ಕನ್ನಡಪ್ರಭ ವಾರ್ತೆ ಮಂಗಳೂರು
ಆಗಸ್ಟ್ 21, 2021ರಂದು ಐಸಿಸ್ ನಂಟಿನ ಆರೋಪದಡಿ ಉಮ್ಮರ್ ಅಬ್ದುಲ್ ರೆಹಮಾನ್ ಬಂಧನವಾಗಿತ್ತು. ಯುಎಪಿಎ ಕಾಯ್ದೆಯಡಿ ರಾಷ್ಟ್ರೀಯ ತನಿಖಾ ದಳ ಬಂಧಿಸಿತ್ತು. ಈ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೋರ್ಟ್ನಲ್ಲಿ ಜಾಮೀನಿಗೆ ರೆಹಮಾನ್ ಅರ್ಜಿ ಸಲ್ಲಿಸಿದ್ದನು. ಆದರೆ ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸುದೀರ್ಘ ವಿಚಾರಣೆ ಬಳಿಕ ಪೂರಕ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ದೆಹಲಿ ಹೈ ಕೋರ್ಟ್ ಜಾಮೀನು ನೀಡಿದೆ.
ಭಯೋತ್ಪಾದಕ ಸಂಘಟನೆ ಐಸಿಸ್ ಲಿಂಕ್ ಪ್ರಕರಣದಲ್ಲಿ ಉಮ್ಮರ್ ಅಬ್ದುಲ್ ರಹಮಾನ್ಗೆ ಜಾಮೀನು ದೊರೆತಿದೆ. ಐಸಿಸ್ ಬಾವುಟ, ಕರಪತ್ರ ಮೊಬೈಲ್ನಲ್ಲಿದ್ದರೆ ಆತ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ ಎಂದು ಜಾಮೀನು ನೀಡಿದ ಹೈ ಕೋರ್ಟ್ ಹೇಳಿದೆ. ನ್ಯಾಯಪೀಠದ ಪ್ರಕಾರ, ಉಗ್ರ ಸಂಘಟನೆ ಬಗೆಗಿನ ಆಕರ್ಷಣೆಯನ್ನು ಉಗ್ರ ನಂಟು ಎನ್ನಲು ಆಗುವುದಿಲ್ಲ. ಐಸಿಸ್ ಪರ ವಿಡಿಯೋ ಡೌನ್ಲೋಡ್ ಮಾಡುವುದು, ಭಾಷಣ ಆಲಿಸುವುದನ್ನು ಯುಎಪಿಎ ಕಾಯಿದೆಯಡಿ ತರಲು ಆಗುವುದಿಲ್ಲ. ಈ ಸಾಕ್ಷ್ಯ ಬಳಸಿ ಯುಎಪಿಎ ಸೆಕ್ಷನ್ 38 ಮತ್ತು 39ರಡಿ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದಿದೆ.ಈಗಾಗಲೇ ಪ್ರಕರಣ ಸಂಬಂಧ ಹಲವು ಮಂದಿ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿದೆ.ಉಮ್ಮರ್ ಅಬ್ದುಲ್ ರೆಹಮಾನ್ ಜೊತೆಗೆ ದಿ.ಇದಿನಬ್ಬರ ಸೊಸೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂನ್ನೂ ಎನ್ಐಎ ಬಂಧಿಸಿತ್ತು. ಇದೀಗ ಉಮ್ಮರ್ ಅಬ್ದುಲ್ ರೆಹಮಾನ್ಗೆ ದೆಹಲಿ ಕೋರ್ಟ್ ಜಾಮೀನು ನೀಡಿದೆ.
ಈ ಆರೋಪಗಳ ಹಿನ್ನೆಲೆಯಲ್ಲಿ ಆರೋಪಿಗಳಾದ ದೀಪ್ತಿ ಮಾರ್ಲ, ಇದಿನಬ್ಬ ಮೊಮ್ಮಗ ಅಮ್ಮರ್ ಅಬ್ದುಲ್ ರಹಿಮಾನ್, ಮೊಹಮ್ಮದ್ ವಕಾರ್ ಲಾನ್ ಯಾನೆ ವಿಲ್ಸನ್ ಕಾಶ್ಮೀರಿ, ಮಿಜಾ ಸಿದ್ದೀಕ್, ಶಿಫಾ ಹಾರೀಸ್ ಯಾನೆ ಆಯಿಷಾ, ಒಬೈದ್ ಹಮೀದ್ ಮಟ್ಟಾ, ಮಾದೇಶ್ ಶಂಕರ್ ಯಾನೆ ಅಬ್ದುಲ್ಲಾ, ಮುಜಾಮಿಲ್ ಹಸನ್ ಭಟ್ ವಿರುದ್ಧ ಈ ದೋಷಾರೋಪಣ ಪಟ್ಟಿಯನ್ನು ಎನ್ಐಎ ಸಲ್ಲಿಕೆ ಮಾಡಿತ್ತು.