ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಉಡುಪಿ ಜಿಲ್ಲೆಗೆ ಈಗಾಗಲೇ ಹೊಸದಾಗಿ ಎರಡು ಹಾಸ್ಟೆಲ್ಗಳು ಮಂಜೂರಾಗಿದ್ದು, ಹೆಚ್ಚುವರಿ ಪ್ರತಿ ತಾಲೂಕುಗಳಲ್ಲಿ ಹಾಸ್ಟೆಲ್ಗಳನ್ನು ತೆರೆಯಲು ಸಭೆಯಲ್ಲಿ ಶಾಸಕರು ಸಚಿವರಿಗೆ ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಜಿಲ್ಲೆಯಲ್ಲಿ ವಾಡಿಕೆಗಿಂತ ಶೇಕಡ 17 ಹೆಚ್ಚು ಮಳೆಯಾಗಿದೆ. ಬೆಳೆ, ಆಸ್ತಿ ಮತ್ತು ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಹಾನಿವುಂಟಾಗಿದೆ. ಈ ಸಂಬಂಧ ಕಾಮಗಾರಿಗಳು ನಡೆಯುತ್ತಿದ್ದು, ಅನುದಾನದ ಕೊರತೆ ಇದೆ. ಮುಂದಿನ ಅಧಿವೇಶನದ ವೇಳೆ ಮುಖ್ಯಮಂತ್ರಿಗಳ ಬಳಿ ಜಿಲ್ಲೆಯ ಶಾಸಕರೊಂದಿಗೆ ನಿಯೋಗ ಕೊಂಡೊಯ್ದು ಅನುದಾನ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಅವರು ಶನಿವಾರ ಉಡುಪಿ ಜಿಲ್ಲಾ ಪಂಚಾಯಿತಿಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ 666 ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿದ್ದು, ಹಲಗೆ ಅಳವಡಿಸುವ ಕಾರ್ಯ ಶೇ.50ರಷ್ಟು ಪೂರ್ಣಗೊಂಡಿದೆ, ಡಿಸೆಂಬರ್ 20ರೊಳಗೆ ಈ ಕಾರ್ಯ ಪೂರ್ಣಗೊಳಿಸಬೇಕು ಎಂದು ಸಚಿವರು ಸೂಚನೆ ನೀಡಿದರು. ಕಾಡುಗಳ ತಪ್ಪಲಲ್ಲಿ ವಾಸಿಸುವ ಮಲೆಕುಡಿಯ ಕೊರಗ ಸಮುದಾಯದವರಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಅಗತ್ಯವಿರುವ ರೇಷನ್ ಕಾರ್ಡ್ಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಸಚಿವೆ ಖಡಕ್ ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಉಡುಪಿ ಜಿಲ್ಲೆಗೆ ಈಗಾಗಲೇ ಹೊಸದಾಗಿ ಎರಡು ಹಾಸ್ಟೆಲ್ಗಳು ಮಂಜೂರಾಗಿದ್ದು, ಹೆಚ್ಚುವರಿ ಪ್ರತಿ ತಾಲೂಕುಗಳಲ್ಲಿ ಹಾಸ್ಟೆಲ್ಗಳನ್ನು ತೆರೆಯಲು ಸಭೆಯಲ್ಲಿ ಶಾಸಕರು ಸಚಿವರಿಗೆ ಮನವಿ ಮಾಡಿದರು.
ಬೈಂದೂರು ತಾಲೂಕಿನಲ್ಲಿ ಸೀಫುಡ್ ಪಾರ್ಕ್ ನಿರ್ಮಾಣಕ್ಕೆ 69 ಎಕರೆ ಜಮೀನು ಮಂಜೂರಾಗಿದ್ದು, ಅಲ್ಲಿರುವ ಅಗತ್ಯ ಮರಗಳನ್ನಷ್ಟೇ ತೆರವುಗೊಳಿಸಿ, ಆದಷ್ಟು ಮರಗಳನ್ನು ಉಳಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.ಸಭೆಯಲ್ಲಿ ಶಾಸಕರಾದ ಸುನೀಲ್ ಕುಮಾರ್, ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕೆಡಿಪಿ ಸದಸ್ಯರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.