ಕಾರಟಗಿ: ಇಲ್ಲಿನ ನವಲಿ ವೃತ್ತದ ಹಳೆಯ ತಹಸೀಲ್ದಾರ್ ಕಚೇರಿ ಆವರಣ ಸುತ್ತಲು ಮುಖ್ಯರಸ್ತೆ ಬದಿಯಲ್ಲಿರುವ ಗೂಡಂಗಡಿಗಳು ಮತ್ತು ಅನಧಿಕೃತ ಶೆಡ್ಗಳನ್ನು ತೆರವುಗೊಳಿಸುವುದಾಗಿ ಪುರಸಭೆ ಮುಖ್ಯಾಧಿಕಾರಿ ಸುರೇಶ ಶೆಟ್ಟರ್ ಹೇಳಿದರು.
ಅಲ್ಲಿನ ವ್ಯಾಪಾರಿಗಳಿಗೆ, ಮಾಲೀಕರಿಗೆ ಈಗಾಗಲೇ ಮೌಖಿಕ ಸೂಚನೆ ನೀಡಲಾಗಿದೆ. ಶೀಘ್ರದಲ್ಲೇ ನೋಟಿಸ್ ಜಾರಿ ಮಾಡಿ ತೆರವು ಕಾರ್ಯ ಆರಂಭಿಸಲಾಗುವುದು. ನೂತನ ಬಸ್ ನಿಲ್ದಾಣ ಪ್ರಾರಂಭವಾದಾಗಿನಿಂದ ಮುಖ್ಯ ರಸ್ತೆಯಲ್ಲಿ ಜನಸಂದಣಿ ಹೆಚ್ಚಿದ್ದು, ಇದರಿಂದ ವಾಹನಗಳ ಸಂಚಾರಕ್ಕೂ ತೀವ್ರ ತೊಂದರೆಯಾಗಿದೆ ಎನ್ನುವ ದೂರುಗಳು ಇವೆ. ಜಿಲ್ಲಾಡಳಿತದ ಆದೇಶದಂತೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಕೂಡಾ ಈ ಗೂಡಂಗಡಿಗಳ ತೆರವು ಕಾರ್ಯಾಚರಣೆಯನ್ನು ಯೋಜಿಸಲಾಗಿದೆ. ಈ ಮೊದಲು ನೂತನ ಬಸ್ ನಿಲ್ದಾಣದ ಪಕ್ಕದ ಕರೆಯಪ್ಪ ತಾತನ ದೇವಸ್ಥಾನದ ಬಳಿ ಇಂದಿರಾ ಕ್ಯಾಂಟೀನ್ಗೆ ಸ್ಥಳ ನಿಗದಿಪಡಿಸಲಾಗಿತ್ತು. ಆ ಸ್ಥಳ ಕಿರಿದಾಗುವ ಹಿನ್ನೆಲೆಯಲ್ಲಿ ಅದನ್ನು ಕೈಬಿಟ್ಟು ಸಚಿವರ ಆದೇಶದನ್ವಯ ಹಳೆ ತಹಸೀಲ್ ಕಚೇರಿಯ ಆವರಣದ ಸ್ಥಳ ನಿಗದಿ ಮಾಡಿ ಸರ್ವೇ ಕೂಡ ನಡೆಸಲಾಗಿದೆ. ಶೀಘ್ರದಲ್ಲಿಯೇ ಕಟ್ಟಡದ ನೀಲನಕ್ಷೆ ಸಿದ್ಧಪಡಿಸಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದರು.