ಆರೋಗ್ಯ ಸೇವೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಿ : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

KannadaprabhaNewsNetwork |  
Published : Sep 13, 2025, 02:05 AM IST
ಕಾಗೇರಿ ನೇತೃತ್ವದಲ್ಲಿ ಸಭೆ ನಡೆಯಿತು  | Kannada Prabha

ಸಾರಾಂಶ

ಜಿಲ್ಲೆಯಲ್ಲಿನ ಎಲ್ಲ ಜನೌಷಧಿ ಕೇಂದ್ರಗಳು ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು

ಕಾರವಾರ: ಜಿಲ್ಲೆಯಲ್ಲಿನ ಪ್ರತಿಯೊಬ್ಬರಿಗೂ ಆರೋಗ್ಯ ಇಲಾಖೆ ಮೂಲಕ ಆಯಷ್ಮಾನ್ ಆರೋಗ್ಯ ಸೇವೆಗಳು ಮತ್ತು ಹಿರಿಯ ನಾಗರಿಕರಿಗೆ ವಯೋ ವಂದನಾ ಯೋಜನೆಯ ಪ್ರಯೋಜನವನ್ನು ತಲುಪಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗರಿ ಸೂಚಿಸಿದರು.

ಅವರು ಶುಕ್ರವಾರ ಜಿಪಂ ಸಭಾಂಗಣದಲ್ಲಿ ನಡೆದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಯಷ್ಮಾನ್ ಹಾಗೂ ವಯೋ ವಂದನಾ ಯೋಜನೆಯನ್ನು ಸಮರ್ಪಕವಾಗಿ ತಲುಪಿಸಲು ಸಾಧ್ಯವಾಗದ ಬಗ್ಗೆ ತಾಂತ್ರಿಕ ಕಾರಣಗಳು ನೆಪವಾಗಬಾರದು. ಜಿಲ್ಲೆಯಲ್ಲಿ ಕ್ಷಯ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಲು ಬಾಕಿ ಇರುವ 92 ಗ್ರಾಮಗಳನ್ನು ಶೀಘ್ರದಲ್ಲಿ ಕ್ಷಯ ಮುಕ್ತ ಮಾಡುವ ಕಾರ್ಯವನ್ನು ಮುಗಿಸಬೇಕು, ನಿಕ್ಷಯ ಪೋಷಣ ಯೋಜನೆಯ ಪ್ರಗತಿಗೆ ಜಿಲ್ಲೆಯಲ್ಲಿನ ವಿವಿಧ ಸಂಸ್ಥೆಗಳ ಸಿ.ಎಸ್.ಆರ್ ಫಂಡ್ ನ ನೆರವು ಬಳಸಿಕೊಳ್ಳಿ. ಜಿಲ್ಲೆಯಲ್ಲಿನ ಎಲ್ಲ ಜನೌಷಧಿ ಕೇಂದ್ರಗಳು ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.

ಯಾವುದೇ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ಎಲ್ಲ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ ಅವರು, ಆರೋಗ್ಯ ಸೇವೆಗಳಿಗಾಗಿ ಕೇಂದ್ರ ಸರ್ಕಾರದಿಂದ ಅಧಿಕ ಮೊತ್ತದ ಅನುದಾನ ನೀಡಲಾಗುತ್ತಿದ್ದು, ಇದನ್ನು ಸಮರ್ಪಕವಾಗಿ ಬಳಸುವಂತೆ ಮತ್ತು ಕುಮಟಾದಲ್ಲಿ ಟ್ರಾಮಾ ಸೆಂಟರ್ ನ್ನು ಬೇಗ ಆರಂಭಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಬಿ.ಎಸ್.ಎನ್.ಎಲ್ ಟವರ್‌ಗಳ ನಿರ್ಮಾಣ ಮತ್ತು ಸಂಪರ್ಕ ಕಾರ್ಯದ ಕುರಿತಂತೆ ಅರಣ್ಯ ಇಲಾಖೆಯ ಮೂಲಕ ಬಿ.ಎಸ್.ಎನ್.ಎಲ್ ಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡುವಂತೆ ತಿಳಿಸಿದ ಅವರು, ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ ಸರ್ಕಾರದ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸಬೇಕು ಎಂದರು.

ಜಿಲ್ಲೆಯ ರಸ್ತೆಗಳ ದುರವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಪಾಟ್ ಹೊಲ್ ಗಳನ್ನು ತಕ್ಷಣದಿಂದ ತುಂಬಬೇಕು ಮತ್ತು ಕೆಲವು ಸಂಚಾರ ನಿಷೇಧ ಕ್ರಮಗಳಿಂದ ಅಪಘಾತಗಳು ಕಡಿಮೆಯಾಗುವ ಬದಲು ಹೆಚ್ಚಳವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು ಈ ನಿಷೇಧ ಕ್ರಮಗಳ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ , ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಮೀನುಗಾರಿಕೆಯ ಇಲಾಖೆ ಮೂಲಕ ಮೀನುಗಾರರಿಗೆ ಕೋಲ್ಡ್ ಸ್ಟೋರೇಜ್ ನಿರ್ಮಾಣ ಮಾಡುವುದರ ಮೂಲಕ ಮೀನುಗಾರರಿಗೆ ಅನುಕೂಲ ಮಾಡಿಕೊಡಬೇಕು, ಕೇಂದ್ರ ಸರ್ಕಾರದಿಂದ ಜಿಲ್ಲೆಯ 8 ಬಂದರುಗಳನ್ನು ಮೇಲ್ದರ್ಜೆಗೇರಿಸಲು ₹50 ಕೋಟಿ ಯೋಜನೆ ಇದ್ದು, ಕೂಡಲೇ ಈ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸಿದಲ್ಲಿ ಕೇಂದ್ರದಲ್ಲಿ ಶೀಘ್ರದಲ್ಲಿ ಅನುಮತಿ ನೀಡಲಾಗುವುದು, ಇನ್ಸೂಲೇಟೆಡ್ ವಾಹನಗಳ ಘಟಕ ವೆಚ್ಚ ಹೆಚ್ಚಳ ಮಾಡುವ ಕುರಿತಂತೆ ಕೇಂದ್ರದಿಂದ ಅನುಮತಿ ದೊರಕಿಸಲು ಪ್ರಯತ್ನಿಸಲಾಗುವುದು ಎಂದರು.

