ಕುಷ್ಟಗಿ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಾದ್ಯಂತ ಬರದ ಛಾಯೆ ಆವರಿಸಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಸಮಗ್ರ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತಪರ ಹೋರಾಟ ಸಂಘ ಮೈಸೂರು ಜಿಲ್ಲೆ ಹಾಗೂ ತಾಲೂಕು ಘಟಕದಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸಬೇಕಿದ್ದು, ತಕ್ಷಣವೇ ಬೆಳೆ ಹಾನಿ ಸಮೀಕ್ಷೆ ಆರಂಭಿಸಿ ವೈಜ್ಞಾನಿಕ ಮಾನದಂಡದಂತೆ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.
ಕೊಪ್ಪಳ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಬೆಳೆ ವಿಮೆ ಪರಿಹಾರ ಶೀಘ್ರವಾಗಿ ರೈತರಿಗೆ ತಲುಪಿಸಬೇಕು. ಪ್ರತಿ ಗ್ರಾಪಂನಲ್ಲಿ ಗೋಶಾಲೆ ಆರಂಭಿಸಿ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು.ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಿ ಗುಳೆ ಹೋಗುವುದನ್ನು ತಡೆಯಲು ಸರ್ಕಾರ ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹನಮೇಶ ಶಾಖಾಪೂರು, ಜಿಲ್ಲಾ ಕಾರ್ಯಾಧ್ಯಕ್ಷ ಹೊನ್ನಪ್ಪ ತಳವಾರ, ತಾಲೂಕು ಗೌರವಾಧ್ಯಕ್ಷ ವೀರೇಶ ನಂದಿಹಾಳ, ತಾಲೂಕಾಧ್ಯಕ್ಷ ಹನುಮಗೌಡ ಹಿರೇಮನಿ, ಉಪಾಧ್ಯಕ್ಷ ಚಂದ್ರು ಪಾಟೀಲ, ಮುಖಂಡ ಸಣ್ಣ ಈರಪ್ಪ ರಾಠೋಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.