ಕನ್ನಡಪ್ರಭ ವಾರ್ತೆ ಕೋಲಾರಗ್ಯಾರಂಟಿ ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳ ಲಾಭ ತಲುಪಿಸಲು ಪ್ರಯತ್ನಿಸುವಂತೆ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಪಂ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಬಡ ಜನರ ಏಳಿಗೆಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ಅರ್ಹ ಫಲಾನುಭವಿಗಳಿಗೆ ದೊರಕಬೇಕು, ಈ ಕುರಿತು ಸಾರ್ವಜನರಿಗೆ ಹೆಚ್ಚಿನ ಮಾಹಿತಿ ದೊರಕುವಂತಾಗಬೇಕು ಎಂದರು.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಕಚೇರಿಗಳನ್ನು ಶೀಘ್ರ ಸ್ಥಾಪಿಸಿ, ನೋಡಲ್ ಅಧಿಕಾರಿಗಳನ್ನು ನೇಮಿಸುವುದಾಗಿ ಜಿಲ್ಲಾ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಕ್ರಂ ಪಾಷ ತಿಳಿಸಿದರು.ಜಿಲ್ಲಾ ಮಟ್ಟದ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಸ್ಥಿತಿಗತಿ ಕುರಿತು ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಮಾಹಿತಿ ನೀಡುವಂತೆ ಸೂಚಿಸಿದರು. ಇದವರೆಗೂ ಜಿಲ್ಲೆಯ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ರೂ.೮೩೦.೭೪ಕೋಟಿ ಜಮೆ ಮಾಡಲಾಗಿದೆ ಎಂದರು.
ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಲತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಹಿದಾಯತ್ ಉಲ್ಲಾ ಷರೀಪ್, ಅಶ್ವಥ್ ರೆಡ್ಡಿ, ಸದಸ್ಯರಾದ ನೀಲಕಂಠ ಗೌಡ, ರಾಮಕೃಷ್ಣ ರೆಡ್ಡಿ, ಬೆಸ್ಕಾಂ ಇಂಜಿನಿಯರ್ ಶೋಭಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾರಾಯಣ ಸ್ವಾಮಿ ಇದ್ದರು. .