ಮಸ್ಕಿ ತಾಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನೆ ಸಭೆ ನಡೆಯಿತು.
ಮಸ್ಕಿ:ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೆಹಬೂಬ್ಸಾಬ್ ಮುದ್ದಾಪುರ ತಿಳಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಬುಧವಾರ ಮಾತನಾಡಿ, ತಾಲೂಕಿನಾದ್ಯಂತ ಗ್ಯಾರಂಟಿ ಯೋಜನೆಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಒಂದು ವೇಳೆ ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗಿದ್ದರೆ, ಅವರನ್ನು ಸಂಪರ್ಕಿಸಿ ಯೋಜನೆಗಳನ್ನು ತಲುಪಿಸಬೇಕು. ಈ ಕುರಿತು ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದರು.
ಸಾರಿಗೆ, ಜೆಸ್ಕಾಂ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇಲಾಖಾವಾರು ಫಲಾನುಭವಿಗಳ ವಿವರವನ್ನು ಸಭೆಗೆ ತಿಳಿಸಿದರು.
ಸಭೆಯಲ್ಲಿ ತಾಪಂ ಸಹಾಯಕ ನಿರ್ದೇಶಕ ಸೋಮನಗೌಡ ಪಾಟೀಲ್, ಸಮಿತಿ ಸದಸ್ಯರಾದ ರವಿ ಪಾಟೀಲ್, ಚನ್ನಬಸವ, ಶಂಕರಗೌಡ, ಸೋಮನಾಥ ನಾಯಕ, ಪೌಲ್ ರಾಜ್, ಸಿಬ್ಬಂದಿ ಚಂದ್ರಶೇಖರ್, ಭುವನೇಶ್ವರಿ, ನವೀನ್ ಕುಮಾರ್, ಗಿರಿಯಪ್ಪ, ಲಕ್ಷ್ಮಣ ಇತರರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.