಗಿ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರುವ ಗೆಜ್ಜಲಗೆರೆ, ಸೋಮನಹಳ್ಳಿ, ಗೊರವನಹಳ್ಳಿ ಹಾಗೂ ಚಾಮನಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರಿಗೆ ನಗರಸಭೆ ವ್ಯಾಪ್ತಿಗೆ ಗ್ರಾಮಗಳು ಸೇರ್ಪಡೆಯಾಗುವುದರಿಂದ ಉಂಟಾಗುವ ಸಾಧಕ, ಬಾದಕಗಳ ಕುರಿತು ಹೋರಾಟ ಸಮಿತಿ ಸದಸ್ಯರು ಕರಪತ್ರದ ಮೂಲಕ ಜಾಗೃತಿ ಮೂಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ನಂತರ ಹೋರಾಟದ ಎರಡನೇ ಹಂತವಾಗಿ ಎಲ್ಲಾ ಗ್ರಾಮಗಳ ಸುಮಾರು 2 ಸಾವಿರ ಮಂದಿ ಗ್ರಾಮಸ್ಥರ ಬೆಂಬಲದೊಂದಿಗೆ ಬೃಹತ್ ಹೋರಾಟ ನಡೆಸುವ ಮೂಲಕ ಸರ್ಕಾರವನ್ನು ಎಚ್ಚರಿಸುವ ಹೋರಾಟದ ಜೊತೆಗೆ ಜುಲೈ 3ರೊಳಗೆ ತಾಲೂಕ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಒಕ್ಕೊರಲ ತೀರ್ಮಾನ ಕೈಗೊಳ್ಳಲಾಯಿತು.ಗ್ರಾಪಂಗಳನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡುವುದನ್ನು ವಿರೋಧಿಸಿ ರಾಜ್ಯಪಾಲರು, ಮುಖ್ಯಮಂತ್ರಿ, ಪೌರಾಡಳಿತ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೆ ಮನವಿ ಸಲ್ಲಿಸುದು, ಸರ್ಕಾರ ಹೊರಡಿಸಿರುವ ಗೆಜೆಟ್ ನೋಟಿಫಿಕೇಶನ್ ಕಾನೂನಾತ್ಮಕ ಹೋರಾಟ ನಡೆಸುವ ಸಂಬಂಧ ವಕೀಲರೊಂದಿಗೆ ಚರ್ಚಿಸಿ ಗ್ರಾಮಗಳ ಉಳಿವು ಹೋರಾಟ ಸಮಿತಿಯಿಂದ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿ ಸುವುದರೊಂದಿಗೆ ಹೋರಾಟ ನಡೆಸಲು ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು.