ಸಮಾಜದ ಕಟ್ಟಕಡೆಯ ವ್ಯಕ್ತಿಗೂ ‘ಗ್ಯಾರಂಟಿ’ ಯೋಜನೆ ತಲುಪಿಸಿ: ಎಚ್.ಎಂ.ರೇವಣ್ಣ

KannadaprabhaNewsNetwork |  
Published : Oct 02, 2024, 01:06 AM IST
ಪೊಟೋ: 1ಎಸ್‌ಎಂಜಿಕೆಪಿ07ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರಾಜ್ಯ ಸರ್ಕಾರ ನಡೆದಂತೆ ನುಡಿದು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಪ್ರಾಧಿಕಾರದೊಂದಿಗೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದರು.

ಇಲ್ಲಿನ ಜಿ.ಪಂ.ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯದ ಬಡ ಮತ್ತು ಮಧ್ಯಮ ವರ್ಗದವರ ಶ್ರೇಯೋಭಿವೃದ್ದಿಗಾಗಿ ಜಾರಿಗೊಳಿಸಲಾದ ಈ ಯೋಜನೆಗಳು ಹೊಸದಾದ್ರೂ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯ, ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆ ಅನುಷ್ಟಾನ ಪರಿಣಾಮಕಾರಿಯಾಗಿಸಲು ಪ್ರಾಧಿಕಾರ ರಚನೆಯಾಗಿದೆ. ಮಾನ್ಯ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ 52 ಸಾವಿರ ಕೋಟಿ ರು. ಹಣವನ್ನು ಈ ಯೋಜನೆಗಳ ಅನುಷ್ಠಾನಕ್ಕಾಗಿ ಮೀಸಲಿಟ್ಟಿದ್ದಾರೆ ಎಂದು ತಿಳಿಸಿದರು.

ನೇರವಾಗಿ ಫಲಾನುಭಿವಗಳಿಗೆ ಸೌಲಭ್ಯ ನೀಡಲಾಗುತ್ತಿದೆ. ಜಿಲ್ಲೆ, ತಾಲ್ಲೂಕುಗಳಲ್ಲಿ ಪ್ರಾಧಿಕಾರದ ಕಚೇರಿ ತೆರೆಯಲಾಗಿದೆ. ತಾಲ್ಲೂಕುಗಳಲ್ಲಿ ಇಒಗಳು ಕಚೇರಿ ಮತ್ತು ಸಿಬ್ಬಂದಿ ಹಾಗೂ ಗ್ಯಾರಂಟಿ ಯೋಜನೆಗಳ ಪ್ರಗತಿ ಮಾಹಿತಿಯನ್ನು ಅಧ್ಯಕ್ಷರಿಗೆ ನೀಡಬೇಕು. ಸರ್ಕಾರಿ ಕಾರ್ಯಕ್ರಮಗಳಿಗೆ ತಾಲ್ಲೂಕು ಸಮಿತಿ ಅಧ್ಯಕ್ಷರಿಗೆ ಆಹ್ವಾನ ನೀಡಬೇಕು. ಶಿಕಾರಿಪುರದಲ್ಲಿ ಇನ್ನೂ ಕಚೇರಿ ಲಭ್ಯವಿಲ್ಲ. ಅಧಿಕಾರಿಗಳು ಮತ್ತು ಪ್ರಾಧಿಕಾರದ ಅಧ್ಯಕ್ಷರು, ಪದಾಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು.

ಜಿ.ಪಂ ಸಿಇಓ ಎನ್.ಹೇಮಂತ್ ಮಾತನಾಡಿ, ಅನ್ನಭಾಗ್ಯ ಯೋಜನೆಯಡಿ 383374 ಕಾರ್ಡುಗಳ ನೋಂದಣಿಯಾಗಿದ್ದು, 1686787 ಸದಸ್ಯರು ಸೌಲಭ್ಯ ಪಡೆಯುತ್ತಿದ್ದಾರೆ. ತಾಂತ್ರಿಕ ಕಾರಣದಿಂದ 8066 ಜನರ ಡಿಬಿಟಿ ಬಾಕಿ ಇದೆ. ಯೋಜನೆ ಪ್ರಾರಂಭದಿಂದ 257,09,26,320 ಲಕ್ಷ ವೆಚ್ಚ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ಈವರೆಗೆ ಒಟ್ಟು 2836 ಫಲಾನುಭವಿಗಳಿಗೆ ರೂ.32856000 ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ಶಿಕಾರಿಪುರ ತಾಲೂಕು ಸಮಿತಿ ಅಧ್ಯಕ್ಷರಾದ ನಾಗರಾಜ ಗೌಡ ಮಾತನಾಡಿ, ಪಡಿತರ ಚೀಟಿಯಲ್ಲಿ ಹೊರಗಡೆ ಇರುವ ಮಕ್ಕಳ ಹೆಸರು ತೆಗೆದುಹಾಕಿ ತಂದೆ, ತಾಯಿಗೆ ಪ್ರತ್ಯೇಕ ಕಾರ್ಡು ಮಾಡಿಸಲು ಅವಕಾಶ ಮಾಡಿಕೊಡಬೇಕು ಎಂದರು. ಸದಸ್ಯರಾದ ಶಿವಾಜಿ, ಎನ್‌ಪಿಸಿಎಲ್ ಲಿಂಕ್ ತಾಂತ್ರಿಕ ತೊಂದರೆಯಿಂದ ಬಾಕಿ ಇರುವವರ ಪಟ್ಟಿಯನ್ನು ನೀಡುವಂತೆ ತಿಳಿಸಿದರು.

ಸದಸ್ಯರಾದ ಶಿವಾನಂದ್ ಮಾತನಾಡಿ, ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯುವ ವೇಳೆ ವಯಸ್ಸಾದವರ ಬಯೋಮೆಟ್ರಿಕ್ ಪಡೆಯಲು ಸಾಧ್ಯವಾಗದೇ ಪಡಿತರ ನೀಡಲಾಗುತ್ತಿಲ್ಲ್ಲ. ಇದನ್ನು ಸರಿಪಡಿಸಬೇಕು. ಹಾಗೂ ಬಡವರ ಬಿಪಿಎಲ್ ಕಾರ್ಡ್ನ್ನು ರದ್ದುಪಡಿಸಲಾಗಿದೆ ಇದನ್ನು ಸರಿಪಡಿಸಬೇಕು ಎಂದರು.

ಆಹಾರ ಇಲಾಖೆ ಉಪನಿರ್ದೇಶಕ ಅವಿನ್ ಮಾತನಾಡಿ. 1.20 ಲಕ್ಷ ರು. ಆದಾಯ ಮಿತಿ ಮೀರಿದ ಹಾಗೂ ಐಟಿ ಪಾವತಿಸಿದ 2395 ಕಾರ್ಡುದಾರರ ಕಾರ್ಡನ್ನು ರದ್ದುಪಡಿಸಲಾಗಿದೆ. ಬಯೋಮೆಟ್ರಿಕ್ ಬರದೇ ಇದ್ದರೆ ಅವರಿಗೆ ವಿನಾಯಿತಿ ನೀಡಲಾಗುತ್ತದೆ. ಹಾಗೂ ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಹಾಕಿ ಬಾಕಿ ಇರುವ 3000ಅರ್ಜಿಗಳನ್ನು ಅ.1 ರಿಂದ 10 ರೊಳಗೆ ವಿಲೇವಾರಿ ಮಾಡಲಾಗುವುದು ಎಂದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ.ಎನ್.ಹೆಗಡೆ ಮಾತನಾಡಿ, ಶಕ್ತಿ ಯೋಜನೆ ಜಾರಿಯಾದಾಗಿನಿಂದ ಕೆಎಸ್‌ಆರ್‌ಟಿಸಿ ಆದಾಯದಲ್ಲಿ ಹೆಚ್ಚಳವಾಗಿದೆ. ಪ್ರವಾಸೋದ್ಯಮ ಮತ್ತು ಉದ್ಯೋಗ ಕ್ಷೇತ್ರ ಉತ್ತೇಜನಗೊಂಡಿದೆ ಎಂದರು.

ಪ್ರಾಧಿಕಾರದ ರಾಜ್ಯ ಅಧ್ಯಕ್ಷರು ಮಾತನಾಡಿ, ಜಿಲ್ಲೆಯಲ್ಲಿ ಯುವನಿಧಿ ಯೋಜನೆ ಜಾರಿಯಾಗಿ 6 ತಿಂಗಳಾದರೂ ಕೌಶಲ್ಯಾಭಿವೃದ್ದಿ ಇಲಾಖೆಯಿಂದ ವಿದ್ಯಾರ್ಥಿ ಗಳಿಗೆ ಒಂದೂ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿಲ್ಲ. ಭತ್ಯೆ ಪಡೆದವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಅವರ ಮುಂದಿನ ಜೀವನಕ್ಕೆ ಸಹಕಾರಿಯಾಗಬೇಕು. ಉದ್ಯೋಗಾಧಿಕಾರಿ ಮತ್ತು ಕೌಶಲ್ಯಾಭಿವೃದ್ದಿ ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲ. ಯೋಜನೆಯ ಧ್ಯೇಯ ಸಾಕಾರಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ತರಬೇತಿ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಹಾಗೂ ಈ ಕುರಿತು ವರದಿ ನೀಡುವಂತೆ ಸಿಇಓ ಅವರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸಯೆ ಬಲ್ಕೀಶ್ ಬಾನು, ಸೂಡಾ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್, ಜಿ.ಪಂ.ಸಿಇಓ ಎನ್.ಹೇಮಂತ್, ಗ್ಯಾರಂಟಿ ಯೋಜನೆಗಳ ಅನುಷ್ಟಾನ ತಾಲ್ಲೂಕು ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಫಲಾನುಭವಿಗಳು ಹಾಜರಿದ್ದರು.ಎನ್‌ಪಿಸಿಎಲ್ ತಾಂತ್ರಿಕ ಸಮಸ್ಯೆ ಬಗೆಹರಿಸಿ: ಸಚಿವ ಮಧು