ಕಾರವಾರ ರೈಲ್ವೆ ನಿಲ್ದಾಣದಲ್ಲಿ ವಾಟರ್ ಸ್ಟೇಷನ್ ಮಾಡುವ ಕುರಿತು ಚರ್ಚಿಸಲಾಗಿದ್ದು, ಇದರಿಂದ ನಿಲ್ದಾಣ ಉತ್ತಮವಾದ ರೀತಿಯಲ್ಲಿ ಅಭಿವೃದ್ಧಿಯಾಗುವ ಜೊತೆಗೆ ಜಿಲ್ಲೆಯಲ್ಲಿ ರೈಲ್ವೆಯ ಹಲವು ಯೋಜನೆಗಳು ಇನ್ನಷ್ಟು ಪ್ರಗತಿಯಾಗಲಿವೆ ಎಂದರು.

ಜಿಲ್ಲೆಯಲ್ಲಿ ಎಲೆ ಚುಕ್ಕಿ ರೋಗ ತಡೆಗೆ ಕ್ರಮ ಕೈಗೊಳ್ಳಿ. ಜಿಲ್ಲೆಯ ವಿಶೇಷ ಬೆಳೆಗಳು ಮತ್ತು ಬೆಳೆಗಾರರ ಬಗ್ಗೆ ಮಾಹಿತಿ ಇಟ್ಟುಕೊಳ್ಳಿ, ಸಾವಯವ ಕೃಷಿಗೆ ಉತ್ತೇಜನ ನೀಡಬೇಕು ಸರ್ಕಾರಿ ಕಾರ್ಯಕ್ರಮಗಳಲ್ಲಿ ಇಲ್ಲಿನ ಸ್ಥಳಿಯ ಮತ್ತು ಸ್ವದೇಶೀ ಉತ್ಪನ್ನಗಳ ಬಳಕೆಗೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಎಂದ ಅವರು ಕೃಷಿ ,ತೋಟಗಾರಿಕೆ ಮತ್ತು ಪಶುಪಾಲನಾ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಪಂ ಆಡಳಿತಾಧಿಕಾರಿ ಸುಷಮಾ ಗೋಡಬೋಲೆ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ , ಜಿಲ್ಲಾ ಪೊಲೀಸ್ ವರಿಷ್ಠ ದೀಪನ್ ಮತ್ತಿತರರು ಇದ್ದರು.

ಜಲ ಜೀವನ್ ಮಿಷನ್ ಕಾಮಗಾರಿಗಳಲ್ಲಿ ವಿಳಂಬ ಮತ್ತು ಕಳಪೆ ಗುಣಮಟ್ಟದ ಕುರಿತು ದೂರುಗಳು ಬರುತ್ತಿವೆ. ಈ ಬಗ್ಗೆ ಪರಿಶೀಲಿಸುವಂತೆ ಹಾಗೂ ಗುತ್ತಿಗೆದಾರರಿಗೆ ಕಾಮಗಾರಿ ಮುಕ್ತಾಯ ಸಮಯ ನಿಗದಿಗೊಳಿಸಿ ಅವರ ವಿರುದ್ಧ ಬಿಗು ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಮುಂದಿನ ಹಂತದಲ್ಲಿ ಇನ್ನು 800 ಹಳ್ಳಿಗಳಿಗೆ ಜಲ ಜೀವನ್ ಯೋಜನೆಯ ಸಂಪರ್ಕ ನೀಡಲು ಬಾಕಿಯಿದೆ. ಇದನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಜಿಲ್ಲೆಯಲ್ಲಿ ಶರಾವತಿ ಪಂಪ್ ಸ್ಟೋರೇಜ್ ಸೇರಿದಂತೆ ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಜಿಲ್ಲೆಯ ಧಾರಣಾ ಶಕ್ತಿ ಅಧ್ಯಯನ ಮಾಡದೇ ಹೊಸ ಯೋಜನೆಗಳನ್ನು ತರಬಾರದು. ಜಿಲ್ಲೆಯ ಜನತೆ ಹಲವು ಯೋಜನೆಗಳಿಗೆ ತ್ಯಾಗ ಮಾಡಿದರೂ ಉದ್ಯೋಗ, ಪರಿಹಾರ ಸೇರಿದಂತೆ ಯಾವುದೇ ನಿರೀಕ್ಷಿತ ಪ್ರಯೋಜನವಾಗಿಲ್ಲ, ಬದಲಾಗಿ ಜಿಲ್ಲೆಯ ಪರಿಸರ ಹಾನಿಯಾಗುತ್ತಿದೆ ಎಂದು ಕಾಗೇರಿ ಕಳವಳ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