ಕುಷ್ಟಗಿ: ಸರ್ಕಾರದ ಯೋಜನೆ ಜನರಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಪಂ ಉಪಕಾರ್ಯದರ್ಶಿ ಟಿ. ಕೃಷ್ಣಮೂರ್ತಿ ಸೂಚಿಸಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ ನೀಡಿ ಕುಡಿವ ನೀರು, ಆರೋಗ್ಯ, ಶಿಕ್ಷಣ ಸೇರಿದಂತೆ ಮೂಲಭೂತ ಸೌಲಭ್ಯಕ್ಕೆ ಸಂಬಂಧಿಸಿದ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಾಪಂ ಇಒ ಅಮರೇಶ ಮಾತನಾಡಿ, ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಸರ್ಕಾರದ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಬೇಕು, ಕುಡಿವ ನೀರು, ಶಿಕ್ಷಣ, ಆರೋಗ್ಯ ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು.ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಕಾತರಕಿ ಮಾತನಾಡಿ, ಕುಷ್ಟಗಿ ಮತ್ತು ತಾವರಗೇರಾ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಹನಮಸಾಗರ ಹಾಗೂ ಹನಮನಾಳ ಭಾಗಗಳಲ್ಲಿ ಮಳೆಯ ಕೊರತೆ ಇದೆ ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಆನಂದ ಗೋಟೂರು ಮಾತನಾಡಿ, ಎರಡು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿದ್ದು, ಜನವರಿ ತಿಂಗಳಿಂದ ಇಲ್ಲಿಯವರೇಗೆ 3 ಡೆಂಘೀ ಹಾಗೂ 6 ಚಿಕಕ್ಗುನ್ಯಾ ಪ್ರಕರಣ ದಾಖಲಾಗಿದ್ದು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ ಅವರು, ಕುಷ್ಟಗಿ ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಎಮ್ಸಿಎಚ್ ಆಸ್ಪತ್ರೆ ಕಟ್ಟಡದ ಕಾಂಪೌಂಡ್ ಕಾಮಗಾರಿ ಪೂರ್ಣಗೊಂಡ ನಂತರ ಮುಂದಿನ ತಿಂಗಳಿನಿಂದ ಸೇವೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ಸಿಡಿಪಿಒ ಯಲ್ಲಮ್ಮ ಹಂಡಿ ಮಾತನಾಡಿ, ತಾಲೂಕಿನಲ್ಲಿ 403 ಅಂಗನವಾಡಿ ಕೇಂದ್ರಗಳಿದ್ದು, ಅವುಗಳಲ್ಲಿ 63 ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. 11 ಕೇಂದ್ರಗಳಿಗೆ ಸ್ವಂತ ನಿವೇಶನವೇ ಇಲ್ಲ ಎಂಬ ಮಾಹಿತಿ ನೀಡಿದರು ಇದಕ್ಕೆ ಉತ್ತರಿಸಿದ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಸರ್ಕಾರದ ಆದೇಶದಂತೆ ನಿವೇಶನ ಲಭ್ಯವಿಲ್ಲದಿದ್ದಲ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಂಗನವಾಡಿಗಳಿಗೆ ಕಲ್ಪಿಸಿಕೊಡುವ ವ್ಯವಸ್ಥೆ ಮಾಡಬೇಕಿದೆ ಎಂದು ಬಿಇಒ ಉಮಾದೇವಿ ಬಸಾಪೂರು ಹಾಗೂ ಪಿಡಿಒಗಳಿಗೆ ಸೂಕ್ತ ಸಲಹೆ ನೀಡಿದರು.