ಕನ್ನಡಪ್ರಭ ವಾರ್ತೆ ಚಾಮರಾಜನಗರ
ಭಾನುವಾರ ಗುಂಡ್ಲುಪೇಟೆಯಿಂದ ಚಾಮರಾಜನಗರದವರೆಗೆ ಪಾದಯಾತ್ರೆ ಆರಂಭಿಸಿದ ಪ್ರತಿಭಟನಾಕಾರರು, ಸೋಮವಾರ ಜಿಲ್ಲಾ ಕೇಂದ್ರ ತಲುಪಿ ನಗರದ ಭುವನೇಶ್ವರಿ ವೃತ್ತದಲ್ಲಿ ಮಾನವ ಸರಪಳಿ ಮಾಡಿ, ನಂತರ ಸರ್ಕಾರದ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕೆಲಕಾಲ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಭೀಕರ ಬರಗಾಲದಿಂದ ಜಿಲ್ಲೆಯ ರೈತರು ಮತ್ತು ಜಾನುವಾರುಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು, ಜಿಲ್ಲೆಯ ಎಲ್ಲಾ ಕೆರೆಗಳನ್ನು ಶೀಘ್ರವಾಗಿ ತುಂಬಿಸಬೇಕು, ಜಾನುವಾರುಗಳಿಗೆ ಉಚಿತ ಮೇವು ಒದಗಿಸಬೇಕು, ಬರಗಾಲದ ಹಿನ್ನೆಲೆಯಲ್ಲಿ ರೈತರ ಸಹಕಾರ ಸಂಘಗಳು, ರಾಷ್ಟ್ರೀಕೃತ ಬ್ಯಾಂಕ್ಗಳು, ಮೈಕ್ರೋ ಫೈನಾನ್ಸ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಆಲಂಬೂರು ಏತ ನೀರಾವರಿ ಯೋಜನೆಯ ಮೂಲಕ ಹುತ್ತೂರು ಹಾಗೂ ವಡ್ಡಗೆರೆ ಕೆರೆಗಳಿಗೆ ನೀರು ಹರಿಸಿ ಗುಂಡ್ಲುಪೇಟೆ ತಾಲೂಕಿನ ಕೆರೆಗಳನ್ನು ತುಂಬಿಸಬೇಕು. ಇದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುವುದರ ಜೊತೆಗೆ ಅಂತರ್ಜಲ ಮಟ್ಟವೂ ಹೆಚ್ಚಾಗಿ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಕೊಳ್ಳೇಗಾಲ ಹಾಗೂ ಹನೂರು ತಾಲೂಕುಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ಗುಂಡ್ಲುಪೇಟೆ ತಾಲೂಕಿನ ೧೧೦ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿಗಳು ಇನ್ನೂ ಆರಂಭವಾಗದಿರುವ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಗೌಡೇಗೌಡ, ಮನುಸೊಮಯ್ಯ, ವಿಜಯೇಂದ್ರ, ಶಿರಮಳ್ಳಿ ಸಿದ್ದಪ್ಪ, ಮಹೇಶ್, ನಟರಾಜು, ಮಾಧು, ಶಿವಕುಮಾರ್, ದಿಲೀಪ್, ಬಸವೇಶ, ಮಹದೇವಪ್ಪ, ಲೋಕೇಶ್, ರತ್ನಮ್ಮ, ಗೌರಮ್ಮ ಇತರರು ಭಾಗವಹಿಸಿದ್ದರು.