ಎನ್‌ಪಿಸಿಎಲ್ ಲಿಂಕ್ ಆಗದೇ ಬಾಕಿ ಇರುವ ಫಲಾನುಭವಿಗಳ ಸಮಸ್ಯೆ ಬಗೆಹರಿಸಿ ಸೌಲಭ್ಯ ನೀಡಬೇಕು. ಇಓ ಮತ್ತು ತಹಶೀಲ್ದಾರರು ನ್ಯೂನತೆಗಳನ್ನು ಪರಿಹರಿಸಲು ಕ್ರಮ ವಹಿಸಬೇಕು. ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷರು ತಾಲ್ಲೂಕುಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಹಾಗೂ ಮುಂದಿನ ಸಭೆಯೊಳಗೆ ವಯಸ್ಸಾದವರ ಬಯೋಮೆಟ್ರಿಕ್ ಸಮಸ್ಯೆಯನ್ನು ಗುರುತಿಸಿ ವಿನಾಯಿತಿ ನೀಡಿ ಅವರು ಪಡಿತರ ಪಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಮಾತನಾಡಿ ಸೂಚನೆ ನೀಡಿದರು.

ಗೃಹಲಕ್ಷ್ಮೀಯಲ್ಲೂ ಎನ್‌ಪಿಸಿಎಲ್ ತಾಂತ್ರಿಕ ಕಾರಣದಿಂದ ಹಣ ಜಮೆಯಾಗದ ಫಲಾನುಭವಿಗಳ ಸಂಖ್ಯೆಯನ್ನು ತೆಗೆದುಕೊಂಡು ಸರಿಪಡಿಸಬೇಕು. 15 ದಿನಗಳ ಒಳಗೆ ಈ ಕೆಲಸ ಆಗಬೇಕು. ಪ್ರಾಧಿಕಾರದ ಜಿಲ್ಲಾಧ್ಯಕ್ಷರು ಪ್ರತಿದಿನ ಅನುಸರಣೆ ಕೈಗೊಳ್ಳಬೇಕು ಎಂದರು. ಹಾಗೂ ಮರಣ ಹೊಂದಿದ ಫಲಾನುಭವಿಗಳಿಗೆ ಹಣ ಹೋಗದಂತೆ ಕ್ರಮ ಕೈಗೊಳ್ಳಬೇಕು. ಅಂಗನವಾಡಿ ಮತ್ತು ಸಿಡಿಪಿಓ ಗಳಿಂದ ಮರಣ ಹೊಂದಿದವರ ಮಾಹಿತಿ ಪಡೆದು ಕ್ರಮ ವಹಿಸಬೇಕು ಎಂದರು.

ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 470458 ಕುಟುಂಬಗಳು ಸೌಲಭ್ಯ ಪಡೆಯುತ್ತಿದ್ದು, ಯೋಜನೆ ಜಾರಿಯಾದ ಮೇಲೆ ಸರಾಸರಿ ಶೇ.18 ರಷ್ಟು ಬಳಕೆ ಹೆಚ್ಚಿದೆ ಎಂದರಲ್ದೆ, ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಇರುವ ತೊಂದರೆಗಳು, ಸಮಸ್ಯೆಗಳ ಕುರಿತು ಮಾಹಿತಿಯನ್ನು ತಾಲ್ಲೂಕು ಮತ್ತು ಜಿಲ್ಲಾ ಅಧ್ಯಕ್ಷರಿಗೆ ಅಧಿಕಾರಿಗಳು ನಿಯಮಿತವಾಗಿ ನೀಡಬೇಕು. ಹಾಗೂ ಅವರು ಸದರಿ ಸಮಸ್ಯೆಗಳನ್ನು ಪರಿಹರಿಸಲು ಸಹಕಾರ ನೀಡಬೇಕು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!