ಹೆಣ್ಣು ಶಿಶುವಿನ ಜನನ ಪ್ರಮಾಣ ಕ್ಷೀಣ : ಡಿಸಿ ಮೀನಾ ನಾಗರಾಜ್ ಆತಂಕ

KannadaprabhaNewsNetwork |  
Published : Jan 06, 2024, 02:00 AM IST
ಚಿಕ್ಕಮಗಳೂರಿನ ಐಎಂಎ ಕಟ್ಟಡದಲ್ಲಿ ನಡೆದ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಹಾಗೂ ಕೆ.ಪಿ.ಎಂ.ಇ ಕಾಯಿದೆಗಳ ಕುರಿತ ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಉದ್ಘಾಟಿಸಿದರು. ಡಿಎಚ್‌ಓ ಡಾ. ಅಶ್ವಥ್‌ಬಾಬು ಇದ್ದರು. | Kannada Prabha

ಸಾರಾಂಶ

ಭಾರತೀಯ ವೈದ್ಯಕೀಯ ಸಂಘದ ಕಟ್ಟಡದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಜಿಲ್ಲೆಯಲ್ಲಿ ಹೆಣ್ಣುಮಕ್ಕಳ ಜನನ ಪ್ರಮಾಣದಲ್ಲಿ ಕ್ಷೀಣವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ, ಈ ಬಗ್ಗೆ ಎಲ್ಲಾ ವೈದ್ಯರು ಗಂಭೀರವಾಗಿ ಚಿಂತಿಸಿ ಆತ್ಮ ಸಾಕ್ಷಿಯಾಗಿ ಕರ್ತವ್ಯ ನಿರ್ವಹಿಸಬೇಕೆಂದು ಕರೆ ನೀಡಿದರು.

- ವೈದ್ಯರು ಲಿಂಗ ತಾರತಮ್ಯಕ್ಕೆ ಅವಕಾಶ ನೀಡಬಾರದು । ಪಿಸಿ- ಪಿಎನ್ ಡಿಟಿ ಹಾಗೂ ಕೆಪಿಎಂಇ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರ,

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯಲ್ಲಿ ಹೆಣ್ಣುಮಕ್ಕಳ ಜನನ ಪ್ರಮಾಣದಲ್ಲಿ ಕ್ಷೀಣವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್, ಈ ಬಗ್ಗೆ ಎಲ್ಲಾ ವೈದ್ಯರು ಗಂಭೀರವಾಗಿ ಚಿಂತಿಸಿ ಆತ್ಮ ಸಾಕ್ಷಿಯಾಗಿ ಕರ್ತವ್ಯ ನಿರ್ವಹಿಸಬೇಕೆಂದು ಕರೆ ನೀಡಿದರು.

ಭಾರತೀಯ ವೈದ್ಯಕೀಯ ಸಂಘದ ಕಟ್ಟಡದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಏರ್ಪಡಿಸಿದ್ದ ಪಿಸಿ ಮತ್ತು ಪಿಎನ್.ಡಿಟಿ ಹಾಗೂ ಕೆಪಿಎಂಇ ಕಾಯ್ದೆಗಳ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕಳೆದ 10 ವರ್ಷಗಳ ಸರಾಸರಿ ಜನನ ಪ್ರಮಾಣ ಗಮನಿಸಿದರೆ ಹೆಣ್ಣು ಹಾಗೂ ಗಂಡು ಮಕ್ಕಳ ಜನನ ಪ್ರಮಾಣದ ಅನುಪಾತದಲ್ಲಿ ಹೆಣ್ಣು ಮಕ್ಕಳ ಜನನ ಕಡಿಮೆಯಾಗುತ್ತಿದೆ. ಈ ಬಗ್ಗೆ ಆತಂಕ ಪಡು ವಂತಾಗಿದೆ. ಸ್ವಾಭಾವಿಕವಾಗಿ ಗಂಡು ಮಕ್ಕಳ ಜನನ ಪ್ರಮಾಣ ಹೆಚ್ಚಾದರೂ ಚಿಂತೆ ಇಲ್ಲ ಆದರೆ ಹೆಣ್ಣು ಮಕ್ಕಳ ಜನನ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಬಗ್ಗೆ ಚಿಂತನೆ ನಡೆಸಬೇಕಾಗಿದೆ ಎಂದು ಹೇಳಿದರು.

ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಪ್ರಕರಣಗಳ ಬಗ್ಗೆ ಪ್ರಸ್ತಾಪಿಸಿದ ಜಿಲ್ಲಾಧಿಕಾರಿಗಳು, ಈ ಜಿಲ್ಲೆಯಲ್ಲಿ ಅಂತಹ ಪ್ರಕರಣಗಳು ನಡೆದಿಲ್ಲವಾದರೂ ಕಳಸ, ಕಡೂರು, ತರೀಕೆರೆ, ಚಿಕ್ಕಮಗಳೂರು ತಾಲೂಕಿನಲ್ಲಿ ಸರಾಸರಿ 10 ವರ್ಷದ ಅವಧಿಯಲ್ಲಿ ಹೆಣ್ಣು ಶಿಶುಗಳ ಜನನ ಪ್ರಮಾಣ ಕಡಿಮೆ ಇದೆ. ಇದರ ಕಾರಣ ಹುಡುಕಬೇಕಾಗಿದೆ. ವೈದ್ಯರು ಪ್ರತ್ಯಕ್ಷ ದೇವರು ಎಂಬ ಭಾವನೆ ಇದ್ದು, ಲಿಂಗ ತಾರತಮ್ಯಕ್ಕೆ ಅವಕಾಶ ನೀಡದಂತೆ ಮನಸ್ಸಾಕ್ಷಿಯಿಂದ ಕಾರ್ಯ ನಿರ್ವಹಿಸುವಂತೆ ಕಿವಿಮಾತು ಹೇಳಿದರು.

ಲಿಂಗ ಪತ್ತೆ ಬಗ್ಗೆ ಅಪರಾಧ ಕಾನೂನು ಜಾರಿಯಲ್ಲಿದೆ. ಇದರ ಅನುಷ್ಠಾನ ಕಟ್ಟುನಿಟ್ಟಾಗಿ ಪಾಲನೆ ಯಾಗಬೇಕಾಗಿದೆ. ಸರ್ಕಾರಿ ಆಸ್ಪತ್ರೆ ವೈದ್ಯರು ಈ ನಿಯಮ ಪಾಲಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳವರು ಸಹ ಸರ್ಕಾರಿ ವೈದ್ಯರೊಂದಿಗೆ ಸಹಕರಿಸುವ ಮೂಲಕ ಲಿಂಗ ತಾರತಮ್ಯಕ್ಕೆ ಅವಕಾಶವಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.

ಎಲ್ಲಾ ಕ್ಷೇತ್ರಗಳಲ್ಲೂ ಜಿಲ್ಲೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆಯಾದರೂ ಹೆಣ್ಣು ಮಕ್ಕಳ ಜನನ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವುದು ಆತಂಕಕ್ಕೀಡು ಮಾಡಿರುವ ವಿಷಯ. ಇದಕ್ಕೆ ಕಾರಣ ಹುಡುಕುವ ಜೊತೆಗೆ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಪ್ರಕರಣ ನಡೆಯದಂತೆ ನಿಗಾ ವಹಿಸಬೇಕೆಂದು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಯಾಗಾರದಲ್ಲಿ ಲಿಂಗಪತ್ತೆ ಮತ್ತು ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಕಾನೂನು ಹಾಗೂ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್‌ಬಾಬು, ಪ್ರತೀ 3 ವರ್ಷಕ್ಕೊಮ್ಮೆ ಸರ್ಕಾರ ಜಿಲ್ಲಾ ಮಟ್ಟದ ಸಲಹಾ ಸಮಿತಿ, ತಪಾಸಣಾ ಹಾಗೂ ಮೇಲ್ವಿಚಾರಣೆ ಎಂಬ 2 ಪ್ರತ್ಯೇಕ ಸಮಿತಿ ರಚಿಸಿ, ಭ್ರೂಣ ಮತ್ತು ಲಿಂಗಪತ್ತೆ ಕುರಿತಂತೆ ಜನರಿಗೆ ಅರಿವು ಮೂಡಿಸುವ ಕಾರ್ಯ ನಿರ್ವಹಿಸುತ್ತಿದೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ ಡಾ. ಸಂತೋಷ್ ನೇತಾ ಹಾಗೂ ಡಾ. ಅನುರಾಧ ಪ್ಯಾಟ್ರಿಕ್ ನೇತೃತ್ವದಲ್ಲಿ ವಕೀಲರು, ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡಂತೆ ಜಿಲ್ಲಾ ಸಲಹಾ ಸಮಿತಿ ರಚಿಸಿದ್ದು, ಈ ಸಮಿತಿ ಆಗಿಂದಾಗ್ಗೆ ಲಿಂಗಪತ್ತೆ ಹಾಗೂ ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡುತ್ತದೆ ಎಂದು ಮಾಹಿತಿ ನೀಡಿದರು.

