ಕನ್ನಡಪ್ರಭ ವಾರ್ತೆ ಮದ್ದೂರುಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರ ವಿರುದ್ಧ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮಂಗಳವಾರ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪರಿಶಿಷ್ಟ ಜಾತಿ ಸಮುದಾಯ ಜನರು ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದರೆ ಅದರ ಸ್ಥಳ ವರದಿಯನ್ನು ಯಾವುದೋ ಒಂದು ಸ್ಥಳದಲ್ಲಿ ಕುಳಿತು ಬರೆದು ತಪ್ಪು ಮಾಹಿತಿ ನೀಡಿ ಆ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಸಮುದಾಯ ಜನರಿಗೆ ತೊಂದರೆ ನೀಡುತ್ತಿದ್ದಾರೆ. ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ವರದಿ ನೀಡಿ ಶಿಸ್ತುಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಕೆ.ಎಸ್.ಸೋಮಶೇಖರ್ ಅವರಿಗೆ ಪ್ರತಿಭಟನಕಾರರು ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಶ್ರೀನಿವಾಸ, ತಾಲೂಕು ಸಂಚಾಲಕ ಪ್ರಕಾಶ, ವಿಭಾಗಿಯ ಸಂಚಾಲಕ ಶಿವರಾಜ್ ಮರಳಿಗ, ಜಿಲ್ಲಾ ಮತ್ತು ತಾಲೂಕು ಸಂಘಟನಾ ಸಂಚಾಲಕರಾದ ಗುರುಲಿಂಗಯ್ಯ ಶಂಕರ್, ತಿಮ್ಮೇಶ, ರಮೇಶ, ಮಹೇಶ, ಮರಳಿಗ ಸುರೇಶ, ಹಳ್ಳಿಕೆರೆ ರವಿ, ಗೀತಾ, ಸವಿತಾ ಹಲವರು ಪಾಲ್ಗೊಂಡಿದ್ದರು.