ಹಾವೇರಿ: ಮಳೆ ಕೊರತೆಯಿಂದ ಬೆಳೆಗಳು ಒಣಗಿ, ಇಳುವರಿಯಿಲ್ಲದೇ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಬರಗಾಲ ಘೋಷಣೆ ಮಾಡಿ ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಬೇಕು ಎಂದು ರೈತರು ಸಚಿವ ರುದ್ರಪ್ಪ ಲಮಾಣಿ ಅವರನ್ನು ಒತ್ತಾಯಿಸಿದರು.
ಈ ವೇಳೆ ರೈತರು ತಮ್ಮ ಸಮಸ್ಯೆಗಳನ್ನು ಸಚಿವರ ಮುಂದೆ ತೋಡಿಕೊಂಡರು. ಗೋವಿನಜೋಳ, ಸೋಯಾಬೀನ್, ಶೇಂಗಾ ಸೇರಿದಂತೆ ಹಲವು ಬೆಳೆಗಳು ನಿರೀಕ್ಷಿತ ಇಳುವರಿ ನೀಡುತ್ತಿಲ್ಲ. ಮಳೆ ಆಗಾಗ ಬರುತ್ತಿದ್ದರೂ ಜೂನ್ ತಿಂಗಳಲ್ಲಿ ಮಳೆ ಕೊರತೆಯಾಗಿದ್ದರಿಂದ ಬಿತ್ತನೆ ಮಾಡಿದ ಬೆಳೆಗಳಿಗೆ ಆರಂಭಿಕ ಹಂತದಲ್ಲಿ ಅಗತ್ಯ ನೀರು ದೊರೆಯಲಿಲ್ಲ ಎಂದು ರೈತರು ಅಳಲು ತೋಡಿಕೊಂಡರು.
ಹೊಲಗಳಲ್ಲಿ ಗಿಡಗಳು ಹಚ್ಚಹಸಿರಾಗಿ ಕಾಣಿಸುತ್ತಿವೆ. ಆದರೆ ಬೆಳೆಗಳಲ್ಲಿ ನಿರೀಕ್ಷಿತ ಇಳುವರಿ ಬರುತ್ತಿಲ್ಲ. ತೆನೆಗಳು ಕೂಡ ಸರಿಯಾಗಿ ಬಂದಿಲ್ಲ. ಹೀಗಾಗಿ ಬೆಳೆ ಬೆಳೆದರೂ ಕೈಗೆ ಆದಾಯ ಸಿಗದಂತಾಗಿದೆ. ಈಗಾಗಲೇ ಬಿತ್ತನೆ, ಗೊಬ್ಬರ, ಔಷಧಿ ಸೇರಿದಂತೆ ಸಾಕಷ್ಟು ಹಣ ಖರ್ಚು ಮಾಡಿದ್ದೇವೆ. ಬೆಳೆ ಕೈಕೊಟ್ಟಿರುವುದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರೈತರು ಸಚಿವರ ಗಮನಕ್ಕೆ ತಂದರು.ಮಳೆ ಕೊರತೆಯಿಂದ ಬೆಳೆಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಬೆಳೆ ಪರಿಸ್ಥಿತಿಯ ಸಮಗ್ರ ಸಮೀಕ್ಷೆ ನಡೆಸಬೇಕು. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಮಧ್ಯಂತರ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ರೈತರು ಒತ್ತಾಯಿಸಿದರು.
ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಅಗತ್ಯವಿರುವ ಗೊಬ್ಬರವನ್ನು ಸಮರ್ಪಕವಾಗಿ ಪೂರೈಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ರೈತರು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಹಿರೇಕೆರೂರು ತಾಲೂಕು ವಿವಿಧ ಗ್ರಾಮಗಳ ಕೆರೆ ವೀಕ್ಷಣೆ ಮಾಡಿದರು.
ಬರ ಘೋಷಣೆಗೆ ರೈತರ ಆಗ್ರಹ: ಬ್ಯಾಡಗಿ ತಾಲೂಕಿನಲ್ಲಿ ಪ್ರಸಕ್ತ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಆಗಾಗ್ಗೆ ಜಿಟಿಜಿಟಿ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ಈಗಾಗಲೇ ಬಿತ್ತನೆ ಮಾಡಿರುವ ಗೋವಿನಜೋಳ ಬೆಳೆ ಸಮರ್ಪಕವಾಗಿ ಬೆಳೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗದಿದ್ದರೆ ಬೆಳೆ ಇಳುವರಿ ಗಣನೀಯವಾಗಿ ಕುಸಿಯುವ ಸಾಧ್ಯತೆ ಇದೆ ಎಂದು ರೈತರು ಸಚಿವರಿಗೆ ತಿಳಿಸಿದರು.