ಅದೇ ರೀತಿ ಜಿಲ್ಲಾ ಮಟ್ಟದ ತಪಾಸಣಾ ಮತ್ತು ನಿರ್ವಹಣಾ ಸಮಿತಿಗೆ ಡಾ. ವಿಜಯಲಕ್ಷ್ಮಿ ನೇತೃತ್ವದಲ್ಲಿ ಖಾಸಗಿ ವೈದ್ಯರು ಸ್ಕ್ಯಾನಿಂಗ್ ಸೆಂಟರ್‌ಗಳ ಮಾಲೀಕರು, ಕಾನೂನು ಸಲಹೆಗಾರರನ್ನೊಳಗೊಂಡಂತೆ ಸಮಿತಿ ರಚಿಸಿದ್ದು ಈ ಸಮಿತಿ ಲಿಂಗಪತ್ತೆ ಹಾಗೂ ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ನಿರಂತರವಾಗಿ ತಪಾಸಣೆ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡುತ್ತದೆ ಎಂದು ಹೇಳಿದರು.

ಲಿಂಗಪತ್ತೆ ಅಪರಾಧ ಕಾಯಿದೆ ಅನ್ವಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ವಿದ್ದು ಅಪರಾಧ ಎಸಗುವ ಸ್ಕ್ಯಾನಿಂಗ್ ಸೆಂಟರ್ ಅಥವಾ ವೈದ್ಯರ ಮೇಲೆ ನೇರ ಕ್ರಮ ಕೈಗೊಳ್ಳುವ ಅಧಿಕಾರವಿದೆ ಎಂದು ತಿಳಿಸಿದರು.

ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳಾಗಿ ಡಾ. ಸಂತೋಷ್ ನೇತಾ, ಡಾ. ಅನುರಾಧ ಪ್ಯಾಟ್ರಿಕ್, ಡಾ. ವಿನಯ್, ವಕೀಲ ಪ್ರಕಾಶ್, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜೆ. ಮಂಜೇಗೌಡ ಸರ್ಕಾರೇತರ ಸಂಸ್ಥೆಗಳಿಂದ ಪ್ರವೀಣ್, ರೋಟರಿ ರಘುನಂದನ್, ಮಹಿಳಾ ಪ್ರತಿನಿಧಿಯಾಗಿ ಕಾವ್ಯ ಸಂತೋಷ್ ನೇಮಕಗೊಂಡಿದ್ದಾರೆಂದು ಹೇಳಿದರು.5 ಕೆಸಿಕೆಎಂ 1

ಚಿಕ್ಕಮಗಳೂರಿನ ಐಎಂಎ ಕಟ್ಟಡದಲ್ಲಿ ನಡೆದ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಹಾಗೂ ಕೆ.ಪಿ.ಎಂ.ಇ ಕಾಯಿದೆಗಳ ಕುರಿತ ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಉದ್ಘಾಟಿಸಿದರು. ಡಿಎಚ್‌ಒ ಡಾ. ಅಶ್ವಥ್‌ ಬಾಬು ಇದ್ದರು.

PREV

Recommended Stories

ಶಿವಯೋಗಿ ಸೊಸೈಟಿಗೆ 20.97 ಲಕ್ಷ ಲಾಭ
ಯುವಜನತೆಗೆ ರಕ್ತದಾನದ ಮಹತ್ವ ತಿಳಿಸಿಕೊಡಿ